
ಬೆಂಗಳೂರು (ನ.22): ಸದ್ಯ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬಣ ರಾಜಕೀಯದೊಳಗೆ ಇದೀಗ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಬದಲಾವಣೆ ವಿಚಾರವೂ ಸೇರ್ಪಡೆಯಾಗಿದೆ.
ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದವರನ್ನೇ ಸಭಾಪತಿ ಹಾಗೂ ಉಪಸಭಾಪತಿಯಾಗಿ ಆಯ್ಕೆ ಮಾಡಲು ಮುಂದಾಗುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಬಳಿ ಆಯ್ದ ಶಾಸಕರು ಚರ್ಚಿಸಿದ್ದಾರೆ. ಆದರೆ ಈ ವಿಷಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಣ ಮಾತ್ರ ಮುಗುಂ ಆಗಿದೆ.
ಡಿ.13ರಂದು ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಬೆಳಗಾವಿಯಲ್ಲಿ ಸನ್ಮಾನಿಸುವ ಕಾರ್ಯಕ್ರಮವಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಭಾಗಿಯಾಗಲಿದ್ದಾರೆ. ಸಿದ್ದರಾಮಯ್ಯ ಸೇರಿ ಅನೇಕ ಶಾಸಕರು ಹೊರಟ್ಟಿ ಅವರ ಪರವಾಗಿದ್ದಾರೆ. ಹೀಗಾಗಿ ಬೆಳಗಾವಿ ಅಧಿವೇಶನದಲ್ಲಿಯೇ ಅತ್ಯಂತ ಹಿರಿಯ ಸದಸ್ಯರಾಗಿರುವ ಅವರನ್ನು ಸಭಾಪತಿ ಸ್ಥಾನದಿಂದ ಏಕಾಏಕಿ ಕೆಳಗಿಳಿಸುವ ಸಾಧ್ಯತೆ ಕಡಿಮೆ. ಬದಲಾಗಿ ಮುಂದಿನ ವರ್ಷ ನಡೆಯಲಿರುವ ಮೊದಲ ಅಧಿವೇಶನದ ಹೊತ್ತಿಗೆ ಬದಲಾವಣೆ ಮಾಡುವ ಸಂಭವವಿದೆ. ಸಭಾಪತಿ ಸ್ಥಾನ ಬದಲಾವಣೆಗೆ ಮುಂದಾದರೆ ತಾವು ತಕ್ಷಣ ರಾಜೀನಾಮೆ ನೀಡುವುದಾಗಿ ಬಸವರಾಜ ಹೊರಟ್ಟಿ ಅವರು ಈಗಾಗಲೇ ಹಲವಾರು ಬಾರಿ ಹೇಳಿದ್ದಾರೆ.
75 ಸದಸ್ಯರನ್ನು ಹೊಂದಿರುವ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ 37, ಬಿಜೆಪಿ 29, ಜೆಡಿಎಸ್ 7 ಸದಸ್ಯರನ್ನು ಹೊಂದಿದೆ. ಪಕ್ಷೇತರ 1, ಸಭಾಪತಿ 1 ಇದ್ದಾರೆ. ಬಹುಮತ ಪಡೆಯಲು ಕಾಂಗ್ರೆಸ್ಗೆ ಒಬ್ಬ ಸದಸ್ಯರ ಬೆಂಬಲ ಬೇಕು. ಪಕ್ಷೇತರ ಸದಸ್ಯರಾಗಿರುವ ಲಖನ್ ಜಾರಕಿಹೊಳಿ ಅವರ ಬೆಂಬಲ ಪಡೆದರೆ ಸುಲಭವಾಗಿ ಸಭಾಪತಿ ಸ್ಥಾನವನ್ನು ಕಾಂಗ್ರೆಸ್ ಪಡೆಯಬಹುದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ