ಸಿಎಂ ಸಿದ್ದರಾಮಯ್ಯಗಿಂದು ಸಿಬಿಐ ಟೆನ್ಷನ್‌: ತನಿಖೆಗೆ ಹೈಕೋರ್ಟ್‌ ಆದೇಶಿಸುತ್ತಾ?

Published : Feb 07, 2025, 09:16 AM IST
ಸಿಎಂ ಸಿದ್ದರಾಮಯ್ಯಗಿಂದು ಸಿಬಿಐ ಟೆನ್ಷನ್‌: ತನಿಖೆಗೆ ಹೈಕೋರ್ಟ್‌ ಆದೇಶಿಸುತ್ತಾ?

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ. 

ಬೆಂಗಳೂರು (ಫೆ.07): ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧ ಕೇಳಿಬಂದಿರುವ ಮುಡಾ(ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿರುವ ಅರ್ಜಿ ಕುರಿತ ತೀರ್ಪನ್ನು ಹೈಕೋರ್ಟ್‌ ಶುಕ್ರವಾರ ಪ್ರಕಟಿಸಲಿದೆ. ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆಯನ್ನು 2025ರ ಜ.27ರಂದು ಪೂರ್ಣಗೊಳಿಸಿ ಕಾಯ್ದಿರಿಸಿರುವ ತೀರ್ಪನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಬೆಳಗ್ಗೆ 10.30ಕ್ಕೆ ಪ್ರಕಟಿಸಲಿದೆ.

ಈ ಹಿಂದೆಯೇ ಮುಡಾ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ತೀರ್ಮಾನಿಸಿ ಪೊಲೀಸ್‌ ತನಿಖೆಗೆ ಅನುಮತಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ, ಇದೀಗ ಯಾವ ಆದೇಶ ನೀಡಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದೆ. ಮುಡಾ ನಿವೇಶನ ಹಂಚಿಕೆ ಅಕ್ರಮದ ಪ್ರಕರಣದ ಪ್ರಾಸಿಕ್ಯೂಷನ್‌ ಮತ್ತು ಪೊಲೀಸ್‌ ತನಿಖೆಗೆ ರಾಜ್ಯಪಾಲರು ನೀಡಿದ್ದ ಆದೇಶ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕೋರ್ಟ್‌ಗೆ 2024ರ ಆ.19ರಂದು ತಕರಾರು ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ 2024ರ ಸೆ.24ರಂದು ಆದೇಶಿಸಿತ್ತು. ಈ ತೀರ್ಪಿನಲ್ಲಿ ಪ್ರಕರಣದ ತನಿಖೆ ನಡೆಯುವುದು ಅತ್ಯಗತ್ಯವಿದೆ ಎಂದು ಹೇಳಿತ್ತು. ಇದೀಗ ಸಿಬಿಐ ತನಿಖೆಗೆ ಆದೇಶಿಸಬೇಕೆಂಬ ಮನವಿ ಕುರಿತ ತೀರ್ಪು ಸಹ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ನೀಡಲಿದೆ.

ಬಿಎಸ್‌ವೈ ಅವಹೇಳನ ಬಗ್ಗೆ ಹಿರಿಯರು ಸುಮ್ಮನಿರುವುದು ಅಪರಾಧ: ಬಿ.ವೈ.ವಿಜಯೇಂದ್ರ

ಒಂದೊಮ್ಮೆ ಹೈಕೋರ್ಟ್‌ ಅರ್ಜಿ ಪುರಸ್ಕರಿಸಿ ಮುಡಾ ನಿವೇಶನ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಮತ್ತು ಕುಟುಂಬದ ಇತರೆ ಸದಸ್ಯರಿಗೆ ಸಿಬಿಐ ತನಿಖೆ ಉರುಳು ಸುತ್ತಿಕೊಳ್ಳಲಿದೆ. ಅಲ್ಲದೆ, ಈಗಾಗಲೇ ಪ್ರಕರಣದ ತನಿಖೆಯನ್ನು ಜಾರಿ ನಿರ್ದೇಶನಾಲಯ(ಇ.ಡಿ.) ಕೈಗೆತ್ತಿಕೊಂಡು ನೋಟಿಸ್‌ ಸಹ ನೀಡಿರುವುದರಿಂದ ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಮಸ್ಯೆ ಎದುರಾಗಲಿದೆ. ಹಾಗೆಯೇ, ಮುಡಾ ಪ್ರಕರಣದಲ್ಲಿ ನಡೆಸುತ್ತಿರುವ ಕಾನೂನು ಹೋರಾಟದಲ್ಲೂ ದೊಡ್ಡ ಹಿನ್ನಡೆ ಉಂಟಾಗಲಿದೆ. ಆದರೆ, ಅರ್ಜಿಯನ್ನು ತಿರಸ್ಕರಿಸಿದರೆ ಮುಖ್ಯಮಂತ್ರಿಗಳಿಗೆ ಸ್ವಲ್ಪಮಟ್ಟಿಗೆ ರಿಲೀಫ್‌ ಸಿಗಬಹುದು.

ಪ್ರಕರಣದ ಹಿನ್ನೆಲೆ: ಮೈಸೂರಿನ ದೇವನೂರು 3ನೇ ಹಂತದ ಬಡಾವಣೆ ಅಭಿವೃದ್ಧಿಗೆ ಮುಡಾ ವಶಪಡಿಸಿಕೊಂಡಿದೆ ಎನ್ನಲಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾವರ್ತಿ ಅವರಿಗೆ ಸೇರಿದ ಮೈಸೂರಿನ ಕೆಸರೆ ಗ್ರಾಮದ ಸರ್ವೇ ನಂಬರ್‌ 464ರ 3 ಎಕರೆ 16 ಗುಂಟೆ ಜಮೀನಿನ ಬದಲಿಗೆ ಸುಮಾರು 56 ಕೋಟಿ ಮೌಲ್ಯದ 14 ನಿವೇಶನಗಳನ್ನು ಅಕ್ರಮವಾಗಿ ನೀಡಲಾಗಿದೆ. ಇದರಲ್ಲಿ ಸಿದ್ದರಾಮಯ್ಯ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದು, ಅಧಿಕಾರಿಗಳ ಮೇಲೆ ಪ್ರಭಾವ ಬೀರಿದ್ದಾರೆ. ಈ ಸಂಬಂಧ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಕೋರಿ ಸ್ನೇಹಮಯಿ ಕೃಷ್ಣ ಸೇರಿ ಮೂವರು ಸಾಮಾಜಿಕ ಕಾರ್ಯಕರ್ತರು 2024ರ ಜೂನ್‌-ಜುಲೈನಲ್ಲಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರು.

ಯುಜಿಸಿ ನಿಯಮಾವಳಿ ವಾಪಸ್‌ ಪಡೆಯಿರಿ: ಸಿಎಂ ಸಿದ್ದರಾಮಯ್ಯ ಆಗ್ರಹ

ಈ ಸಂಬಂಧ ಪ್ರಕರಣದ ತನಿಖೆ/ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಆ.17ರಂದು ಆದೇಶಿಸಿದ್ದರು. ಅದನ್ನು ಪ್ರಶ್ನಿಸಿ ಮುಖ್ಯಮಂತ್ರಿಗಳು ಆ.19ರಂದು ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್‌ ಸೆ.24ರಂದು ತಿರಸ್ಕರಿಸಿತ್ತು. ಈ ಆದೇಶ ಹೊರಬಿದ್ದ ಬೆನ್ನಲ್ಲೇ ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು. ಎಫ್‌ಐಆರ್‌ ದಾಖಲಾದ ದಿನವೇ ಅಂದರೆ ಸೆ.27ರಂದು ಇಡೀ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದರ ವಿಚಾರಣೆಯನ್ನು ಜ.27ರಂದು ಪೂರ್ಣಗೊಳಿಸಿದ್ದ ನ್ಯಾ.ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ಕಾಯ್ದಿರಿಸಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್