
ಬೆಂಗಳೂರು(ಮಾ.01): ಪಾಲಕರಿಗೆ ಮಗುವಿನ ಭೇಟಿಯ ಅವಕಾಶ ನೀಡುವ ಅಧಿಕಾರ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಇಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪ್ರಕರಣವೊಂದರಲ್ಲಿ ತಮ್ಮ ಸುಪರ್ದಿಯಲ್ಲಿದ್ದ ಮಗುವಿನ ಭೇಟಿಗೆ ತಂದೆಗೆ ಅವಕಾಶ ಕಲ್ಪಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಕ್ರಮ ಪ್ರಶ್ನಿಸಿ ಮಗುವಿನ ತಾಯಿ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಪೀಠ ಈ ಆದೇಶ ಮಾಡಿದೆ.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಒಂದು ಸಲಹಾ ಸಂಸ್ಥೆಯಾಗಿದೆ. ಅದು ಮಕ್ಕಳ ಹಕ್ಕುಗಳಿಗೆ ಸಂಬಂಧಿಸಿದಂತೆ ನೀತಿ ನಿರ್ಧಾರಗಳನ್ನು ರೂಪಿಸಲು ಸರ್ಕಾರಕ್ಕೆ ಸಲಹೆ-ಸೂಚನೆಯನ್ನಷ್ಟೇ ನೀಡಬಹುದು. ಆದರೆ, ಯಾವುದೇ ತೀರ್ಪುಗಳನ್ನು ನೀಡುವ ಅಥವಾ ಪಕ್ಷಗಾರರ ನಡುವಿನ ವ್ಯಾಜ್ಯ ನಿರ್ಣಯಿಸುವ ಅಧಿಕಾರ ಹೊಂದಿಲ್ಲ. ಆದ್ದರಿಂದ, ಆಯೋಗದ ಆದೇಶ ರದ್ದುಪಡಿಸಲಾಗಿದೆ ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿದೆ.
ವೃದ್ಧನ ಶಿಕ್ಷೆಯನ್ನು ಕಡಿತಗೊಳಿಸಿ, ಅಂಗನವಾಡಿಯಲ್ಲಿ ಉಚಿತ ಸೇವೆ ಸಲ್ಲಿಸುವಂತೆ ವಿಭಿನ್ನ ಶಿಕ್ಷೆ ನೀಡಿದ ಹೈಕೋರ್ಟ್!
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 2003ರಲ್ಲಿ ಮದುವೆಯಾಗಿದ್ದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 2010ರಲ್ಲಿ ಗಂಡು ಮಗುವಿಗೆ ಜನಿಸಿತ್ತು. 2016ರಲ್ಲಿ ಹಲ್ಲೆ ನಡೆಸಿದ ಆರೋಪದಲ್ಲಿ ಪತಿಯ ವಿರುದ್ಧ ಪತ್ನಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಂತರ ಪತ್ನಿ ಮಗುವಿನೊಂದಿಗೆ ಪ್ರತ್ಯೇಕವಾಗಿ ನೆಲೆಸಿದ್ದರು. 2017ರ ಜನವರಿಯಲ್ಲಿ ಶಾಲೆಯಲ್ಲಿದ್ದ ಮಗುವನ್ನು ಪತಿ ತಮ್ಮೊಂದಿಗೆ ಕರೆದೊಯ್ದಿದ್ದರು. ಇದರಿಂದ, ಪತಿಯಿಂದ ಮಗುವಿನ ರಕ್ಷಣೆಗೆ ಕೋರಿ ಮಕ್ಕಳ ಹಕ್ಕುಗಳ ಆಯೋಗಕ್ಕೂ ದೂರು ನೀಡಿದ್ದರು.
ದೂರಿನ ವಿಚಾರಣೆ ನಡೆಸಿದ್ದ ಆಯೋಗ, ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಮಧ್ಯಾಹ್ನ 12ರಿಂದ ರಾತ್ರಿ 9 ಗಂಟೆವರೆಗೆ ಮಗುವನ್ನು ಭೇಟಿ ಮಾಡಲು ತಂದೆಗೆ ಅವಕಾಶ ಕಲ್ಪಿಸಿ ಆದೇಶಿಸಿತ್ತು. ಈ ಆದೇಶವನ್ನು ಪತ್ನಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ