
ಬೆಂಗಳೂರು (ಜು.14) : ಹಾಲಿನ ದರವನ್ನು ಲೀಟರಿಗೆ 5 ರು.ನಷ್ಟುಹೆಚ್ಚಿಸಬೇಕೆಂಬ ಬೇಡಿಕೆಗೆ ಸಂಬಂಧಿಸಿದಂತೆ ಹಾಲು ಒಕ್ಕೂಟಗಳು ಮತ್ತು ಕೆಎಂಎಫ್ ಪದಾಧಿಕಾರಿಗಳ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸಂಜೆ 6ಕ್ಕೆ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಿದ್ದಾರೆ ಎಂದು ಕೆಎಂಎಫ್ ಮೂಲಗಳು ತಿಳಿಸಿವೆ.
ಜುಲೈ 11ರಂದೇ ಕೆಎಂಎಫ್ ಪದಾಧಿಕಾರಿಗಳು ಹಾಗೂ ಹಾಲು ಒಕ್ಕೂಟಗಳ ಅಧ್ಯಕ್ಷರ ನಿಯೋಗ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಹಾಲಿನ ದರ ಏರಿಕೆ ಕುರಿತು ಚರ್ಚಿಸಬೇಕಿತ್ತು. ಆದರೆ, ವಿವಿಧ ಕಾರಣಗಳಿಂದ ಸಭೆಯನ್ನು ಮುಂದೂಡಲಾಗಿತ್ತು. ಇದೀಗ ಮುಖ್ಯಮಂತ್ರಿಯವರು ಈ ಕುರಿತು ಚರ್ಚಿಸಲು ಸಮಯ ಕೊಟ್ಟಿರುವ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಸಭೆ ನಡೆಯಲಿದೆ. ಜೊತೆಗೆ ಹಾಲಿನ ದರ ಹೆಚ್ಚಳದ ಬಗ್ಗೆಯೂ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಬೆಲೆ ಏರಿಕೆ ಮಧ್ಯೆ ಕರ್ನಾಟಕದ ಜನತೆಗೆ ಮತ್ತೊಂದು ಶಾಕ್..!
ಹೈನು ರಾಸುಗಳ ನಿರ್ವಹಣಾ ವೆಚ್ಚದಲ್ಲಿ ನಿರಂತರ ಏರಿಕೆ ಆಗುತ್ತಿದೆ. ಎಲ್ಲ ವಸ್ತುಗಳ ಬೆಲೆ ಹೆಚ್ಚಳದಿಂದಾಗಿ ಹೈನೋದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಪಶು ಆಹಾರ ಉತ್ಪಾದನೆಗೆ ಬಳಸುವ ಮೆಕ್ಕೆಜೋಳ, ಅಕ್ಕಿತೌಡು, ಖನಿಜ ಪದಾರ್ಥಗಳ ಬೆಲೆ ಹೆಚ್ಚಳ, ಹತ್ತಿಕಾಳು ಹಿಂಡಿ ಸೇರಿದಂತೆ ಇತರೆ ಪಶು ಅಹಾರದಲ್ಲಿ ಶೇ.30ಕ್ಕಿಂತಲೂ ಅಧಿಕ ಏರಿಕೆಯಾಗಿದೆ. ವಿದ್ಯುತ್ ದರ ಹೆಚ್ಚಳ, ಪ್ರತಿ ಕೆಜಿ ಪಶು ಆಹಾರ ಉತ್ಪಾದನೆಯ ವೆಚ್ಚ ಎರಡು ವರ್ಷದ ಹಿಂದೆ 18 ರು. ಇತ್ತು. ಈಗ 25 ರು.ಗಳಿಗೆ ತಲುಪಿದೆ. ಹೀಗಾಗಿ ಪ್ರತಿ ಲೀಟರ ಹಾಲಿನ ಬೆಲೆಯನ್ನು ತಲಾ 5 ರು.ಹೆಚ್ಚಳ ಮಾಡಬೇಕು. ಇಲ್ಲದಿದ್ದರೆ ಹಾಲು ಉತ್ಪಾದಕರು ಹಾಗೂ ಉದ್ಯಮದ ಅಭಿವೃದ್ಧಿಗೆ ತೊಂದರೆಯಾಗಲಿದೆ ಎಂದು ಸಭೆಯಲ್ಲಿ ಹಾಲು ಒಕ್ಕೂಟಗಳ ಅಧ್ಯಕ್ಷರು, ಪದಾಧಿಕಾರಿಗಳು ಮುಖ್ಯಮಂತ್ರಿಯವರಿಗೆ ಮನವರಿಕೆ ಮಾಡಿಕೊಡಲಿದ್ದಾರೆ.
ಈ ಹಿಂದಿನ ಸರ್ಕಾರದ ಅವಧಿಯಲ್ಲೇ ಕೆಎಂಎಫ್ ಅಧ್ಯಕ್ಷರಾಗಿದ್ದ ಬಾಲಚಂದ್ರ ಜಾರಕಿಹೊಳಿ ಸೇರಿದಂತೆ ರಾಜ್ಯದ 14 ಹಾಲು ಒಕ್ಕೂಟಗಳು ಪ್ರತಿ ಲೀಟರ್ ಹಾಲಿಗೆ ತಲಾ 5 ರು.ಹೆಚ್ಚಳ ಮಾಡುವಂತೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ, ಕೆಎಂಎಫ್ ಪ್ರಸ್ತಾವಬೆಗೆ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಡೆ ನೀಡಿದ್ದರು. ನಂತರ 2022 ನವೆಂಬರ್ 22ರಂದು ಕೆಎಂಎಫ್ ಹಾಲು ಮತ್ತು ಮೊಸರಿನ ಬೆಲೆಯನ್ನು ಪ್ರತಿ ಲೀಟರ್ಗೆ 2 ರು. ಹೆಚ್ಚಳ ಮಾಡಿತ್ತು.
ಕರುನಾಡಿನ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ 5 ರೂ. ಹೆಚ್ಚಳ ಸಾಧ್ಯತೆ ?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ