ನಾರಾಯಣಗುರು ನಿಗಮ ಸ್ಥಾಪನೆಗೆ ಸಿಎಂ ಬೊಮ್ಮಾಯಿ ತಾತ್ವಿಕ ಒಪ್ಪಿಗೆ

By Govindaraj SFirst Published Jan 6, 2023, 10:33 AM IST
Highlights

ಬಿಲ್ಲವ ಸಮುದಾಯದ ಪ್ರಮುಖ ಬೇಡಿಕೆಯಾದ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸಂಧಿಸಿದ್ದು, ತಮ್ಮನ್ನು ಭೇಟಿಯಾದ ಸಮುದಾಯದ ಮುಖಂಡರ ಸಮ್ಮುಖದಲ್ಲೇ ನಿಗಮಕ್ಕೆ ತಾತ್ವಿಕ ಒಪ್ಪಿಗೆ ನೀಡಿ ಮುಂದಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆಯೊಂದಿಗೆ ಸೂಕ್ತ ಅನುದಾನವನ್ನೂ ಮೀಸಲಿಡುವ ಭರವಸೆ ನೀಡಿದ್ದಾರೆ.

ಬೆಂಗಳೂರು (ಜ.06): ಬಿಲ್ಲವ ಸಮುದಾಯದ ಪ್ರಮುಖ ಬೇಡಿಕೆಯಾದ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ ಸ್ಥಾಪನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಕಾರಾತ್ಮಕವಾಗಿ ಸಂಧಿಸಿದ್ದು, ತಮ್ಮನ್ನು ಭೇಟಿಯಾದ ಸಮುದಾಯದ ಮುಖಂಡರ ಸಮ್ಮುಖದಲ್ಲೇ ನಿಗಮಕ್ಕೆ ತಾತ್ವಿಕ ಒಪ್ಪಿಗೆ ನೀಡಿ ಮುಂದಿನ ಬಜೆಟ್‌ನಲ್ಲಿ ಅಧಿಕೃತ ಘೋಷಣೆಯೊಂದಿಗೆ ಸೂಕ್ತ ಅನುದಾನವನ್ನೂ ಮೀಸಲಿಡುವ ಭರವಸೆ ನೀಡಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ಬಿಲ್ಲವ ಸಮುದಾಯದ ಮುಖಂಡರು, ಮಠಾಧೀಶರ ನಿಯೋಗ ಗುರುವಾರ ನಗರದಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ನಾರಾಯಣಗುರು ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ ಪತ್ರ ಸಲ್ಲಿಸಿತು. ಸ್ಥಳದಲ್ಲೇ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ ಮುಖ್ಯಮಂತ್ರಿ ಅವರು ನಿಗಮ ಸ್ಥಾಪನೆಗೆ ತಾತ್ವಿಕ ಒಪ್ಪಗೆ ನೀಡಿದರು ಎಂದು ನಿಯೋಗದಲ್ಲಿದ್ದ ಪ್ರತಿನಿಧಿಗಳು ತಿಳಿಸಿದ್ದಾರೆ.

ಮೋದಿ ಎದುರಿಗೆ ಸಿಎಂ ಬೊಮ್ಮಾಯಿ ನಾಯಿಮರಿ: ಸಿದ್ದು ಹೇಳಿಕೆ, ಬಿಜೆಪಿ ಕಿಡಿ

ಈ ಬಗ್ಗೆ ಸಚಿವ ಸುನಿಲ್‌ ಕುಮಾರ್‌ ಅವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು ಮುಂದಿನ ಬಜೆಟ್‌ನಲ್ಲಿ ಅಧಿಕೃತವಾಗಿ ನಿಗಮ ಘೋಷಿಸಿ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಅವರು ಭರವಸೆ ನೀಡಿದ್ದಾಗಿ ತಿಳಿಸಿದ್ದಾರೆ. ಹಿಂದುಳಿದ ಸಮುದಾಯಗಳ ಪೈಕಿ ಒಂದಾದ ಬಿಲ್ಲವ ಸಮಾಜ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿದ್ದು, ರಾಜ್ಯದ ಇನ್ನುಳಿದ ಜಿಲ್ಲೆಗಳಲ್ಲೂ ಸಂಖ್ಯಾ ಬಾಹುಳ್ಯವನ್ನು ಹೊಂದಿದೆ. ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಈ ಸಮಾಜದ ಅಭಿವೃದ್ಧಿ ಹಾಗೂ ನಾರಾಯಣ ಗುರು ತತ್ವ ಆದರ್ಶಗಳ ಪ್ರಚಾರ ದೃಷ್ಟಿಯಿಂದ ನಿಗಮ ಸ್ಥಾಪನೆ ಅಗತ್ಯ ಎಂದು ಮನವಿ ಮಾಡಲಾಗಿದೆ. 

ಲವ್‌ ಜಿಹಾದ್‌ ನಿಷೇಧ ಕಾಯ್ದೆ ವಿಚಾರ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ

ಬಿಲ್ಲವ, ಈಡಿಗ, ನಾಮಧಾರಿ ಎಂಬಿತ್ಯಾದಿ ಉಪನಾಮಗಳನ್ನು ಹೊಂದಿರುವ ಸಮಾಜದ ಎಲ್ಲ ವರ್ಗವನ್ನು ಒಂದೇ ವೇದಿಕೆಯ ಅಡಿಗೆ ತಂದು ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕೆಂದು ಸಮಾಜದ ನಿಯೋಗ ಮನವಿ ಮಾಡಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನಿಗಮ ಸ್ಥಾಪನೆಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯಿಸಿದೆ. ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌, ಶಾಸಕರಾದ ರಘುಪತಿ ಭಟ್‌, ಹರತಾಳು ಹಾಲಪ್ಪ ಹಾಗೂ ಬಿಲ್ಲವ ಸಮುದಾಯದ ಸ್ವಾಮೀಜಿಗಳು ಮತ್ತು ಮುಖಂಡರು ಹಾಜರಿದ್ದರು.

click me!