
ಬೆಂಗಳೂರು(ಆ.23): ಕಳೆದ ವಿಧಾನಸಭೆ ಚುನಾವಣೆ ಪ್ರಚಾರದ ವೇಳೆ ‘ಎಲ್ಲ ಹಿಂದುಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕರಿಸುತ್ತಾರೆ’ ಎಂದು ಹೇಳಿಕೆ ನೀಡುವ ಮೂಲಕ ಸರ್ಕಾರಿ ಅಧಿಕಾರಿಗಳ ಆದೇಶ ಉಲ್ಲಂಘಿಸಿದ ಆರೋಪ ಸಂಬಂಧ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಗದಗ ಜಿಲ್ಲೆಯ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ವಿಚಾರಣೆಯನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದ ಖಾಸಗಿ ದೂರು ಮತ್ತು ವಿಚಾರಣಾ ನ್ಯಾಯಾಲಯ ವಿಚಾರಣಾ ಪ್ರಕ್ರಿಯೆ ರದ್ದುಪಡಿಸುವಂತೆ ಕೋರಿ ಶಾಸಕ ಯತ್ನಾಳ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ.
ನಮ್ಮೊಳಗೆ ಭಿನ್ನಭಿಪ್ರಾಯ ಬೇಡ: ಯತ್ನಾಳ್, ರಮೇಶ್ಗೆ ರೇಣುಕಾಚಾರ್ಯ ಮನವಿ
ಗದಗ ನಗರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ 2ಎ ಮೀಸಲಾತಿ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ, ‘ಎಲ್ಲ ಹಿಂದುಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕಾರ ಮಾಡುತ್ತಾರೆ’ ಎಂದಿದ್ದರು. ಈ ದೃಶ್ಯಗಳು ಯೂಟ್ಯೂಬ್ನಲ್ಲಿ ಪ್ರಸಾರವಾಗಿ ವೈರಲ್ ಆಗಿತ್ತು.
ವಾದ, ಆದೇಶ:
ಯತ್ನಾಳ ಪರ ವಕೀಲ ವೆಂಕಟೇಶ್ ದಳವಾಯಿ ವಾದ ಮಂಡಿಸಿ, ಚುನಾವಣಾ ಸಂಚಾರ ವಿಚಕ್ಷಣಾ ತಂಡದ ಅಧಿಕಾರಿ ದಾಖಲಿಸಿದ್ದ ಖಾಸಗಿ ದೂರು ಆಧರಿಸಿ ವಿಚಾರಣಾ ನ್ಯಾಯಾಲಯ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188 ಅಡಿ ಸರ್ಕಾರಿ ಅಧಿಕಾರಿಗಳು ಹೊರಡಿಸಿದ ಆದೇಶ ಉಲ್ಲಂಘಿಸಿದ ಅಪರಾಧ ಕಾಗ್ನಿಜೆನ್ಸ್ ತೆಗೆದುಕೊಂಡು ಅರ್ಜಿದಾರರಿಗೆ ಸಮನ್ಸ್ ಜಾರಿಗೊಳಿಸಿದೆ. ಆದರೆ, ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 188 ಅನ್ವಯಿಸುವುದಿಲ್ಲ. ಹಾಗಾಗಿ, ವಿಚಾರಣಾ ನ್ಯಾಯಾಲಯ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಈ ವಾದ ಪುರಸ್ಕರಿಸಿದ ನ್ಯಾಯಪೀಠ, ಅರ್ಜಿದಾರರ ವಿರುದ್ಧದ ಪ್ರಕರಣದ ವಿಚಾರಣೆಗೆ ಅನುಮತಿಸಿದರೆ, ಅದು ಕಾನೂನಿನ ದುರ್ಬಳಕೆಯಾಗಲಿದೆ ಎಂದು ಅಭಿಪ್ರಾಯಪಟ್ಟು ಯತ್ನಾಳ ವಿರುದ್ಧದ ಖಾಸಗಿ ದೂರು ಮತ್ತು ಅದಕ್ಕೆ ಸಂಬಂಧಿಸಿದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆ ರದ್ದುಪಡಿಸಿತು.
ಸಂಘ, ವರಿಷ್ಠರ ಮಧ್ಯಸ್ಥಿಕೇಲಿ ವಿಜಯೇಂದ್ರ ಜೊತೆಗೆ ಮಾತುಕತೆ ಸಿದ್ಧ: ಯತ್ನಾಳ್
ಪ್ರಕರಣದ ಹಿನ್ನೆಲೆ:
ಕಳೆದ ವಿಧಾನಸಭೆ ಚುನಾವಣೆ ವೇಳೆ ಗದಗ ನಗರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದ ವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ 2ಎ ಮೀಸಲಾತಿ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಯತ್ನಾಳ, ‘ಎಲ್ಲ ಹಿಂದುಗಳು ಕಾಂಗ್ರೆಸ್ ಪಕ್ಷವನ್ನು ಬಹಿಷ್ಕಾರ ಮಾಡುತ್ತಾರೆ’ ಎಂದಿದ್ದರು. ಈ ದೃಶ್ಯಗಳು ಯೂಟ್ಯೂಬ್ನಲ್ಲಿ ಪ್ರಸಾರವಾಗಿ ವೈರಲ್ ಆಗಿತ್ತು.
ಇದರಿಂದ ಗದಗ ಮತಕ್ಷೇತ್ರದ ಸಂಚಾರ ವಿಚಕ್ಷಣಾ ದಳದ ಅಧಿಕಾರಿ ಸಹಾಯಕ ಎಂಜಿನಿಯರ್ ಮಂಜುನಾಥ್, ಗದಗ 1ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿಗೆ ಖಾಸಗಿ ದೂರು ದಾಖಲಿಸಿದ್ದರು. ವಿಚಾರಣಾ ನ್ಯಾಯಾಲಯ ಯತ್ನಾಳ ಅವರಿಗೆ ಸಮನ್ಸ್ ಜಾರಿಗೊಳಿಸಿ 2023ರ ಮೇ 11ರಂದು ಆದೇಶಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ