
ಬೆಂಗಳೂರು (ಏ.27): ಉಷ್ಣ ಅಲೆಯ ನಡುವೆ ಏ.30ರಿಂದ ಮೂರು ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಏ.27ರಿಂದ 29ರ ವರೆಗೆ ರಾಜ್ಯಾದ್ಯಂತ ಒಣ ಹವೆ ಇರಲಿದ್ದು, ರಾಯಚೂರು, ಯಾದಗಿರಿ, ಕಲಬುರಗಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೀದರ್, ವಿಜಯನಗರ, ಗದಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾವೇರಿ, ಮೈಸೂರು ಹಾಗೂ ಮಂಡ್ಯದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.
ಏ.30ರಿಂದ ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮೈಸೂರು ಹಾಗೂ ಚಿತ್ರದುರ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ. ಶುಕ್ರವಾರ ಬೆಳಗ್ಗೆ 8.30ಕ್ಕೆ ಹವಾಮಾನ ಇಲಾಖೆ ನೀಡಿರುವ ವರದಿ ಪ್ರಕಾರ, ಕಲಬುರಗಿಯಲ್ಲಿ ಅತಿ ಹೆಚ್ಚು 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ರಾಜ್ಯಾದ್ಯಂತ ಒಣ ಹವೆ ಇತ್ತು ಎಂದು ತಿಳಿಸಿದೆ.
ಐಟಿಯಿಂದ ಡಿಕೆಸು ಚಾಲಕನ ಮಗ-ಸೊಸೆಗೆ ಕಿರುಕುಳ: ಡಿ.ಕೆ.ಶಿವಕುಮಾರ್
ತಾಪಮಾನ ಹೆಚ್ಚಳ: ಭಾರತ ಹವಾಮಾನ ಇಲಾಖೆ (ಐಎಂಡಿ) ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ತಾಪಮಾನ ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನ ಸೂಚಿಸಿದೆ. ಪ್ರಸ್ತುತ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಕರ್ನಾಟಕದಲ್ಲಿ ಮೇ 2024ರ ಅವಧಿಯವರೆಗೆ ಬಿಸಿ ವಾತಾವರಣ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿರುತ್ತದೆ ಎಂದು ಹವಮಾನ ಇಲಾಖೆ ಸೂಚಿಸಿದೆ. ತಾಪಮಾನದ ಹೆಚ್ಚಳದಿಂದ ರಾಜ್ಯಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳ ಮೀರುವ ಸಾಧ್ಯತೆ ಇರುತ್ತದೆ ಎಂದು ಮುನ್ಸೂಚನೆ ಇದೆ. ಈ ಸಂದರ್ಭದಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಬಿಸಿಲಿನಲ್ಲಿ ಹೋಗಬಾರದು. ಅಂದರೆ, ಮಧ್ಯಾಹ್ನ 12 ರಿಂದ 3 ಗಂಟೆಯೊಳಗೆ ಹೊರಗೆ ಹೋಗಬಾರದು.
ಕಾಲಕಾಲಕ್ಕೆ ಸಾಕಷ್ಟು ನೀರು ಕುಡಿಯಬೇಕು, ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟೆಗಳನ್ನು ಧರಿಸ ಬೇಕು. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸಬೇಕು. ಹೊರಗಿನ ಉಷ್ಣತೆ ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು. (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
ಒಬಿಸಿ ಮೀಸಲು ಕಸಿಯಲು ಬಿಡಲ್ಲ: ಪ್ರಧಾನಿ ಮೋದಿ ಗ್ಯಾರಂಟಿ
ಪ್ರಯಾಣ ಮಾಡುವಾಗ ನೀರನ್ನು ಜೊತೆಯಲ್ಲಿ ಒಯ್ಯುವುದು. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ಕುಡಿಯಬಾರದು, ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸಬೇಕು. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡಬಾರದು. ಮೂರ್ಛೆ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಬೇಕು. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ಔಷಧಿಯನ್ನು ಬಳಸಬೇಕು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ