
ಕಾರವಾರ(ಡಿ.24): ಉತ್ತರಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಪೊಲೀಸ್ ಇಲಾಖೆಗೆ ಮುಜುಗರ ತಂದಿದ್ದ ಡ್ರಿಂಕ್ ಆ್ಯಂಡ್ ಡ್ರೈವ್ ಹಾಗೂ ಹಣ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ ಉತ್ತರಕನ್ನಡ ಎಸ್ಪಿ ದೀಪನ್ ಆದೇಶ ಹೊರಡಿಸಿದ್ದಾರೆ.
ಕೆಲವು ದಿನಗಳ ಹಿಂದೆ ಭಟ್ಕಳ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಲಿಂಗಾರೆಡ್ಡಿ ವಿರುದ್ಧ ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣ ದಾಖಲಾಗಿತ್ತು. ಈ ಕುರಿತು ನಡೆದ ಪ್ರಾಥಮಿಕ ತನಿಖೆಯಲ್ಲಿ ಅವರು ತಪ್ಪು ಮಾಡಿರುವುದು ದೃಢಪಟ್ಟಿದೆ. ಕರ್ತವ್ಯ ಲೋಪ ಹಾಗೂ ನಿಯಮ ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ದೀಪನ್ ಅವರು, ಉನ್ನತ ತನಿಖೆಗೆ ಆದೇಶಿಸಿ ಸಿಪಿಐ ಅವರನ್ನು ಅಮಾನತು ಮಾಡಿದ್ದಾರೆ.
ಸಿಪಿಐ ಮಂಜುನಾಥ್ ವಿರುದ್ಧ ಕೇವಲ ಕುಡಿದು ವಾಹನ ಚಲಾಯಿಸಿದ ಆರೋಪವಷ್ಟೇ ಅಲ್ಲದೆ, ವ್ಯಾಪಕ ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಸಾರ್ವಜನಿಕರಿಂದ ಹಣ ವಸೂಲಿ ಮಾಡುವುದು ಹಾಗೂ ಅಕ್ರಮ ದನ ಸಾಗಾಟಗಾರರಿಗೆ ಸಾಥ್ ನೀಡುತ್ತಿದ್ದ ಆರೋಪಗಳು ಇವರ ಮೇಲಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದರೂ ವರ್ತನೆಯಲ್ಲಿ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.
ದಂಡದ ಹಣ ಲಪಟಾಯಿಸಿ ಕೋರ್ಟ್ಗೆ ಅಗೌರವ
ಡ್ರಿಂಕ್ ಆ್ಯಂಡ್ ಡ್ರೈವ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ 15 ಸಾವಿರ ರೂಪಾಯಿ ದಂಡವನ್ನು ವಸೂಲಿ ಮಾಡಲಾಗಿತ್ತು. ನಿಯಮದ ಪ್ರಕಾರ ಈ ಹಣವನ್ನು ನ್ಯಾಯಾಲಯಕ್ಕೆ ಪಾವತಿಸಬೇಕಿತ್ತು. ಆದರೆ, ಆ ಹಣವನ್ನು ಕೋರ್ಟ್ಗೆ ಕಟ್ಟದೆ ಅಧಿಕಾರಿಗಳೇ ಲಪಟಾಯಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ಜುಲೈ ತಿಂಗಳಲ್ಲಿ ದಾಖಲಾದ ದೂರನ್ನು ಆಧರಿಸಿ ತನಿಖೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ.
ದೂರುದಾರರಿಗೆ ಬೆದರಿಕೆ ಹಾಕಿದ್ದ ಹೆಡ್ ಕಾನ್ಸ್ಟೆಬಲ್ ಅಮಾನತು
ಈ ಪ್ರಕರಣದಲ್ಲಿ ಸಿಪಿಐ ಮಂಜುನಾಥ್ ಅವರಿಗೆ ಸಾಥ್ ನೀಡಿದ್ದ ಭಟ್ಕಳ ಗ್ರಾಮೀಣ ಠಾಣೆಯ ಹೆಡ್ ಕಾನ್ಸ್ಟೆಬಲ್ ಅಶೋಕ ನಾಯ್ಕ್ ಅವರನ್ನೂ ಅಮಾನತು ಮಾಡಲಾಗಿದೆ. ಸಿಪಿಐ ವಿರುದ್ಧ ದೂರು ನೀಡದಂತೆ ದೂರುದಾರರಿಗೆ ಗದರಿಸಿ, ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಅಶೋಕ ನಾಯ್ಕ್ ವಿರುದ್ಧ ಈ ಶಿಸ್ತುಕ್ರಮ ಜರುಗಿಸಲಾಗಿದೆ.
ಎಸ್ಪಿ ದೀಪನ್ ಅವರ ಖಡಕ್ ಸೂಚನೆ
ಡ್ರಿಂಕ್ ಆ್ಯಂಡ್ ಡ್ರೈವ್, ಜನರಿಂದ ಅಕ್ರಮ ಹಣ ವಸೂಲಿ ಹಾಗೂ ನ್ಯಾಯಾಲಯದ ಪ್ರಕ್ರಿಯೆಗಳಿಗೆ ಅಗೌರವ ತೋರಿದ ಅಧಿಕಾರಿಗಳ ವಿರುದ್ಧದ ಪ್ರಾಥಮಿಕ ತನಿಖಾ ವರದಿಯ ಆಧಾರದ ಮೇಲೆ ಎಸ್ಪಿ ಅವರು ಈ ಕ್ರಮ ಕೈಗೊಂಡಿದ್ದಾರೆ. ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಎಸಗುವ ಸಿಬ್ಬಂದಿಗೆ ಈ ಅಮಾನತು ಆದೇಶವು ಒಂದು ಎಚ್ಚರಿಕೆಯ ಸಂದೇಶವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ