Bharat Jodo Yatra: ರಾಹುಲ್‌ ಯಾತ್ರೆ ಬ್ಯಾನರ್‌ ಹರಿದ ಕಿಡಿಗೇಡಿಗಳು: ಪೊಲೀಸರಿಗೆ ದೂರು

By Govindaraj SFirst Published Sep 30, 2022, 10:01 AM IST
Highlights

ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಗುಂಡ್ಲುಪೇಟೆ ಪ್ರವೇಶಿಸುವ ಹಿನ್ನೆಲೆಯಲ್ಲಿ ಯಾತ್ರೆಗೆ ಸ್ವಾಗತ ಕೋರಲು ಪಟ್ಟಣದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಬ್ಲೇಡ್‌ನಿಂದ ಹರಿದು ಹಾಕಿದ ಘಟನೆ ಬುಧವಾರ ರಾತ್ರಿ ನಡೆದಿದೆ.

ಗುಂಡ್ಲುಪೇಟೆ (ಸೆ.30): ಕಾಂಗ್ರೆಸ್‌ ವರಿಷ್ಠ ರಾಹುಲ್‌ ಗಾಂಧಿ ನೇತೃತ್ವದ ಭಾರತ ಐಕ್ಯತಾ ಯಾತ್ರೆ ಗುಂಡ್ಲುಪೇಟೆ ಪ್ರವೇಶಿಸುವ ಹಿನ್ನೆಲೆಯಲ್ಲಿ ಯಾತ್ರೆಗೆ ಸ್ವಾಗತ ಕೋರಲು ಪಟ್ಟಣದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಬ್ಲೇಡ್‌ನಿಂದ ಹರಿದು ಹಾಕಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಕಾರ್ಯಕರ್ತರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ಊಟಿ ಸರ್ಕಲ್‌ನಿಂದ ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಸೇರಿ ಇತರೆ ನಾಯಕರ 50ಕ್ಕೂ ಹೆಚ್ಚು ಫ್ಲೆಕ್ಸ್‌ ಹಾಕಲಾಗಿತ್ತು. ಈ ಫ್ಲೆಕ್ಸ್‌ಗಳನ್ನು ಬುಧವಾರ ರಾತ್ರೋರಾತ್ರಿ ಕಿಡಿಗೇಡಿಗಳು ಬ್ಲೇಡ್‌ನಿಂದ ಹರಿದು ಹಾಕಿದ್ದಾರೆ. ಈ ಸಂಬಂಧ ಕಾಂಗ್ರೆಸ್ಸಿಗರು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Bharat Jodo Yatra: ರಾಹುಲ್‌ ಪಾದಯಾತ್ರೆಗೆ ಗುಂಡ್ಲುಪೇಟೆ ಸಜ್ಜು: 30 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಪ್ರತಿಭಟನೆ: ಫ್ಲೆಕ್ಸ್‌ಗೆ ಹಾನಿ ಮಾಡಿದ ಕ್ರಮ ಖಂಡಿಸಿ ಯುವ ಕಾಂಗ್ರೆಸ್‌ ಮುಖಂಡರು ಗುಂಡ್ಲುಪೇಟೆ ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು. ಇಂಥ ಕಿಡಿಗೇಡಿ ಕೃತ್ಯ ಎಸಗಿದವರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದ್ದಲ್ಲದೆ ಆರೋಪಿಗಳನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದರು.

ಡಿಕೆಶಿ ಭೇಟಿ: ಪೊಲೀಸ್‌ ಠಾಣೆ ಮುಂದೆ ಪ್ರತಿಭಟನೆ ನಡೆಯುತ್ತಿದ್ದ ಸ್ಥಳಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಆಗಮಿಸಿ ಬೆಂಬಲ ಘೋಷಿಸಿದರು.

ಫ್ಲೆಕ್ಸ್‌ ಹರಿದಿದ್ದು ಹೇಡಿತನ-ಡಿಕೆಶಿ: ಭಾರತ ಐಕ್ಯತಾ ಯಾತ್ರೆಯನ್ನು ಕಾಂಗ್ರೆಸ್ಸಿಗರು ಕದ್ದು ಮುಚ್ಚಿ ಮಾಡುತ್ತಿಲ್ಲ. ಯಾತ್ರೆಗೆ ಸ್ವಾಗತಕೋರಿ ಹಾಕಲಾಗಿದ್ದ ಫ್ಲೆಕ್ಸ್‌ ಹರಿಯೋದು ಹೇಡಿತನ. ಇಂಥದ್ದಕ್ಕೆಲ್ಲ ನಾವು ಹೆದರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಕಿಡಿಕಾರಿದರು. ಇಂಥದ್ದನ್ನು ನಾವು ಸಾಕಷ್ಟುನೋಡಿದ್ದೇವೆ. ಈ ರಾಜ್ಯದಲ್ಲಿ ಹೇಗೆ ರಾಜಕಾರಣ ಮಾಡಬೇಕು ಎಂದು ಅವರು ಹೇಳಿಕೊಟ್ಟಿದ್ದಾರೆ. ಅವರು ಹೇಳಿಕೊಟ್ಟಿದ್ದನ್ನು ನಮಗೂ, ನಮ್ಮ ಕಾರ್ಯಕರ್ತರಿಗೂ ಮಾಡಲು ಬರುತ್ತೆ. ಫ್ಲೆಕ್ಸ್‌ ಹರಿದವರ ಮೇಲೆ ಕ್ರಮ ಕೈಗೊಳ್ಳದಿದ್ದರೆ ವಿಚಾರ ಬೇರೆ ಆಗುತ್ತದೆ. ನಾವು ಮನಸ್ಸು ಮಾಡಿದರೆ ಇಡೀ ರಾಜ್ಯದಲ್ಲಿ ಅವರು ಎಲ್ಲೂ ಕಾರ್ಯಕ್ರಮ ಮಾಡಲು ಆಗಲ್ಲ ಎಂದರು.

ಭಾರತ್‌ ಜೋಡೋ ಯಾತ್ರೆಗೆ ದೇಶ ಪ್ರೇಮಿಗಳ ಬೆಂಬಲ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಕೈಗೊಂಡಿರುವ ‘ಭಾರತ್‌ ಜೋಡೋ’ ಯಾತ್ರೆಯಲ್ಲಿ ‘ಭಾವೈಕ್ಯ ಕರ್ನಾಟಕ’ ಬ್ಯಾನರ್‌ ಅಡಿಯಲ್ಲಿ ಸಮಾನ ಮನಸ್ಕರು, ದೇಶ ಪ್ರೇಮಿಗಳು, ಸಂಘಟನೆಗಳು ಪಾಲ್ಗೊಳ್ಳಲಿವೆ ಎಂದು ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್‌ ತಿಳಿಸಿದ್ದಾರೆ.

Bharat Jodo Yatra: ಇಂದಿನಿಂದ 21 ದಿನ ಕರ್ನಾಟಕದಲ್ಲಿ ರಾಹುಲ್‌ಗಾಂಧಿ ಐಕ್ಯತಾ ಯಾತ್ರೆ

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸದುದ್ದೇಶದಿಂದ ರಾಹುಲ್‌ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್‌ ಜೋಡೋ ಯಾತ್ರೆ ಕೈಗೊಂಡಿದ್ದಾರೆ. ನಾವು ಕಾಂಗ್ರೆಸ್‌ ಪರ ಅಥವಾ ವಿರೋಧವಾಗಿಲ್ಲ. ಯಾತ್ರೆ ಸಂದರ್ಭದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದೇವೆ. ಭ್ರಷ್ಟಾಚಾರ, ಸರ್ವಾಧಿಕಾರಿ ಧೋರಣೆ ವಿರೋಧಿಸಿ ಯಾತ್ರೆಗೆ ಕೈಜೋಡಿಸುತ್ತೇವೆ ಎಂದು ತಿಳಿಸಿದರು. ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್‌ ಇದ್ದರು.

click me!