ಜಿಡಿಪಿ ಅಭಿವೃದ್ಧಿ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆ ಜಾರಿ: ಬಿಜೆಪಿಗೆ ಆರ್ಥಿಕ ಶಿಸ್ತಿನ ಪಾಠ ಮಾಡಿದ ಸಿಎಂ ಸಿದ್ದರಾಮಯ್ಯ

By Sathish Kumar KHFirst Published Nov 7, 2023, 3:56 PM IST
Highlights

ರಾಜ್ಯದಲ್ಲಿ ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ- ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಡಿ ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದೇವೆ.

ಹಾಸನ (ನ.07): ನಮ್ಮ ರಾಜ್ಯದಲ್ಲಿ ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ- ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿ ಟೀಕಾಕಾರರಿಗೆ ಆರ್ಥಿಕ ಶಿಸ್ತಿನ ಪಾಠವನ್ನು ಮಾಡಿದ್ದಾರೆ.

ಹಾಸನದಲ್ಲಿ ಮಂಗಳವಾರ ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿನಿಲಯ ಮತ್ತು ಸಮುದಾಯ ಭವನದ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಜನರ ಕೊಳ್ಳುವ ಶಕ್ತಿ ಹೆಚ್ಚಾದರೆ ಆರ್ಥಿಕತೆ-ಜಿಡಿಪಿ ಬೆಳವಣಿಗೆ ಆಗುತ್ತದೆ. ಸಾರ್ವತ್ರಿಕ ಮೂಲ ಆದಾಯ ಪರಿಕಲ್ಪನೆಯಲ್ಲಿ ನಾವು ಗ್ಯಾರಂಟಿ ಯೋಜನೆಗಳನ್ನು ನಾಡಿನ ಜನತೆಗೆ ಕೊಟ್ಟಿದ್ದೇವೆ. ಸಾಮಾಜಿಕ, ಆರ್ಥಿಕ ಅಸಮಾನತೆ ತೊಡೆದು ಹಾಕಿದಾಗ ಮಾತ್ರ ವರ್ಗರಹಿತ, ಜಾತಿರಹಿತ ಸಮಾಜ ನಿರ್ಮಾಣ ಸಾಧ್ಯ. ನಾವು ಸಮಾಜದ ಅಸಮಾನತೆ ಅಳಿಸಿ ಎಲ್ಲ ವರ್ಗದವರೂ ಮುಖ್ಯವಾಹಿನಿಗೆ ಬರುವ ರೀತಿಯ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ. ನಾವು ದಲಿತರು, ಹಿಂದುಳಿದ ವರ್ಗದವರು ಮತ್ತು ಎಲ್ಲಾ ಜಾತಿಯ ಬಡವರಿಗೂ ಶಕ್ತಿ ತುಂಬುವ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ನೀಡಿದ್ದೇವೆ ಎಂದರು.

ಮೋದಿ 48 ಕಡೆ ಹೋದಲ್ಲೆಲ್ಲಾ ಬಿಜೆಪಿ ಸೋತಿದ್ದರಿಂದ ರಾಜಕೀಯ ಆರೋಪ ಮಾಡ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಮುದಾಯ ಭವನಕ್ಕೆ ಅನುದಾನ ಕೊಡ್ತೇವೆ: ಒಂದು ಕೋಟಿವರೆಗಿನ ಕಾಮಗಾರಿಗಳಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕೊಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ಘೋಷಿಸಿದ್ದೇವೆ. ಜತೆಗೆ 5 ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅಶಕ್ತರಿಗೆ ಆರ್ಥಿಕ ಶಕ್ತಿ ತುಂಬುತ್ತಿದೆ. ಇದರಿಂದ ರಾಜ್ಯದ ಆರ್ಥಿಕತೆಯೂ ಬೆಳವಣಿಗೆಯಾಗುತ್ತಿದೆ. ಹಾಸನದ ಹಿಂದುಳಿದ ವರ್ಗಗಳ ಸಮುದಾಯ ಭವನಕ್ಕೆ ಅಗತ್ಯ ಅನುದಾನ ನೀಡುತ್ತೇವೆ. ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ.  ಸರ್ವರಿಗೂ ಸಮಾನ ಅವಕಾಶ ಕಲ್ಪಿಸಬೇಕು ಎನ್ನುವುದು ಸಂವಿಧಾನದ ಆಶಯ. ಈ ಆಶಯಕ್ಕೆ ತಕ್ಕಂತೆ ನಮ್ಮ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎನ್.ರಾಜಣ್ಣ, ಶಾಸಕರಾದ ಶಿವಲಿಂಗೇಗೌಡರು, ಸ್ವರೂಪ್ ಪ್ರಕಾಶ್, ಮಾಜಿ ಸಚಿವರಾದ ಬಿ.ಶಿವರಾಂ, ಹಿಂದುಳಿದ ವರ್ಗಗಳ ಒಕ್ಕೂಟದ ಜಿಲ್ಲಾಧ್ಯಕ್ಷರಾದ ಪುಟ್ಟಸ್ವಾಮಿ ಶೆಟ್ಟರು, ಉಪಾಧ್ಯಕ್ಷರಾದ ಲಕ್ಷ್ಮಣ್ ಸೇರಿದಂತೆ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಮೋದಿ Vs ಸಿದ್ದು ಕಾಳಗ: ಸಿದ್ದರಾಮಯ್ಯ ಎಷ್ಟು ದಿನ ಸಿಎಂ ಆಗಿರ್ತಾರೋ ಗೊತ್ತಿಲ್ಲವೆಂದ ಪ್ರಧಾನಿ

ಬಿಜೆಪಿಗೆ ಟಾಂಗ್‌ ಕೊಟ್ಟ ಸಿದ್ದರಾಮಯ್ಯ: ಇನ್ನು ಯಾವುದೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಕ್ಕೋಸ್ಕರ ಉಚಿತ ಗ್ಯಾರಂಟಿಗಳನ್ನು ಜನರಿಗೆ ನೀಡಿದರೆ ಅಲ್ಲಿನ ಸರ್ಕಾರ ಆರ್ಥಿಕ ದಿವಾಳಿ ಆಗುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್‌ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಆದರೆ, ಈಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನರ ಆರ್ಥಿಕ ಶಕ್ತಿ ಹೆಚ್ಚಳ ಮಾಡುವ ಮೂಲಕ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಲಾಗುತ್ತಿದೆ. ಈ ಮೂಲಕ ಸಾರ್ವತ್ರಿಕ ಮೂಲ ಆದಾಯದ ಪರಿಕಲ್ಪನೆಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೊಳಿಸಲಾಗಿದೆ ಎಂದು ಆರ್ಥಿಕ ಶಿಸ್ತಿನ ಪಾಠ ಮಾಡಿದ್ದಾರೆ.

click me!