
ಶಿಕಾರಿಪುರ(ಫೆ.29): ಪಾಕಿಸ್ತಾನ ಪರ ಘೋಷಣೆ ಕೂಗಿದವರ ವಿರುದ್ಧ ತನಿಖೆ ನಡೆಸುವ ಅವಶ್ಯಕತೆ ಇಲ್ಲ. ಘೋಷಣೆ ಕೂಗಿದವರನ್ನು ಮೊದಲು ಒದ್ದು ಒಳಗೆ ಹಾಕಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದರು.
ಶಿಕಾರಿಪುರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ, ಘೋಷಣೆ ಕೂಗಿದವನನ್ನು ಅಲ್ಲೇ ಒದ್ದು, ಒಳಗೆ ಹಾಕುತ್ತಿದ್ದರು. ಘೋಷಣೆ ಕೂಗಿದ ಜಾಗದಲ್ಲೇ ಅಷ್ಟೊಂದು ಕ್ಯಾಮರಾಗಳಿವೆ. ಯಾರು ಕೂಗಿದ್ದಾರೆ ಎಂದು ಟಿವಿ ಮಾಧ್ಯಮಗಳು ದೃಶ್ಯಾವಳಿಗಳ ಸಹಿತ ಸುದ್ದಿ ಬಿತ್ತರಿಸಿವೆ. ಇದರಲ್ಲಿ ತನಿಖೆ ಮಾಡುವುದು ಏನಿದೆ ಎಂದು ಪ್ರಶ್ನಿಸಿದರು.
ಪಾಕ್ ಪರ ಘೋಷಣೆ ಕೂಗಿದವರು ಯಾವ ಪಕ್ಷದವರಾದ್ರೂ ಶಿಕ್ಷೆ ಆಗಬೇಕು: ಸಂತೋಷ್ ಲಾಡ್
ದೇಶದ್ರೋಹಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ಹೋರಾಟಕ್ಕೆ ಇಳಿಯಬೇಕಾ? ದೇಶದ್ರೋಹಿಗಳನ್ನು ಹಿಡಿಯಿರಿ ಅಂದ್ರೆ, ದೇಶದ್ರೋಹಿಗಳ ವಿರುದ್ಧ ದನಿ ಎತ್ತಿದವರ ವಿರುದ್ಧ ಕ್ರಮ ತೆಗೆದುಕೊಳ್ತಿರಾ? 5 ಗ್ಯಾರಂಟಿಗಳ ಜೊತೆ ದೇಶದ್ರೋಹಿಗಳನ್ನು ರಕ್ಷಣೆ ಮಾಡುವ 6ನೇ ಗ್ಯಾರಂಟಿ ಸೇರಿಸಿಕೊಂಡಿದ್ದಾರೆ. ತಪ್ಪಿತಸ್ಥರನ್ನು ನಿರಪರಾಧಿ ಎಂದು ಹೇಳುತ್ತಿರುವುದು ಖಂಡನೀಯ ಎಂದು ಹರಿಹಾಯ್ದರು.
ಈ ಕುರಿತು ಬಿಜೆಪಿ ನಿನ್ನೆಯೇ ಹೋರಾಟ ನಡೆಸಿದೆ. ನಾಸಿರ್ ಹುಸೇನ್ ನಡವಳಿಕೆಯನ್ನು ಇಡೀ ರಾಜ್ಯದ ಜನರು ಗಮನಿಸಿದ್ದಾರೆ. ಅವರು ಆಯ್ಕೆಯಾದ ಮರುಕ್ಷಣವೇ ಈ ರೀತಿ ನಡೆದಿದೆ ಎಂದರೆ, ಮುಂದೆ ಇನ್ನೇನು ಗಂಡಾಂತರ ಕಾದಿದೆಯೋ ಗೊತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಈ ರೀತಿಯ ಘಟನೆಗಳು ನಡೆಯುತ್ತಿವೆ. ಡಿಸಿಎಂ ಅವರಿಗೆ ಕ್ಲೀನ್ ಚಿಟ್ ನೀಡುವುದು, ಗೃಹಮಂತ್ರಿ ಏನು ಆಗೇ ಇಲ್ಲ ಎಂಬಂತೆ ವರ್ತಿಸುತ್ತಿರುವುದು ಸರಿಯಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ಇದು ರಾಜ್ಯದ ಜನರು ತಲೆತಗ್ಗಿಸುವ ಕೆಲಸ ಎಂದು ಟೀಕಿಸಿದರು.
ಅಯೋಗ್ಯರಿಗೆ ಉತ್ತರಿಸಲ್ಲ:
ಪ್ರಕಾಶ್ ರೈ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ವೈ.ವಿಜಯೇಂದ್ರ, ಯಾರೋ ಒಬ್ಬ ಅಯೋಗ್ಯ ಮಾತಾಡ್ತಾರೆ ಅಂತಾ ಅವರಿಗೆ ಉತ್ತರ ಕೊಡುವ ಅಗತ್ಯವಿಲ್ಲ. ಮೋದಿಯವರನ್ನು ದೇಶದ ಎಲ್ಲಾ ವರ್ಗದ ಜನರು ಒಪ್ಪಿದ್ದಾರೆ. ದೇಶದ ಪ್ರಧಾನಿಯಾಗಿ ಮತ್ತೊಮ್ಮೆ ಮೋದಿಯವರೇ ಆಯ್ಕೆ ಆಗಬೇಕು ಎಂದು ಜನರು ಬಯಸಿದ್ದಾರೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಕೂಡ ಅದೇ ಅಭಿಲಾಷೆ ವ್ಯಕ್ತಪಡಿಸಿದ್ದಾರೆ. 400ಕ್ಕೂ ಹೆಚ್ಚು ಸೀಟು ಗೆದ್ದು ಮೋದಿ ಪ್ರಧಾನಿ ಆಗ್ತಾರೆ. ದೇಶದ ಅಭಿವೃದ್ಧಿ ದೃಷ್ಟಿಯಿಂದ ಮೋದಿಯವರೇ ಪ್ರಧಾನಿ ಆಗುತ್ತಾರೆ. ಉಡಾಫೆಯಾಗಿ ಮಾತನಾಡುವವರಿಗೆ ದೇಶದ ಜನರೇ ಉತ್ತರಿಸುತ್ತಾರೆ ಎಂದು ಕುಟುಕಿದರು.
ಶಕ್ತಿಸೌಧದಲ್ಲೇ ಪಾಕಿಸ್ತಾನ ಪರ ಘೋಷಣೆ! ಸ್ವಯಂಪ್ರೇರಿತ ಕೇಸ್ ದಾಖಲಿಸಿದ ವಿಧಾನಸೌಧ ಪೊಲೀಸರು!
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಎಸ್.ಟಿ.ಸೋಮಶೇಖರ್ ಹಾಗೂ ಮತದಾನದಿಂದ ಹಿಂದೆ ಸರಿದ ಶಿವರಾಂ ಹೆಬ್ಬಾರ್ ವಿರುದ್ಧ ಕೇಂದ್ರದ ನಾಯಕರು ಕಾನೂನು ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳುತ್ತಾರೆ. ಅವರಿಗೆ ದೇವರು ಒಳ್ಳೆಯದು ಮಾಡಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಸೀಟು ಹಂಚಿಕೆ ಕುರಿತು ಮುಂದಿನ ವಾರದಲ್ಲಿ ಜೆಡಿಎಸ್ ಜೊತೆಗೆ ಚರ್ಚಿಸಿ, ಕ್ರಮ ತೆಗೆದುಕೊಳ್ಳಲಾಗುವುದು. ಮಂಡ್ಯ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆ ತೀರ್ಮಾನಿಸಲಾಗುತ್ತದೆ ಎಂದು ತಿಳಿಸಿದರು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ