ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಾಕ್ಸಮರಕ್ಕೆ ದಾಳವಾದ ಸಂಸದೆ ಸುಮಲತಾ ಅಂಬರೀಶ್!

Published : Mar 10, 2024, 05:50 PM IST
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಕುಮಾರಸ್ವಾಮಿ ವಾಕ್ಸಮರಕ್ಕೆ ದಾಳವಾದ ಸಂಸದೆ ಸುಮಲತಾ ಅಂಬರೀಶ್!

ಸಾರಾಂಶ

ಮಂಡ್ಯದಲ್ಲಿ ಸುಮಲತಾ ಗೆಲ್ಲುವುದಕ್ಕೆ ಕಾಂಗ್ರೆಸ್ ಕಾರಣವೆಂದು ಸಿಎಂ ಸಿದ್ದರಾಮಯ್ಯ ಕೊನೆಗೂ ಸತ್ಯ ನುಡಿದಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಮಾ.10): ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ (ಸುಮಲತಾ ಅಂಬರೀಶ್) ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಮಂಡ್ಯದಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿಗಳ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ ಬಗ್ಗೆ ಸಾಮಾಜಿಕ ಜಾಲತಾಣ 'ಎಕ್ಸ್‌'ನಲ್ಲಿ ಪೋಸ್ಟ್ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. 'ಮಂಡ್ಯ ಜಿಲ್ಲೆಯ ಗ್ಯಾರಂಟಿಗಳ 2ನೇ ಸಮಾವೇಶದಲ್ಲಿ ಅಲವತ್ತುಕೊಂಡ ಸಿಎಂ ಸಿದ್ದರಾಮಯ್ಯನವರೇ.. ಕೊನೆಗೂ ಸತ್ಯ ನುಡಿದಿದ್ದೀರಿ! ಸುಳ್ಳುರಾಮಯ್ಯ ಬಿರುದಾಂಕಿತರಾದ ನೀವು, ಕೊನೆಗೂ ಸತ್ಯ ಕಕ್ಕಿದ್ದೀರಿ! ಸುಳ್ಳುರಾಮಯ್ಯನೆಂಬ ಕುಖ್ಯಾತಿಯಿಂದ ಹೊರಬರಲು ಪ್ರಾಮಾಣಿಕ ಪ್ರಯತ್ನ ನಡೆಸಿದ್ದೀರಿ. ಅಭಿನಂದನೆಗಳು' ಎಂದು ತಿಳಿಸಿದ್ದಾರೆ.

ಮಂಡ್ಯದ ಗಂಡು ಅಂಬರೀಶ್ ಕಾಂಗ್ರೆಸ್ಸಿಗರಾಗಿಯೇ ಪ್ರಾಣ ಬಿಟ್ಟಿದ್ದಾರೆ; ಡಿಸಿಎಂ ಡಿ.ಕೆ. ಶಿವಕುಮಾರ್!

'ಸತ್ಯ ಗಂಟಲಲ್ಲಿ ಸಿಕ್ಕಿಕೊಂಡ ಬಿಸಿತುಪ್ಪದಂತೆ.. ಕಕ್ಕಲೇಬೇಕು. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದ ಆಯ್ಕೆಯಾದ ಪಕ್ಷೇತರ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ಸೇ ಕಾರಣ ಎಂದು ಸ್ವತಃ ನೀವೇ ಒಪ್ಪಿಕೊಂಡಿದ್ದೀರಿ. ನಿಮ್ಮದೇ ಮಾತುಗಳಲ್ಲಿ ಹೇಳುವುದಾದರೆ.. ಸುಮಲತಾ ಬಿಜೆಪಿಯಿಂದ ಗೆದ್ದಿದ್ದಲ್ಲ.. ಕಾಂಗ್ರೆಸ್‌ ವೋಟುಗಳಿಂದಲೇ ಗೆದ್ದಿದ್ದು ಆಯಮ್ಮ. ನಿಮ್ಮ ಗೋಮುಖವ್ಯಾಘ್ರತನ ಅರಿಯಲು ಇಷ್ಟು ಸಾಕು. ಅಂದು ಕಾಂಗ್ರೆಸ್ ಮೈತ್ರಿ ಪಕ್ಷ, ನಿಖಿಲ್‌ ಕುಮಾರಸ್ವಾಮಿ ಮೈತ್ರಿ ಅಭ್ಯರ್ಥಿ. ಅವರ ಜತೆಯಲ್ಲೇ ಪ್ರಚಾರದ ಸೋಗಿನಾಟವಾಡಿ, ಮಾಧ್ಯಮಗಳ ಮುಂದೆ ಗೆಲ್ಲಿಸುತ್ತೇವೆಂದು ಪೋಸು ಕೊಡುತ್ತಲೇ ನಿಖಿಲ್ ಸುತ್ತ ಶಕುನಿವ್ಯೂಹವನ್ನೇ ರಚಿಸಿದ ಕಲಿಯುಗ ಶಕುನಿ ನೀವಲ್ಲದೆ ಮತ್ತ್ಯಾರು ಸಿದ್ದರಾಮಯ್ಯನವರೇ?' ಎಂದು ಕಿಡಿಕಾರಿದ್ದಾರೆ.

'ಕಳ್ಳಬೆಕ್ಕು ಕದ್ದು ಹಾಲು ಕುಡಿದರೆ ಗೊತ್ತಾಗದೇ? ಬೂದಿ ಮುಚ್ಚಿದ ಕೆಂಡ ತಣ್ಣಗಿರಲು ಸಾಧ್ಯವೇ? ಕುದಿಯುವ ಕುಲುಮೆಯಂತಿರುವ ನಿಮ್ಮ ಉದರಹುರಿಗೆ ತಂಪೆನ್ನುವುದುಂಟೆ? 5 ವರ್ಷಗಳ ನಂತರವಾದರೂ ಸತ್ಯ ಕಕ್ಕಿದ್ದೀರಿ ಹಾಗೂ ನಂಬಿದವನ ಮನೆ ನಾಶವಾಗಲಿ ಎನ್ನುವ ನಿಮ್ಮಹೇಯತನ ಬಯಲಾಗಿದೆ. ಸತ್ಯಮೇಯ ಜಯತೆ. ಇದಿಷ್ಟೇ ನನ್ನ ಕಳಕಳಿ ಮತ್ತು ನಂಬಿಕೆ. ಸಕ್ಕರೆ ಕಾರ್ಖಾನೆ ಬಗ್ಗೆ ಹೇಳಿದ್ದೀರಿ. ಬಜೆಟ್‌ʼನಲ್ಲಿ ‌ಘೋಷಣೆ ಮಾಡಿದ್ದೀರಿ, ಸರಿ.. ದುಡ್ಡು ಎಲ್ಲಿಟ್ಟಿದ್ದೀರಿ. ನಾನು 2019ರ ಬಜೆಟ್‌ ನಲ್ಲಿಯೇ ಈ ಕಾರ್ಖಾನೆಗೆ 100 ಕೋಟಿ ತೆಗೆದಿರಿಸಿದ್ದೆ. ಎಲ್ಲಿ ಹೋಯಿತು ಆ ದುಡ್ಡು? ಇದರ ಬಗ್ಗೆ ಗ್ಯಾರಂಟಿ ಸಮಾವೇಶದಲ್ಲಿ ಚಕಾರ ಎತ್ತಿಲಿಲ್ಲವೇಕೆ ಸಿದ್ದರಾಮಯ್ಯನವರೇ? ಇಂಥ ಆತ್ಮವಂಚನೆ ಏತಕ್ಕೆ?' ಎಂದು ಪ್ರಶ್ನೆ ಮಾಡಿದ್ದಾರೆ.

ರಾಜ್ಯದ ಮಸೀದಿಗಳು, ಮದರಸಾಗಳಲ್ಲಿ ಹುಡುಕಿದರೆ ರಾಮೇಶ್ವರಂ ಕೆಫೆ ಬಾಂಬರ್ ಸಿಗ್ತಾನೆ: ಶರಣ್ ಪಂಪ್‌ವೆಲ್

ತನ್ನ ತಲೆಗೇ ಹರಳೆಣ್ಣೆ ಇಲ್ಲ, ಪಕ್ಕದವನಿಗೆ ಸಂಪಂಗೆಣ್ಣೆ ಕೊಟ್ಟನಂತೆ ನಿಮ್ಮಂಥವನೊಬ್ಬ! ನಿಮ್ಮ ವೈಖರಿ ಹಾಗಿದೆ. ಕನ್ನಡಿಗರು ಬರದ ಬೆಂಕಿಯಲ್ಲಿ ಬೇಯುತ್ತಿದ್ದರೆ ನಿಮ್ಮ ಸರಕಾರ ಕದ್ದೂಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿದೆ! ಒಂದು ಕೈಲಿ ಅಗ್ಗದ ಗ್ಯಾರಂಟಿ ಕೊಟ್ಟು ಹತ್ತು ಕೈಗಳಲ್ಲಿ ಬದುಕಿನ ಗ್ಯಾರಂಟಿ ಕಿತ್ತುಕೊಳ್ಳುತ್ತಿದ್ದೀರಿ? ಇದು ನ್ಯಾಯವೇ? ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ
ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್