
ಬೆಂಗಳೂರು (ಜೂ.02): ಅಂತರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಸೋಮವಾರ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.
ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಭಾಧ್ಯಕ್ಷ ಯು.ಟಿ. ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್.ತಂಗಡಗಿ ಅವರು ಬೂಕರ್ ಪ್ರಶಸ್ತಿ ವಿಜೇತರಿಗೆ ಸನ್ಮಾನಿಸಿ ಗೌರವಿಸಲಿದ್ದಾರೆ.
ಲೇಖಕಿ ಮತ್ತು ವಕೀಲರೂ ಆಗಿರುವ ಬಾನು ಮುಷ್ತಾಕ್ ಅವರ ‘ಹಾರ್ಟ್ ಲ್ಯಾಂಪ್’ ಕೃತಿಗೆ ಬುಕರ್ ಪ್ರಶಸ್ತಿ ಲಭಿಸಿದೆ. ಕಳೆದ ವಾರವಷ್ಟೇ ಲಂಡನ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಿದ್ದರು. 1990ರಿಂದ 2023ರ ನಡುವೆ ಬಾನು ಮುಷ್ತಾಕ್ ಅವರು ಬರೆದ 12 ಕತೆಗಳ ಸಂಗ್ರಹದ ಪುಸ್ತಕವೇ ಹಾರ್ಟ್ ಲ್ಯಾಂಪ್. ದಕ್ಷಿಣ ಭಾರತದ ಮುಸ್ಲಿಂ ಸಮುದಾಯದ ಮಹಿಳೆಯರ ದೈನಂದಿನ ಜೀವನದ ಅನುಭವಗಳನ್ನು ಈ ಕೃತಿ ಒಳಗೊಂಡಿದೆ.
ಬಾನು ಅವರಿಗೆ ಈಗಾಗಲೇ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಅನೇಕ ಪ್ರಶಸ್ತಿಗಳು ಸಂದಿವೆ. ಪ್ರತಿಷ್ಠಿತ ಪ್ರಶಸ್ತಿ ಬಂದ ಬಳಿಕ ಹಾರ್ಟ್ ಲ್ಯಾಂಪ್ ಪುಸ್ತಕ ಮಾರಾಟ ಗಣನೀಯವಾಗಿ ಏರಿಕೆಯಾಗಿದೆ. ಶಿಕ್ಷಕಿ, ಪತ್ರಕರ್ತೆ, ವಕೀಲೆಯಾಗಿರುವ ಬಾನು ಅವರ ಕನ್ನಡ ಪುಸ್ತಕಗಳು ಇಂಗ್ಲಿಷ್, ಉರ್ದು, ಹಿಂದಿ, ತಮಿಳು, ಮಲಯಾಳಂ ಭಾಷೆಗೂ ಅನುವಾದಗೊಂಡಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ