
ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ನಡೆಯುವ ಅಕ್ರಮ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಉದ್ದೇಶದಿಂದ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ವತಿಯಿಂದ ಸ್ಥಾಪಿಸಲಾದ ಅತ್ಯಾಧುನಿಕ ಸೆಂಟ್ರಲ್ ಕಮಾಂಡ್ ಸೆಂಟರ್ ಅನ್ನು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಇಂದು ಉದ್ಘಾಟಿಸಿದರು.
ಕಾರಾಗೃಹ ಹಾಗೂ ಸುಧಾರಣಾ ಸೇವಾ ಇಲಾಖೆಯ ಪ್ರಧಾನ ಕಚೇರಿಯಲ್ಲಿ ಸ್ಥಾಪಿಸಲಾದ ಈ ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರು (ಡಿಜಿ–ಐಜಿಪಿ) ಸಲೀಂ, ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆಯ ಡಿಜಿ ಅಲೋಕ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸೆಂಟ್ರಲ್ ಕಮಾಂಡ್ ಸೆಂಟರ್ ಮೂಲಕ ರಾಜ್ಯದ 8 ಕೇಂದ್ರ ಕಾರಾಗೃಹಗಳು ಹಾಗೂ 4 ಜಿಲ್ಲಾ ಕಾರಾಗೃಹಗಳಲ್ಲಿ ಅಳವಡಿಸಲಾದ ಎಲ್ಲಾ ಸಿಸಿಟಿವಿ ಕ್ಯಾಮರಾಗಳ ನೇರ ವೀಕ್ಷಣೆ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದ ವಿವಿಧ ಭಾಗಗಳಲ್ಲಿರುವ ಜೈಲುಗಳ ಸಿಸಿಟಿವಿ ಕಂಟ್ರೋಲ್ ವ್ಯವಸ್ಥೆಯನ್ನು ಇದೀಗ ಬೆಂಗಳೂರು ಕೇಂದ್ರದಿಂದಲೇ ಒಂದೇ ಕಡೆ ಮೇಲ್ವಿಚಾರಣೆ ಮಾಡಬಹುದಾಗಿದೆ.
ಜೈಲುಗಳೊಳಗೆ ಮತ್ತು ಜೈಲು ಆವರಣದಲ್ಲಿ ಯಾರು ಒಳಗೆ ಬರುತ್ತಿದ್ದಾರೆ, ಯಾರು ಹೊರಗೆ ಹೋಗುತ್ತಿದ್ದಾರೆ, ಭೇಟಿ ನೀಡುವವರ ಮೇಲೆ ಸಮರ್ಪಕ ನಿಗಾ ವಹಿಸಲಾಗುತ್ತಿದೆಯೇ, ಅಧಿಕಾರಿಗಳು ಹಾಗೂ ಸಿಬ್ಬಂದಿ ಸರಿಯಾಗಿ ತಪಾಸಣೆ ನಡೆಸುತ್ತಿದ್ದಾರೆಯೇ ಎಂಬ ಎಲ್ಲಾ ಅಂಶಗಳನ್ನು ಒಂದೇ ಸ್ಥಳದಿಂದ ಗಮನಿಸಲು ಈ ಕಮಾಂಡ್ ಸೆಂಟರ್ ಸಹಕಾರಿಯಾಗಲಿದೆ.
ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ನಡೆಯದಂತೆ ತಡೆಯುವುದು, ಶಿಸ್ತು ಪಾಲನೆಗೆ ಉತ್ತೇಜನ ನೀಡುವುದು, ಭದ್ರತಾ ಲೋಪಗಳನ್ನು ತಕ್ಷಣವೇ ಗುರುತಿಸಿ ಸಂಬಂಧಪಟ್ಟ ಅಧಿಕಾರಿಗಳಿಗೆ ಎಚ್ಚರಿಕೆ ನೀಡುವುದು ಈ ಸೆಂಟ್ರಲ್ ಕಮಾಂಡ್ ಸೆಂಟರ್ನ ಪ್ರಮುಖ ಉದ್ದೇಶವಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳಲು ಇದು ನೆರವಾಗಲಿದೆ.
ಜೈಲು ಆಡಳಿತದಲ್ಲಿ ಪಾರದರ್ಶಕತೆ, ಭದ್ರತೆ ಹಾಗೂ ಜವಾಬ್ದಾರಿತನವನ್ನು ಹೆಚ್ಚಿಸುವ ದಿಕ್ಕಿನಲ್ಲಿ ಈ ವ್ಯವಸ್ಥೆ ಮಹತ್ವದ ಹೆಜ್ಜೆಯಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹೇಳಿದರು. ಮುಂದಿನ ದಿನಗಳಲ್ಲಿ ತಂತ್ರಜ್ಞಾನವನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಬಳಸಿಕೊಂಡು ಜೈಲು ಸುಧಾರಣಾ ಕ್ರಮಗಳನ್ನು ಬಲಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ