
ಕಾರವಾರ(ಫೆ.22): ಉತ್ತರ ಕನ್ನಡ ಜಿಲ್ಲೆಯ ಜನತೆಯ ಬಹುಕಾಲದ ಬೇಡಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಹಸಿರು ನಿಶಾನೆ ತೋರಿದ್ದಾರೆ. ಕಾರವಾರದಲ್ಲಿ 450 ಬೆಡ್ಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಗೆ ಮತ್ತೊಂದು ಹೈಟೆಕ್ ಕೊಡುಗೆಯನ್ನು ಘೋಷಿಸುವ ಮೂಲಕ ಕರಾವಳಿ ಜನರಲ್ಲಿ ಸಂತಸ ಮೂಡಿಸಿದ್ದಾರೆ.
ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡಲು ಶಾಸಕ ಸತೀಶ್ ಸೈಲ್ ಕೋರಿದ್ದರು. ಮುಂದಿನ ರಾಜ್ಯ ಆಯವ್ಯಯದಲ್ಲಿ (ಬಜೆಟ್) ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮಂಜೂರು ಮಾಡುತ್ತೇನೆ ಎಂದು ಅಧಿಕೃತ ಭರವಸೆ ನೀಡಿದರು. ಅಲ್ಲದೆ, ಪ್ರತಿ ಜಿಲ್ಲೆಯಲ್ಲೂ ಕ್ಯಾನ್ಸರ್ ಯುನಿಟ್ ಒಳಗೊಂಡ ಇಂತಹ ಆಸ್ಪತ್ರೆಗಳನ್ನು ನಿರ್ಮಿಸುವುದು ನಮ್ಮ ಗುರಿ ಎಂದರು.
ಇದನ್ನೂ ಓದಿ: ಕಾರವಾರದಲ್ಲಿ ಆಸ್ಪತ್ರೆ ಉದ್ಘಾಟನೆ; ಪಕ್ಕದಲ್ಲೇ ಇದ್ದರೂ ಸಿಎಂ-ಡಿಸಿಎಂ ನಡುವೆ ಮಾತಿಲ್ಲ, ಕತೆಯಿಲ್ಲ!
ಶ್ರೀಮಂತರು ಉತ್ತಮ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗಳಿಗೆ ಹೋಗಬಹುದು, ಆದರೆ ಬಡವರ ಪಾಲಿಗೆ ಸರ್ಕಾರಿ ಆಸ್ಪತ್ರೆಗಳೇ ಗತಿ ಎಂದು ಭಾವುಕರಾಗಿ ನುಡಿದ ಸಿಎಂ, ಸರ್ಕಾರಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು. 2016ರಲ್ಲಿ ಕಾರವಾರದ ಮೆಡಿಕಲ್ ಕಾಲೇಜ್ ಉದ್ಘಾಟನೆ ಮಾಡಿದ್ದೆವು. ಇಂದು 200ಕೋಟಿ ರೂ. ವೆಚ್ಚದಲ್ಲಿ 450 ಬೆಡ್ಗಳ ಆಸ್ಪತ್ರೆ ನಿರ್ಮಾಣ ಮಾಡಿದ್ದೇವೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಸರ್ಕಾರದಲ್ಲಿ ಹಣವಿಲ್ಲ ಎಂದು ಟೀಕಿಸುತ್ತಿದ್ದ ಬಿಜೆಪಿಗೆ ಸಿಎಂ ಅಂಕಿ-ಅಂಶಗಳ ಮೂಲಕವೇ ತಿರುಗೇಟು ನೀಡಿದರು. 'ಸರ್ಕಾರದಲ್ಲಿ ಹಣವಿಲ್ಲದಿದ್ದರೆ 200 ಕೋಟಿ ರೂ. ವೆಚ್ಚದ ಆಸ್ಪತ್ರೆ ಮತ್ತು ಸೇತುವೆಗಳನ್ನು ನಿರ್ಮಿಸಲು ಹೇಗೆ ಸಾಧ್ಯ? ನಾವು ಗ್ಯಾರಂಟಿ ಮತ್ತು ಅಭಿವೃದ್ಧಿ ಎರಡನ್ನೂ ಜೊತೆಜತೆಯಾಗಿ ಕೊಂಡೊಯ್ಯುತ್ತಿದ್ದೇವೆ' ಎಂದು ಸ್ಪಷ್ಟಪಡಿಸಿದರು.
ಉತ್ತರ ಕನ್ನಡಕ್ಕೆ ಗ್ಯಾರಂಟಿಯ ಭಾಗ್ಯ: ಸಾವಿರಾರು ಕೋಟಿ ಹಣ ಬಿಡುಗಡೆ
ಜಿಲ್ಲೆಯಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿಯನ್ನು ವಿವರಿಸಿದ ಸಿಎಂ, ಈವರೆಗೆ ಕೇವಲ ಉತ್ತರ ಕನ್ನಡ ಜಿಲ್ಲೆಯೊಂದರಲ್ಲೇ 2,954 ಕೋಟಿ ರೂ.ಗಳನ್ನು ಗ್ಯಾರಂಟಿಗಳಿಗಾಗಿ ಖರ್ಚು ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇಡೀ ರಾಜ್ಯದಲ್ಲಿ ಈ ಮೊತ್ತ 1 ಲಕ್ಷ 18 ಸಾವಿರ ಕೋಟಿ ರೂ. ತಲುಪಿದೆ. ಇಷ್ಟೊಂದು ಹಣ ವ್ಯಯಿಸಿದರೂ ಅಭಿವೃದ್ಧಿ ಕುಂಠಿತವಾಗಿಲ್ಲ ಎಂದು ವಿಪಕ್ಷಗಳ ಟೀಕೆಗೆ ತಿರುಗೇಟು ನೀಡಿದರು.
ಬಿಜೆಪಿ ಏನು ಕೊಡುಗೆ ನೀಡಿದ್ದಾರೆ?
'ಬಿಜೆಪಿಯವರು ಜಿಲ್ಲೆಗೆ ಏನೂ ಮಾಡಿಲ್ಲ' ಎಂದು ಟೀಕಿಸಿದ ಸಿಎಂ, ಉಳವಾ-ಕೆರವಾಡಿ ಸಂಪರ್ಕ ಕಲ್ಪಿಸುವ ಮಹತ್ವದ ಕಾಮಗಾರಿಯನ್ನು ಆದ್ಯತೆಯ ಮೇಲೆ ಪೂರ್ಣಗೊಳಿಸುವುದಾಗಿ ಭರವಸೆ ನೀಡಿದರು. ಶಾಸಕ ಸತೀಶ್ ಸೈಲ್ ಮಂಡಿಸಿದ ಎಲ್ಲಾ ಸ್ಥಳೀಯ ಮನವಿಗಳನ್ನು ಈಡೇರಿಸುವ ಭರವಸೆ ನೀಡುವ ಮೂಲಕ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮುದ್ರೆ ಒತ್ತಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ