
ಮೈಸೂರು (ಸೆ.11): ಒಳ ಮೀಸಲಾತಿ ಹಂಚಿಕೆಯಲ್ಲಾಗಿರುವ ಅನ್ಯಾಯದ ವಿರುದ್ಧ ಹೋರಾಟ ಕೈ ಬಿಡುವ ಮಾತೇ ಇಲ್ಲ. ಅಲೆಮಾರಿ ಸಮುದಾಯಗಳನ್ನು ಸೇರಿಸಿಕೊಂಡು ಹೋರಾಟ ನಡೆಸಲಾಗುವುದು ಎಂದು ಸಾಮಾಜಿಕ ಹೋರಾಟಗಾರ ಬಿ.ಆರ್. ಭಾಸ್ಕರ್ ಪ್ರಸಾದ್ ಎಚ್ಚರಿಸಿದರು.
ನಗರದ ಜೆ.ಎಲ್.ಬಿ ರಸ್ತೆಯ ರೋಟರಿ ಸಭಾಂಗಣದಲ್ಲಿ ಸಾಮಾಜಿಕ ನ್ಯಾಯಪರ ವೇದಿಕೆ ಆಯೋಜಿಸಿದ್ದ ಒಳ ಮೀಸಲಾತಿಯ ಒಳಸುಳಿಗಳು ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.
ರಾಜಕೀಯ ಅಧಿಕಾರಕ್ಕಾಗಿ ಕುತ್ತಿಗೆ ಹಿಸುಕುವ ಕೆಲಸ ಮಾಡಲಾಗುತ್ತಿದೆ. ಒಳ ಮೀಸಲಾತಿ ಹಂಚಿಕೆ ಸಂಬಂಧ ಆರೋಗ್ಯ ಪೂರ್ಣ ಚರ್ಚೆ ಮಾಡುತ್ತೇವೆ. ಆದರೆ ದಾಳಿ ಮಾಡ್ತಿವಿ, ಚಪ್ಪಲಿ ಹಾರ ಹಾಕ್ತೀವಿ ಅಂದರೆ ನಾವು ಬಿಡಲ್ಲ. ಮಾದಿಗರ ಇತಿಹಾಸ ಗೊತ್ತಿಲ್ಲದೆ ಮಾತನಾಡಲಾಗುತ್ತಿದೆ. ಬಡ್ತಿಯಲ್ಲಿ ಇಲ್ಲ. ಬ್ಯಾಕ್ ಲಾಕ್ ನಲ್ಲಿ ಇಲ್ಲ. ರಾಜಕೀಯದಲ್ಲಿ ಒಳ ಮೀಸಲಾತಿ ಇಲ್ಲ ಎನ್ನುವುದು ಸರಿಯಲ್ಲ. ಆರ್ಥಿಕವಾಗಿ, ರಾಜಕೀಯವಾಗಿ ಒಳ ಮೀಸಲಾತಿ ಜಾರಿ ಅಗತ್ಯ ಎಂದರು.
ಪ.ಜಾತಿ ಒಳ ಮೀಸಲಾತಿಯಲ್ಲಿ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂದ್ರ (ಎಕೆಎಡಿಎಎ) ಕುರಿತ ಗೊಂದಲ ಪರಿಹರಿಸಿ, ಬಡ್ತಿ ಮತ್ತು ಬ್ಯಾಕ್ ಲಾಗ್ ಹುದ್ದೆಯಲ್ಲಿ ಒಳ ಮೀಸಲಾತಿ ಕಲ್ಪಿಸದಿದ್ದರೆ ಸೆ. 14 ರಿಂದ ರಾಜ್ಯವ್ಯಾಪ್ತಿ 2ನೇ ಹಂತದ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.
ವಿಚಾರ ಸಂಕಿರಣ ಉದ್ಘಾಟಿಸಿದ ಮಾಜಿ ಸಚಿವ ಕೋಟೆ ಎಂ. ಶಿವಣ್ಣ ಮಾತನಾಡಿ, ನಮ್ಮ ಹೋರಾಟ ಯಾರ ವಿರೋಧವಾಗಿಯೂ ಅಲ್ಲ. ನಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುತ್ತಿದ್ದೇವೆ. ಒಳ ಮೀಸಲಾತಿಯಲ್ಲಿ ಆದಿ ಕರ್ನಾಟಕ, ಆದಿದ್ರಾವಿಡ, ಆದಿ ಆಂದ್ರ ಕುರಿತಂತೆ ಪರಿಶೀಲನೆ ಆಗಬೇಕಿದೆ ಎಂದು ಅವರು ಒತ್ತಾಯಿಸಿದರು.
ಚಿತ್ರದುರ್ಗ ಕೋಡಿಹಳ್ಳಿ ಆದಿಜಾಂಬವ ಬೃಹನ್ಮಠದ ಶ್ರೀ ಷಡಕ್ಷರಿ ಮುನಿ ಸ್ವಾಮೀಜಿ, ಮುಖಂಡರಾದ ಕೋಡಿಹಳ್ಳಿ ಸಂತೋಷ್, ಕುಮಾರ್, ಪ್ರಕಾಶ್, ಮಂಜುನಾಥ್ ಗೋಪಾಲಪುರ, ಮರಡೀಪುರ ರವಿಕುಮಾರ್ ಮೊದಲಾದವರು ಇದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ