ಮಾಸ್ಕ್ ಹಾಕದಿದ್ರೆ ಒಂದು ಸಾವಿರ ರುಪಾಯಿ ದಂಡಕ್ಕೆ ಸಿಎಂ ಬಿಎಸ್‌ವೈ ಅನುಮತಿ..!

Kannadaprabha News   | Asianet News
Published : Oct 02, 2020, 07:40 AM IST
ಮಾಸ್ಕ್ ಹಾಕದಿದ್ರೆ ಒಂದು ಸಾವಿರ ರುಪಾಯಿ ದಂಡಕ್ಕೆ ಸಿಎಂ ಬಿಎಸ್‌ವೈ ಅನುಮತಿ..!

ಸಾರಾಂಶ

ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಇರುವ 200 ರು. ದಂಡವನ್ನು ನಗರ ಪ್ರದೇಶದಲ್ಲಿ 1 ಸಾವಿರ ರು.ಹಾಗೂ ಗ್ರಾಮೀಣ ಭಾಗದಲ್ಲಿ 500 ರು.ಗೆ ಹೆಚ್ಚಳ ಮಾಡುವ ಪ್ರಸ್ತಾಪವಿದೆ. ಇಂದು ಆ ನಿಯಮ ಅಧಿಕೃತ ಜಾರಿಯಾಗುವ ಸಾಧ್ಯತೆಯಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಅ.02): ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸದವರಿಗೆ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ನಗರ ಪ್ರದೇಶದಲ್ಲಿ 1 ಸಾವಿರ ರು. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರು.ಗೆ ಹೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಗುರುವಾರ ಒಪ್ಪಿಗೆ ಸೂಚಿಸಿದ್ದಾರೆ. ಹೀಗಾಗಿ ಬಹುತೇಕ ಗಾಂಧಿಜಯಂತಿ ದಿನವಾದ ಶುಕ್ರವಾರ ಈ ಕುರಿತ ಅಧಿಕೃತ ಆದೇಶ ಹೊರಬೀಳುವ ಸಾಧ್ಯತೆ ಇದೆ.

ಸಚಿವ ಸಂಪುಟ ಸಭೆಯ ಬಳಿಕ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಅವರು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಾ ಇಲಾಖೆ ಅಧಿಕಾರಿಗಳ ಅಭಿಪ್ರಾಯವಾಗಿ ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ನಿಯಮಾವಳಿ ಜಾರಿಗೊಳಿಸುವ ಅಗತ್ಯವನ್ನು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನದಟ್ಟು ಮಾಡಿಕೊಟ್ಟರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯವರು ಈ ಕಠಿಣ ಕ್ರಮಗಳಿಗೆ ಹಸಿರು ನಿಶಾನೆ ನೀಡಿದ್ದಾರೆ. ಅಧಿಕಾರಿಗಳು ದಂಡ ಮೊತ್ತ ಹೆಚ್ಚಳ ಸೇರಿದಂತೆ ವಿವಿಧ ನಿಯಮಗಳ ಕರಡು ಪ್ರತಿ ಸಿದ್ಧಪಡಿಸುತ್ತಿದ್ದು, ಬಹುತೇಕ ಶುಕ್ರವಾರ ಆದೇಶ ಹೊರಬೀಳಲಿದೆ ಎಂದು ತಿಳಿದು ಬಂದಿದೆ.

ಏನಿದು ಪರಿಷ್ಕೃತ ನಿಯಮ:

ರಾಜ್ಯದಲ್ಲಿ ಅನ್‌ಲಾಕ್‌ ಬಳಿಕ ಕೊರೋನಾ ಸೋಂಕು ಇಲ್ಲವೇನೋ ಎಂಬಂತೆ ಜನರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಪರಿಣಾಮ ಮಾಸ್ಕ್‌ ಧರಿಸದೇ ನಿರ್ಲಕ್ಷ್ಯ ತೋರುವವರ ಸಂಖ್ಯೆಯೂ ಹೆಚ್ಚಾಗಿದೆ. ಹೀಗಾಗಿ ಪ್ರಸ್ತುತ ಇರುವ 200 ರು. ದಂಡವನ್ನು ನಗರ ಪ್ರದೇಶದಲ್ಲಿ 1 ಸಾವಿರ ರು.ಹಾಗೂ ಗ್ರಾಮೀಣ ಭಾಗದಲ್ಲಿ 500 ರು.ಗೆ ಹೆಚ್ಚಳ ಮಾಡುವ ಪ್ರಸ್ತಾಪವಿದೆ. ಎಲ್ಲಾ ಸರ್ಕಾರಿ ಕಚೇರಿಗಳ ಕೆಲಸಗಾರರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಇಲ್ಲವಾದರೆ ಕಚೇರಿಗೆ ಪ್ರವೇಶ ನೀಡುವುದಿಲ್ಲ ಎಂಬ ನಿಯಮವಿದೆ.

ಸಾರ್ವಜನಿಕರೇ, ಮಾಸ್ಕ್ ಹಾಕದೇ ಓಡಾಡಬೇಡಿ, ಬೀಳುತ್ತೆ ಭಾರೀ ದಂಡ!

ಜತೆಗೆ, ಯಾವುದೇ ಸಭೆ-ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನ ಸೇರಿದರೆ ಆಯೋಜಕರು ಹಾಗೂ ಸಂಸ್ಥೆಯ ಮಾಲೀಕರ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅವಕಾಶವಿದೆ. ಸಾರಿಗೆ ಬಸ್ಸುಗಳಲ್ಲಿ ಶೇ.50ರಷ್ಟು ಮಂದಿಗೆ ಮಾತ್ರ ಅವಕಾಶ ಕಲ್ಪಿಸಬೇಕಾಗುತ್ತದೆ.

ಮಾರುಕಟ್ಟೆ, ಮಾಲ್, ಪಾರ್ಕ್ ಇತರೆ ಸಾರ್ವಜನಿಕ ಸ್ಥಳದಲ್ಲಿ 5ಕ್ಕೂ ಹೆಚ್ಚು ಜನ ಗುಂಪುಗೂಡಿ ನಿಲ್ಲುವಂತಿಲ್ಲ. ಇವರ ನಡುವೆ ಸಹ ಕನಿಷ್ಠ 6 ಅಡಿ ಅಂತರವಿರಬೇಕು. ಈ ನಿಯಮ ಪಾಲನೆಯಾಗದಿದ್ದರೆ ಯಾವ ತಾಣದಲ್ಲಿ ಇಂತಹ ಉಲ್ಲಂಘನೆಯಾಗುತ್ತದೆಯೋ ಆ ತಾಣದ ಮಾಲಿಕರ ಮೇಲೆ ದಂಡ ಪ್ರಯೋಗ ಮಾಡಲಾಗುವುದು. ಇಂತಹ ಉಲ್ಲಂಘನೆ ಪುನರಾವರ್ತನೆಯಾದರೆ ಪರವಾನಗಿ ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶವನ್ನು ಕಲ್ಪಿಸಿಕೊಳ್ಳುವ ಪ್ರಸ್ತಾಪವಿದ್ದು, ಇದಕ್ಕೆ ಮುಖ್ಯಮಂತ್ರಿ ಸಮ್ಮತಿ ದೊರಕಿದೆ ಎಂದು ಮೂಲಗಳು ಹೇಳಿವೆ.

ರಾಜ್ಯಾದಂತ ದಂಡ ವಸೂಲಿ ಆರಂಭ

ಮಾಸ್ಕ್‌ ಧರಿಸದವರಿಂದ ದಂಡ ವಸೂಲು ಪ್ರಕ್ರಿಯೆ ರಾಜ್ಯಾದ್ಯಂತ ಗುರುವಾರ ಆರಂಭವಾಗಿದೆ. ಸದ್ಯಕ್ಕೆ ಹಳೆಯ ನಿಯಮದಂತೆ 200 ರು. ದಂಡ ವಸೂಲು ಮಾಡಲಾಗುತ್ತಿದೆ. ಹೊಸ ಆದೇಶ ಬಂದ ಬಳಿಕ 1000 ರು. ದಂಡ ವಸೂಲು ಮಾಡಲಾಗುವುದು. ಹೀಗಾಗಿ ಜನರೇ ದಂಡದ ಭಯದಿಂದಾದರೂ ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ನಿಯಮ ಪಾಲಿಸಿ ಕೊರೋನಾ ತಡೆಗೆ ಸಹಕರಿಸಿ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

16 ಬಾರಿ ಬಜೆಟ್ ಮಂಡಿಸಿದ ವಿಶ್ವದ ಕುಖ್ಯಾತ ಅರ್ಥಶಾಸ್ತ್ರಜ್ಞ ಸಿದ್ದರಾಮಯ್ಯ, ಸತ್ತ ಸರ್ಕಾರದ ಮುಖ್ಯಮಂತ್ರಿ: ಪ್ರತಾಪ್ ಸಿಂಹ ವಾಗ್ದಾಳಿ
ನಮಗೆ ಭಿಕ್ಷುಕರಂತೆ ಭಿಕ್ಷೆ ಹಾಕ್ತಾರೆ; ₹10,000 ಕೋಟಿ ಅನುದಾನ ಕೊಡಿ, ಇಲ್ಲ ಪ್ರತ್ಯೇಕ ರಾಜ್ಯ ಮಾಡಿ-ರಾಜು ಕಾಗೆ