ರಾಜ್ಯದ ನೀರಾವಾರಿ ಯೋಜನೆಗಳಿಗೆ ಸಂಬಂಧಿಸಿ ಇತರ ರಾಜ್ಯಗಳೊಂದಿಗೆ ಒಬ್ಬೊಬ್ಬರನ್ನಾಗಿ ಕರೆಸಿ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿಕೊಡುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು (ಏ.06): ರಾಜ್ಯದ ನೀರಾವಾರಿ ಯೋಜನೆಗಳಿಗೆ ಸಂಬಂಧಿಸಿ ಇತರ ರಾಜ್ಯಗಳೊಂದಿಗೆ ಒಬ್ಬೊಬ್ಬರನ್ನಾಗಿ ಕರೆಸಿ ಮಾತುಕತೆ ನಡೆಸಿ, ಸಮಸ್ಯೆ ಬಗೆಹರಿಸಿಕೊಡುವುದಾಗಿ ಕೇಂದ್ರ ಜಲಶಕ್ತಿ ಸಚಿವರು ಭರವಸೆ ನೀಡಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಈ ಹಿಂದೆ ಘೋಷಿಸಲಾಗಿದ್ದ 5,300 ಕೋಟಿ ರು. ನೀಡುವಂತೆ ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಲಾಗಿದೆ.
ಅದಕ್ಕೆ ಅವರು, ಅನುದಾನ ನೀಡುವ ವಿಚಾರವನ್ನು ಕೇಂದ್ರ ಸಚಿವ ಸಂಪುಟದ ಮುಂದೆ ಮಂಡಿಸಲಾಗಿದೆ ಎಂದು ತಿಳಿಸಿದ್ದಾರೆ. ಹೀಗಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದ ಎಷ್ಟು ಖರ್ಚಾಗಿದೆ, ಕೇಂದ್ರ ಎಷ್ಟು ಅನುದಾನ ನೀಡಬೇಕು ಎಂಬ ವಿವರ ನೀಡಲಾಗಿದೆ ಎಂದರು. ಮೇಕೆದಾಟು, ಕಳಸಾ ಬಂಡೂರಿ, ಭದ್ರಾ ಮೇಲ್ದಂಡೆ ಯೋಜನೆಗಳ ಅವಶ್ಯಕತೆ ಹಾಗೂ ಪ್ರಗತಿ ಕುರಿತಂತೆಯೂ ಮನವರಿಕೆ ಮಾಡಲಾಗಿದೆ. ರಾಜ್ಯದ ಸಮಸ್ಯೆಗಳು ಅವರಿಗೆ ಅರ್ಥವಾಗಿದೆ. ಹೀಗಾಗಿ ಆ ವಿಚಾರದ ಕುರಿತು ಅವಶ್ಯವಿರುವ ಇತರ ರಾಜ್ಯಗಳೊಂದಿಗೆ ಮಾತುಕತೆ ನಡೆಸುವುದಾಗಿ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಗೆಜೆಟ್ ಹೊರಡಿಸಿ: ಆಲಮಟ್ಟಿ ಅಣೆಕಟ್ಟು ಎತ್ತರದ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದ್ದೇವೆ. ಕೇಂದ್ರ ಜಲಶಕ್ತಿ ಸಚಿವರು ಕೃಷ್ಣಾ ನದಿ ಜಲಾನಯನ ಪ್ರದೇಶದ ರಾಜ್ಯಗಳ ಪ್ರತಿನಿಧಿಗಳನ್ನು ಕರೆಸಿ ಅಣೆಕಟ್ಟು ಎತ್ತರ ಹೆಚ್ಚಳದ ಬಗ್ಗೆ 15 ದಿನಗಳಲ್ಲಿ ಸಭೆ ನಡೆಸಿ ಚರ್ಚಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕರ್ನಾಟಕ ಭವನ-1 ‘ಕಾವೇರಿ’ಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆಲಮಟ್ಟಿ ಜಲಾಶಯ 524 ಅಡಿ ಎತ್ತರ ಸಂಬಂಧ ಭೂಸ್ವಾಧೀನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ. ಇದನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವ ಬಗ್ಗೆಯೂ ಮನವಿ ಮಾಡಿದ್ದೇವೆ ಎಂದು ತಿಳಿಸಿದರು, ಭದ್ರಾ ಮೇಲ್ದಂಡೆ, ಮೇಕೆದಾಟು. ವಿಚಾರವನ್ನೂ ಸಚಿವರ ಗಮನಕ್ಕೆ ತರಲಾಗಿದೆ. ಕಳಸಾ ಬಂಡೂರಿ ಕಾಮಗಾರಿಗೆ ಪರಿಸರ ಇಲಾಖೆಯ ಅನುಮತಿ ಸಿಗದಿರುವ ಬಗ್ಗೆ ತಿಳಿಸಲಾಗಿದೆ ಎಂದರು.
ನನ್ನ, ಡಿಕೆಶಿ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಗೃಹ ಸಚಿವ ಪರಮೇಶ್ವರ್
ವಾರಾಹಿ ಯೋಜನೆ ಪೂರ್ಣಕ್ಕೆ ಕ್ರಮ: ಭೂಸ್ವಾಧೀನ ಪ್ರಕ್ರಿಯಲ್ಲಿನ ವಿಳಂಬ, ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆಯಿಂದ ತೀರುವಳಿ ಪಡೆಯಲು ವಿಳಂಬ ಸೇರಿದಂತೆ ವಿವಿಧ ಕಾರಣಗಳಿಂದ ವಾರಾಹಿ ಯೋಜನೆ ಪೂರ್ಣಗೊಳಿಸಲು ಆಗಿಲ್ಲ, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಕಾಂಗ್ರೆಸ್ನ ಮಂಜುನಾಥ್ ಭಂಡಾರಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯ ಎಡದಂಡೆ ಕಾಲುವೆಯಿಂದ ನೀರು ಹರಿಸಲಾಗುತ್ತಿದ್ದು, 6100 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಒದಗಿಸಲಾಗುತ್ತಿದೆ. ಬಲದಂಡೆ ಕಾಲುವೆ ಕಾಮಗಾರಿಗೆ ಸುಮಾರು 11.86 ಹೆಕ್ಟೇರ್ ಅರಣ್ಯ ಪ್ರದೇಶದ ಅಗತ್ಯವಿದೆ.