
ಚಿತ್ರದುರ್ಗ, (ಆಗಸ್ಟ್.29): ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠ ಸ್ವಾಮೀಜಿ ಬಂಧನದಿಂದ ಪಾರಾಗಲು ಕೋರ್ಟ್ ಮೊರೆ ಹೋಗಿದ್ದಾರೆ.
ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವರಾತ್ರಿ ಮುರುಘಾ ಶರಣರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ತಮ್ಮ ವಕೀಲರ ಮೂಲಕ ಚಿತ್ರದುರ್ಗದ 2ನೇ ಸೆಷನ್ ನ್ಯಾಯಾಲಯದಲ್ಲಿ ಇಂದು(ಸೋಮವಾರ) ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಲಾಗಿದೆ. ಮಠದ ವಕೀಲ ಕ.ಎನ್. ವಿಶ್ವನಾಥಯ್ಯ ಅವರು ಜಾಮೀನು ಅರ್ಜಿ ಸಲ್ಲಿಸಿದ್ದು, ಅರ್ಜಿಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ ಸೆಪ್ಟಂಬರ್ 01ಕ್ಕೆ ವಿಚಾರಣೆಗೆ ನಿಗಧಿಪಡಿಸಿದೆ.
ಮುರುಘಾ ಶ್ರೀ ಬಂಧಿಸಲು ವಿಳಂಬವೇಕೆ? ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಿಷ್ಟು!
ಬಂಧನದ ಭೀತಿಯಲ್ಲಿ ಶ್ರೀಗಳು
ಹೌದು...ಶಿವರಾತ್ರಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಚಿತ್ರದುರ್ಗ ಪೊಲೀಸರು ತನಿಖೆ ನಡೆಸಿದ್ದಾರೆ. ಬಾಲಕಿಯರ ಹೇಳಿಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಅವರ ಮೆಡಿಕಲ್ ಟೆಸ್ಟ್ ಸಹ ಮಾಡಿಲಾಗಿದೆ. ಇದೀಗ ಸ್ಥಳ ಮಹಜರು ಮಾಡುವ ಸಂಬಂಧ ಬಾಲಕಿಯರನ್ನು ಮಠಕ್ಕೆ ಕರೆತರಲಾಗಿದೆ. ಬಳಿಕ ನ್ಯಾಯಾಧೀಶರು ಸಹ ಬಾಲಿಯರಿಂದ 164 ಹೇಳಿಕೆಯನ್ನು ಪಡೆಯಲಿದ್ದಾರೆ. ಒಂದು ವೇಳೆ ಬಾಲಕಿಯರು ಲೈಂಗಿಕ ದೌರ್ಜನ್ಯ ಆಗಿದ್ದು ನಿಜ ಎಂದು ಹೇಳಿಕೆ ನೀಡಿದರೆ, ಸ್ವಾಮೀಜಿ ಬಂಧನವಾಗಲಿದೆ. ಇದರಿಂದ ಮುರುಘಾ ಶರಣರು ಸಂಕಷ್ಟಕ್ಕೆ ಸಿಲುಕಿದ್ದು, ಅವರ ಭವಿಷ್ಯ ಮಕ್ಕಳ ಕೈಯಲ್ಲಿದೆ.
ಈ ಹಿನ್ನೆಲೆಯಲ್ಲಿ ಬಂಧನದ ಭೀತಿ ಎದುರಿಸುತ್ತಿರುವ ಸ್ವಾಮೀಜಿ, ಅದರಿಂದ ತಪ್ಪಿಸಿಕೊಳ್ಳಲು ಕಾನೂನು ತಜ್ಞರ ಅಭಿಪ್ರಾಯ ಪಡೆದುಕೊಂಡು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.
ಮರುಘಾ ಶ್ರೀಗಳು ನಾಪತ್ತೆಯಾಗಿಲ್ಲ, ಬಂಧನವೂ ಆಗಿಲ್ಲ: ಮಠ
ಮೈಸೂರಿನ ಒಡನಾಡಿ ಸಂಸ್ಥೆಯಿಂದ ದೂರು
ಮುರುಘಾ ಮಠದ ಶಿವಮೂರ್ತಿ ಶಿವಾಚಾರ್ಯ ಶರಣರಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿ ಬಂದಿದೆ. ಚಿತ್ರದುರ್ಗದ ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಶ್ರೀಗಳ ಲೈಂಗಿಕ ಕಿರುಕುಳದಿಂದ ಬೇಸತ್ತ ಮಕ್ಕಳು ರಾಜಧಾನಿ ಬೆಂಗಳೂರಿಗೆ ಬಂದು ಅಲ್ಲಿ ದೂರು ದಾಖಲಿಸಲು ಪ್ರಯತ್ನ ಮಾಡಿದ್ದಾರೆ. ಅದು ಸಾಧ್ಯವಾಗದಿದ್ದಾಗ ಹತಾಶೆಯಿಂದ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಆದರೆ ಒಬ್ಬರು ಆಟೋ ಚಾಲಕ ಅವರಿಗೆ ಸಹಾಯ ಮಾಡಿ, ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ಇದೀಗ ದೂರು ದಾಖಲಿಸಿದ್ದಾರೆ.
ಶಿವಮೂರ್ತಿ ಶರಣರು ಸೇರಿ ಐವರ ವಿರುದ್ದ ದೂರು ದಾಖಲಾಗಿದೆ. ಉಳಿದ ನಾಲ್ವರು ಲೈಂಗಿಕ ದೌರ್ಜನ್ಯ ವೆಸಗಲು ಸ್ವಾಮೀಜಿಗೆ ಸಹಾಯ ಮಾಡುತ್ತಿದ್ದರು. ನಮ್ಮ ಬಳಿ ದೂರು ಬರುತ್ತಿದ್ದಂತೆ, ಬಹಳಷ್ಟು ಒತ್ತಡಗಳು ಬಂದಿವೆ. ನಾವು ಅದಾವುದನ್ನೂ ಲೆಕ್ಕಿಸದೆ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ. ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸುತ್ತಿದ್ದೇವೆ. ಈ ಪ್ರಕರಣ ಗಂಭೀರ ಸ್ವರೂಪದ್ದಾಗಿರುವ ಕಾರಣ ನ್ಯಾಯಾಧೀಶರ ಮೂಲಕವೇ ತನಿಖೆ ಆಗಬೇಕು. ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯಂತ ಪ್ರಭಾವಿಗಳಾಗಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರೋದೆ ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಈ ಕಾರಣಕ್ಕಾಗಿ ಮಕ್ಕಳ ಜೊತೆ ನಾವಿದ್ದೇವೆ ಎಂದು ಒಡನಾಡಿ ಸಂಸ್ಥೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ