
ಚಿಕ್ಕಮಗಳೂರು(ಆ.9): ಚಿಕ್ಕಮಗಳೂರು ತಾಲೂಕಿನ ಆಲ್ದೂರು ಪಟ್ಟಣದ ಅಂಬೇಡ್ಕರ್ ವಸತಿ ಶಾಲೆಯಲ್ಲಿ ಶುಕ್ರವಾರ ಕಲುಷಿತ ಆಹಾರ ಸೇವನೆಯಿಂದ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಶಾಲೆಯಲ್ಲಿ ಊಟ ಸೇವಿಸಿದ ಬಳಿಕ ಮಕ್ಕಳಿಗೆ ಫುಡ್ ಪಾಯ್ಸನಿಂಗ್ ಆಗಿರುವ ಶಂಕೆ ವ್ಯಕ್ತವಾಗಿದೆ.
ಅಸ್ವಸ್ಥರಾದ ಎಲ್ಲಾ ಮಕ್ಕಳನ್ನು ಚಿಕ್ಕಮಗಳೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಯ ನಂತರ ಅವರೆಲ್ಲರೂ ಸುರಕ್ಷಿತರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ನಿನ್ನೆ ವರಮಹಾಲಕ್ಷ್ಮಿ ಹಬ್ಬದ ರಜೆ ಹಿನ್ನಲೆ ಹಾಸ್ಟೆಲ್ ಸಿಬ್ಬಂದಿ ರಜೆಯ ಮೇಲೆ ತೆರಳಿದ್ದರು ಎನ್ನಲಾಗಿದೆ. ಇದರಿಂದ ಆಹಾರ ತಯಾರಿಕೆಯಲ್ಲಿ ಸೂಕ್ತ ನಿಗಾ ವಹಿಸದಿರುವುದೇ ಈ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಶಾಲೆಯ ಪ್ರಾಂಶುಪಾಲರು ಹಾಗೂ ವಾರ್ಡನ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ದಲಿತ ಸಂಘಟನೆಗಳು ಆಗ್ರಹಿಸಿವೆ. ಜಿಲ್ಲಾ ಆಸ್ಪತ್ರೆಯ ವೈದ್ಯರು ಮಕ್ಕಳಿಗೆ ತಕ್ಷಣದ ಚಿಕಿತ್ಸೆ ಒದಗಿಸಿದ್ದು, ಮಕ್ಕಳು ಚೇತರಿಸಿಕೊಂಡಿದ್ದಾರೆ. ಆದರೆ, ಈ ಘಟನೆಯಿಂದ ವಸತಿ ಶಾಲೆಗಳಲ್ಲಿ ಆಹಾರದ ಗುಣಮಟ್ಟ ಮತ್ತು ಸುರಕ್ಷತೆಯ ಕುರಿತು ಗಂಭೀರ ಪ್ರಶ್ನೆಗಳು ಎದ್ದಿವೆ. ಜಿಲ್ಲಾಡಳಿತವು ಈ ಬಗ್ಗೆ ವಿಚಾರಣೆ ನಡೆಸಿ ನಿರ್ಲಕ್ಷ್ಯವಹಿಸಿದ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ