ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿನ 80 ಕೋಟಿ ರೂ. ಅನುದಾನ ದುರ್ಬಳಕೆ ಪ್ರಕರಣದ ತನಿಖೆಯನ್ನು ಮೂರು ತಿಂಗಳಲ್ಲಿ ಪೂರ್ಣಗೊಳಿಸಿ ವರದಿ ಸಲ್ಲಿಸಲು ಸಿಐಡಿಗೆ ಹೈಕೋರ್ಟ್ ನಿರ್ದೇಶಿಸಿದೆ. ನಿಗಮದ ಹಣವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಸಮರ್ಪಕ ತನಿಖೆ ನಡೆಸುವಂತೆ ನ್ಯಾಯಾಲಯವು ಸೂಚಿಸಿದೆ.
ಬೆಂಗಳೂರು (ಏ.5): ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 80 ಕೋಟಿ ರು. ಅನುದಾನ ದುರ್ಬಳಕೆ ಪ್ರಕರಣದ ಕುರಿತು ಮೂರು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ವಿಭಾಗಕ್ಕೆ (ಸಿಐಡಿ) ಹೈಕೋರ್ಟ್ ನಿರ್ದೇಶಿಸಿದೆ.
ಭೋವಿ ಅಭಿವೃದ್ಧಿ ನಿಗಮದ ಮೂಲಕ ಸರ್ಕಾರದ ಅನುದಾನ ಬಡವರಿಗೆ ಹೋಗಬೇಕಿತ್ತು. ಆದರೆ, ಆ ಹಣವನ್ನೂ ನುಂಗಿಬಿಟ್ಟರೆ ಮತ್ತೇನು ಹೇಳೋಣ? ಸರ್ಕಾರ ಸಹ ಇಂತಹ ಅವ್ಯವಹಾರ ಪ್ರಕರಣದಲ್ಲಿ ಅರ್ಧಂಬರ್ಧ ತನಿಖೆ ನಡೆಸುತ್ತದೆ. ಯಾಕೆ ಇಂಥ ತನಿಖೆ ನಡೆಸಲಾಗುತ್ತಿದೆ ಎಂಬುದೇ ಅರ್ಥವಾಗುವುದಿಲ್ಲ ಎಂದು ನ್ಯಾಯಮೂರ್ತಿಗಳು ಬೇಸರ ವ್ಯಕ್ತಪಡಿಸಿದರು.ಪ್ರಕರಣ ಸಂಬಂಧ 2022ರಲ್ಲಿ ತಮ್ಮ ವಿರುದ್ಧ ದೊಡ್ಡಬಳ್ಳಾಪುರ ಟೌನ್ ಠಾಣೆ, ಬೆಂಗಳೂರಿನ ಜಯನಗರದ ಸಿದ್ದಾಪುರ ಠಾಣೆ ಸೇರಿ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿ ಡಾ.ಬಿ.ಕೆ.ನಾಗರಾಜಪ್ಪ ಸೇರಿ ಮತ್ತಿತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಇತ್ಯರ್ಥಪಡಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಸಿಐಡಿಗೆ ಈ ನಿರ್ದೇಶನ ನೀಡಿದೆ.
ಇದನ್ನೂ ಓದಿ: ಭೋವಿ ನಿಗಮ ಹಗರಣಕೋರರಿಗೆ ಶಾಕ್, ಇಡಿ ದಾಳಿ, ದಾಖಲೆಗಳು ವಶಕ್ಕೆ!
ಅಲ್ಲದೆ, ಅರ್ಜಿದಾರರ ವಿರುದ್ಧ ಬಲವಂತದ ಕ್ರಮ ಜರುಗಿಸದಂತೆ ಈ ಹಿಂದೆ ಹೈಕೋರ್ಟ್ ಮಧ್ಯಂತರ ರಕ್ಷಣಾ ಆದೇಶ ಹೊರಡಿಸಿದೆ. ಹಾಗಾಗಿ, ಅರ್ಜಿದಾರರು ಸಂಬಂಧಪಟ್ಟ ನ್ಯಾಯಾಲಯದಿಂದ ಜಾಮೀನು ಪಡೆಯುವವರೆಗೆ ಮಧ್ಯಂತರ ರಕ್ಷಣಾ ಆದೇಶವನ್ನು ಗರಿಷ್ಠ 10 ದಿನಗಳ ಕಾಲ ಮುಂದುವರಿಸಲಾಗುತ್ತಿದೆ. ಆದರೆ, ಈ ಆದೇಶಕ್ಕೆ ಸಂಬಂಧಪಟ್ಟ ನ್ಯಾಯಾಲಯ ಬದ್ಧವಾಗಿರಬೇಕು ಎಂದರ್ಥವಲ್ಲ. ಹೈಕೋರ್ಟ್ ಆದೇಶ ಅರ್ಜಿದಾರರು ಸಂಬಂಧಪಟ್ಟ ನ್ಯಾಯಾಲಯದಿಂದ ಸೂಕ್ತ ಆದೇಶ ಪಡೆದುಕೊಳ್ಳಲು ಅವಕಾಶ ಕಲ್ಪಿಸುವುದಕ್ಕೆ ಮಾತ್ರ ಸೀಮಿತವಾಗಿರುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.ಭೋವಿ ಅಭಿವೃದ್ಧಿ ನಿಗಮವನ್ನು ನಿರ್ದಿಷ್ಟ ಉದ್ದೇಶಕ್ಕೆ ಸ್ಥಾಪಿಸಲಾಗಿದೆ. ಫಲಾನುಭವಿ ಬಡ ಜನರು ಈ ನಿಗಮದ ಮೂಲಕ ಸರ್ಕಾರದ ಅನುದಾನ ಪಡೆಯಬೇಕಿತ್ತು. ಆದರೆ ಆ ಹಣವನ್ನು ಆರೋಪಿಗಳು ನುಂಗಿಹಾಕಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಸಮರ್ಪಕವಾದ ತನಿಖೆ ನಡೆಸಬೇಕು. ದೊಡ್ಡವರ ತಲೆಗಳು ಉರುಳುತ್ತವೆ ಎಂಬ ಕಾರಣಕ್ಕೆ ಕಳಪೆ ತನಿಖೆ ನಡೆಸಬಾರದು ಎಂದು ಸಿಐಡಿ ತನಿಖಾಧಿಕಾರಿಗಳಿಗೆ ನ್ಯಾಯಮೂರ್ತಿಗಳು ಸೂಚ್ಯವಾಗಿ ಹೇಳಿದರು.
ತನಿಖೆಗೆ ಅನುಮತಿಸುವುದು ಸೂಕ್ತ:ಭೋವಿ ಸಮುದಾಯ ಜನರಿಗೆ ನಿಗಮ ಬಿಡುಗಡೆಗೊಳಿಸಲು ಉದ್ದೇಶಿಸಿದ್ದ 80 ಕೋಟಿ ರು. ಅನುದಾನ ದುರ್ಬಳಕೆ ಹಾಗೂ ವಂಚಿಸಿರುವ ಆರೋಪ ಅರ್ಜಿದಾರರ ಮೇಲಿದೆ. ಸಿಐಡಿ ತನಿಖೆ ಅಂತಿಮ ಹಂತದಲ್ಲಿದೆ. ಆರೋಪಿಯಾಗಿರುವ ಡಾ.ಬಿ.ಕೆ.ನಾಗರಾಜಪ್ಪ ಅವರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ. ಆ ನಂತರವೇ ತನಿಖೆ ಪೂರ್ಣಗೊಳ್ಳಲಿದೆ. ತನಿಖೆ ಪೂರ್ಣಗೊಳಿಸಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರದ ಹೆಚ್ಚುವರಿ ಅಭಿಯೋಜಕ ಬಿ.ಎನ್.ಜಗದೀಶ್ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಈ ವೇಳೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುವ ಹಾಗೂ ಕಾನೂನು ಪ್ರಕಾರ ತನಿಖೆ ನಡೆಸಿ ಕ್ರಮ ಜರುಗಿಸುವ ಮುಕ್ತ ಅವಕಾಶ ತನಿಖಾಧಿಕಾರಿಗಳಿಗೆ ಇರುತ್ತದೆ ಎಂದು ಪೀಠ ಆದೇಶದಲ್ಲಿ ತಿಳಿಸಿದೆ.