Budget 2023: ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ!

By Santosh NaikFirst Published Feb 1, 2023, 11:42 AM IST
Highlights

ನಿರೀಕ್ಷೆಯಂತೆ ಚುನಾವಣೆಯ ಹಾದಿಯಲ್ಲಿರುವ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನ ಆರಂಭದಲ್ಲಿಯೇ ಜಾಕ್‌ಪಾಟ್‌ ಹೊಡೆದಿದೆ. ಬಹುನಿರೀಕ್ಷಿತ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿ ನೀಡುವುದಾಗಿ ನಿರ್ಮಲಾ ಸೀತಾರಾಮನ್‌ ಘೋಷಣೆ ಮಾಡಿದ್ದಾರೆ.
 

ನವದೆಹಲಿ (ಫೆ. 1): ಮಧ್ಯ ಕರ್ನಾಟಕದ ಪಾಲಿಗೆ ಭಾರೀ ನಿರೀಕ್ಷೆ ಮೂಡಿಸಿದ್ದ ಕೇಂದ್ರ ಬಜೆಟ್‌ ನಿರಾಸೆ ಮೂಡಿಸಲಿಲ್ಲ. ನಿರೀಕ್ಷೆಯಂತೆಯೇ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ 5300 ಕೋಟಿ ರೂಪಾಯಿ ಮೀಸಲಿಟ್ಟಿದೆ. ಚುನಾವಣೆಗೆ ಒಳಪಡುವ ಕರ್ನಾಟಕಕ್ಕೆ ಸುಸ್ಥಿರ ಸೂಕ್ಷ್ಮ ನೀರಾವರಿ ಮತ್ತು ಟ್ಯಾಂಕ್‌ಗಳನ್ನು ತುಂಬಿಸಲು ಭದ್ರಾ ಮೇಲ್ದಂಡೆ ನೀರಾವರಿ ಯೋಜನೆಗೆ ರೂ 5300 ಕೋಟಿಯನ್ನು ಅನುದಾನ ನೀಡುವುದಾಗಿ ಘೋಷಣೆ ಮಾಡಿದೆ. ಈ ಯೋಜನೆಗಾಗಿ ರಾಜ್ಯ ಸರ್ಕಾರ ಕೇಂದ್ರದಿಂದ 23 ಸಾವಿರ ಕೋಟಿ ರೂಪಾಯಿ ಬೇಡಿಕೆ ಇಟ್ಟಿತ್ತಾದರೂ, ಬಜೆಟ್‌ನಲ್ಲಿ 5300 ಕೋಟಿ ಅನುದಾನ ನೀಡಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಮತ್ತು ಇದೇ ಜಿಲ್ಲೆಗಳ 367 ಸಣ್ಣ ನೀರಾವರಿ ಕೆರೆಗಳನ್ನು ಅವುಗಳ ಸಾಮಥ್ರ್ಯದ ಶೇ. 50 ರಷ್ಟನ್ನು ತುಂಬಿಸಲು ಉದ್ದೇಶಿಸಲಾಗಿದೆ.

ಭದ್ರಾ ಮೇಲ್ದಂಡೆ ಯೋಜನೆ ಎರಡು ಹಂತದಲ್ಲಿದೆ. ಮೊದಲ ಹಂತದ ಪ್ಯಾಕೇಜ್‌ 1ರಲ್ಲಿ ತುಂಗಾ ನದಿಯಿಂದ17.40 ಟಿ.ಎಂ.ಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ನೀರು ಹರಿಸುವ, ಕಾಮಗಾರಿ ಪ್ರಗತಿಯಲ್ಲಿದೆ. ಪ್ಯಾಕೇಜ್‌ 2ರಲ್ಲಿ ಭದ್ರಾ ಜಲಾಶಯದಿಂದ29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವ, ಕಾಮಗಾರಿಗಳು ಬಹುತೇಕವಾಗಿ ಪೂರ್ಣಗೊಂಡಿದೆ.  ಪ್ಯಾಕೇಜ್‌ ಮೂರರಲ್ಲಿ ಅಜ್ಜ೦ಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ, ಕಾಮಗಾರಿ ಕೂಡ ಬಹುತೇಕ ಪೂರ್ಣವಾಗಿದೆ. ಇನ್ನು 2ನೇ ಹಂತದಲ್ಲಿ ತರೀಕೆರೆ ಏತ ನೀರಾವರಿ, ಚಿತ್ರದುರ್ಗ ಶಾಖಾ ಕಾಲುವೆ, ತುಮಕೂರು ಶಾಖಾ ಕಾಲುವೆ ಹಾಗೂ ಕೆರೆ ತುಂಬಿಸುವ ಕಾಮಗಾರಿಗಳು ಪ್ರಗತಿಯಲ್ಲಿವೆ. 

Union Budget 2023 ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆಗೆ ಕೌಂಟ್ಡೌನ್ ...

ಪ್ರಲ್ಹಾದ್‌ ಜೋಶಿ ಧನ್ಯವಾದ: ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಭದ್ರಾ ಮೇಲ್ದಂಡೆ ಯೋಜನೆಗೆ 5, 300 ಕೋಟಿ ರೂಪಾಯಿ ಅನುದಾನ ನೀಡಿದ್ದಕ್ಕಾಗಿ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು, ಕೇಂದ್ರ ವಿತ್ತ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮ್ ಅವರು ಹಾಗೂ ಜಲ ಶಕ್ತಿ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ಹೃದಯ ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತಿದ್ದೇನೆ. ಈ ಅನುದಾನವೂ ಯೋಜನೆಯ ಅನುಷ್ಠಾನಕ್ಕೆ ಬಲ ನೀಡಲಿದ್ದು, ಮಧ್ಯ ಕರ್ನಾಟಕ ಭಾಗದ ಬರಪೀಡಿತ ಪ್ರದೇಶಗಳ ನೀರಿನ ಸಮಸ್ಯೆಯನ್ನು ಬಗೆಹರಿಸಲಿದೆ ಎಂದು ಹೇಳಿದ್ದಾರೆ.

BUDGET 2023: ನಿರ್ಮಲ ಬಜೆಟ್‌ನಲ್ಲಿ ಗರಿಷ್ಠ ಬಾರಿ ಬಳಕೆ ಮಾಡಿದ ಪದ 'ಟ್ಯಾಕ್ಸ್‌'!

ಇದೇ ವೇಳೆ, ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸಲು ಮುಂದಾಗಿರುವ ಬಗ್ಗೆಯೂ ಹರ್ಷ ವ್ಯಕ್ತಪಡಿಸಿರುವ ಪ್ರಲ್ಹಾದ ಜೋಶಿಯವರು, "ದೇಶದಲ್ಲಿ ಇರುವ ಬುಡಕಟ್ಟು ಜನಾಂಗದ ಮಕ್ಕಳ ವಿದ್ಯಾಭ್ಯಾಸವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರಕಾರವು ಬಜೆಟ್ ಮಂಡನೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಏಕಲವ್ಯ ಮಾದರಿ ವಸತಿ‌ ಶಾಲೆಗಳ ಮೂಲಕ 3.5 ಲಕ್ಷ ವಿದ್ಯಾರ್ಥಿಗಳಿಗೆ ಉಪಯೋಗವಾಗುವಂತೆ 38,800 ಶಿಕ್ಷಕರನ್ನು ನೇಮಿಸುವ ಕುರಿತು ವಿತ್ತ ಸಚಿವೆ ಶ್ರೀಮತಿ ಘೋಷಿಸಿದ್ದಾರೆ. ದೇಶದ ಕಟ್ಟಕಡೆಯ ಜನರಿಗೂ ಕೂಡ ಶಿಕ್ಷಣ ಸೌಲಭ್ಯ ಒದಗಿಸಿ ಸಾಮಾನ್ಯ ಜನರ ಜೀವನವನ್ನು ಉತ್ತಮವಾಗಿಸಲು ಶ್ರಮಿಸುತ್ತಿರುವ ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರಕಾರಕ್ಕೆ ಧನ್ಯವಾದಗಳು ಎಂದಿದ್ದಾರೆ.

click me!