
ಚಿತ್ರದುರ್ಗ (ಡಿ.25): ರಾಜ್ಯವನ್ನೇ ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಸಮೀಪ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಹೊತ್ತಿ ಉರಿದ ಪರಿಣಾಮ 9 ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಘಟನೆಯ ವಿವರ: ಗುರುವಾರ ಮುಂಜಾನೆ ಈ ಭೀಕರ ದುರಂತ ಸಂಭವಿಸಿದೆ. ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಕೆಎ 01-ಎಇ 5217 ನಂಬರಿನ ಸೀ ಬರ್ಡ್ ಬಸ್, ಚಿತ್ರದುರ್ಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಬಂದ ಲಾರಿಯೊಂದು ವೇಗವಾಗಿ ಬಂದು ಬಸ್ನ ಡೀಸೆಲ್ ಟ್ಯಾಂಕ್ಗೆ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಮೊದಲು ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಬಸ್ಗೂ ಆವರಿಸಿದೆ.
ಬಸ್ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ. ಡೀಸೆಲ್ ಟ್ಯಾಂಕ್ ಬಳಿಯೇ ಲಾರಿ ಗುದ್ದಿದ್ದರಿಂದ ಬೆಂಕಿ ತೀವ್ರವಾಗಿ ಹರಡಿದ್ದು, ಗಾಢ ನಿದ್ರೆಯಲ್ಲಿದ್ದ ಪ್ರಯಾಣಿಕರಿಗೆ ಹೊರಬರಲು ಸಾಧ್ಯವಾಗಿಲ್ಲ. ಈ ಪೈಕಿ 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನವಾಗಿದ್ದಾರೆ. ಉಳಿದ 18 ಪ್ರಯಾಣಿಕರು ಕಿಟಕಿ ಹಾಗೂ ಎಮರ್ಜೆನ್ಸಿ ಡೋರ್ ಮೂಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಸಮೀಪದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ಮಾಹಿತಿ ನೀಡಿರುವ ಸೀ ಬರ್ಡ್ ಸಂಸ್ಥೆಯ ಮಾಲೀಕರು, 'ನಮ್ಮ ಬಸ್ನಲ್ಲಿ ಎಲ್ಲಾ ಸುರಕ್ಷತಾ ಕ್ರಮಗಳಿದ್ದವು. ಎರಡು ಎಮರ್ಜೆನ್ಸಿ ಡೋರ್ಗಳೂ ಇದ್ದವು. ಆದರೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಮೊಹಮ್ಮದ್ ರಫೀಕ್ ಹುಲಗಾರ್ ಬಸ್ ಚಾಲನೆ ಮಾಡುತ್ತಿದ್ದರು," ಎಂದು ತಿಳಿಸಿದ್ದಾರೆ. ಒಟ್ಟು 29 ಸೀಟುಗಳ ಪೈಕಿ 25 ಮಂದಿ ಗೋಕರ್ಣಕ್ಕೆ, ಇಬ್ಬರು ಶಿವಮೊಗ್ಗ ಹಾಗೂ ಇಬ್ಬರು ಕುಮಟಾಕ್ಕೆ ಟಿಕೆಟ್ ಬುಕ್ ಮಾಡಿದ್ದರು. ಆನ್ಲೈನ್ ಮೂಲಕ 28 ಸೀಟುಗಳು ಬುಕ್ ಆಗಿದ್ದವು. ಮೃತರ ಗುರುತು ಪತ್ತೆ ಹಚ್ಚುವ ಕಾರ್ಯ ಪ್ರಗತಿಯಲ್ಲಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸೀ ಬರ್ಡ್ (Sea Bird) ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದ ಬೆನ್ನಲ್ಲೇ, ಬಸ್ನಲ್ಲಿದ್ದ ಪ್ರಯಾಣಿಕರ ಸಂಪೂರ್ಣ ಪಟ್ಟಿ ಲಭ್ಯವಾಗಿದೆ. ಬೆಂಗಳೂರಿನಿಂದ ರಾತ್ರಿ 8.30ಕ್ಕೆ ಹೊರಟಿದ್ದ ಈ ಬಸ್ನಲ್ಲಿ ಒಟ್ಟು 28 ಸೀಟುಗಳು ಆನ್ಲೈನ್ ಮೂಲಕ ಬುಕ್ ಆಗಿದ್ದವು. ಬಸ್ ಮಾಲೀಕರು ನೀಡಿರುವ ಮಾಹಿತಿಯಂತೆ, ರೆಡ್ ಬಸ್ (RedBus) ಮೂಲಕ 19 ಹಾಗೂ ಅಭಿ ಬಸ್ (AbhiBus) ಮೂಲಕ 9 ಸೀಟುಗಳನ್ನು ಪ್ರಯಾಣಿಕರು ಬುಕ್ ಮಾಡಿದ್ದರು. ಬೆಂಗಳೂರಿನಿಂದ ಹೊರಟಿದ್ದವರಲ್ಲಿ ಹೆಚ್ಚಿನವರು ಗೋಕರ್ಣಕ್ಕೆ ಪ್ರವಾಸಕ್ಕೆ ಹೊರಟವರಾಗಿದ್ದರು.
ಗೋಕರ್ಣಕ್ಕೆ ಹೊರಟಿದ್ದವರು (24 ಜನ): ಮಂಜುನಾಥ್, ಸಂಧ್ಯಾ ಎಚ್, ಶಶಾಂಕ್ ಹೆಚ್ ವಿ, ದಿಲೀಪ್, ಪ್ರೀತಿಸ್ವರನ್, ಬಿಂದು ವಿ, ಕವಿತಾ ಕೆ, ಅನಿರುದ್ಧ್ ಬ್ಯಾನರ್ಜಿ, ಅಮೃತಾ, ಈಶಾ, ಶಶಿಕಾಂತ್ ಎಂ, ನವ್ಯಾ, ಅಭಿಷೇಕ್, ಕಿರಣ್ ಪಾಲ್ ಎಚ್, ಕೀರ್ತನ್ ಎಂ, ನಂದಿತಾ ಜಿ ಬಿ, ದೇವಿಕಾ ಎಚ್, ಗಗನಶ್ರೀ ಎಸ್, ರಸ್ಮಿ ಮಹಲೆ, ರಕ್ಷಿತಾ ಆರ್, ಸೂರಜ್, ಮಾನಸ, ಮಲ್ಲಣ್ಣ ಮತ್ತು ಹೇಮರಾಜ್ ಕುಮಾರ್.
ಕುಮಟಾಕ್ಕೆ ಹೊರಟಿದ್ದವರು (2 ಜನ): ಮೇಘರಾಜ್, ವಿಜಯ್ ಭಂಡಾರಿ.
ಶಿವಮೊಗ್ಗಕ್ಕೆ ಹೊರಟಿದ್ದವರು (2 ಜನ): ಮಸ್ರತುನ್ನಿಸಾ ಎಸ್ ಎನ್, ಸೈಯದ್ ಜಮೀರ್ ಗೌಸ್.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ