
ಬೆಂಗಳೂರು(ಅ.31): ಸಾರ್ವಜನಿಕ ರಸ್ತೆ, ಉದ್ಯಾನ ಮತ್ತು ಇತರೆ ಸರ್ಕಾರದ ಜಾಗದಲ್ಲಿ ನಿರ್ಮಿಸಿರುವ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ನಿರ್ದಿಷ್ಟಕಾಲಮಿತಿಯೊಳಗೆ ತೆರವುಗೊಳಿಸುವ ಬಗ್ಗೆ ಮೂರು ವಾರಗಳೊಳಗೆ ನ್ಯಾಯಾಲಯಕ್ಕೆ ಪ್ರಮಾಣ ಪತ್ರ ಸಲ್ಲಿಸುವಂತೆ ಹೈಕೋರ್ಟ್ ಬುಧವಾರ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತಾಕೀತು ಮಾಡಿದೆ.
ಈ ಕುರಿತಂತೆ ಸುಪ್ರೀಂಕೋರ್ಟ್ ನಿರ್ದೇಶನದನ್ವಯ ಹೈಕೋರ್ಟ್ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಹಾಗೂ ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಬುಧವಾರ ಈ ಆದೇಶ ನೀಡಿದೆ.
ಹಿರಿಯ ಕವಿ ಪ್ರೊ. ನಿಸಾರ್ ಅಹಮದ್ಗೆ ‘ಕನ್ನಡ ರತ್ನ’ ಪ್ರಶಸ್ತಿ
2009ರ ಸೆ.29ರ ನಂತರದಲ್ಲಿ ಸಾರ್ವಜನಿಕ ರಸ್ತೆ, ಉದ್ಯಾನ ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಿಸಲಾದ ದೇವಾಲಯ, ಮಸೀದಿ, ಚರ್ಚ್, ಗುರುದ್ವಾರ ಸೇರಿದಂತೆ ಎಲ್ಲ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಬೇಕು ಎಂದು ಸುಪ್ರೀಂಕೋರ್ಟ್ 2018ರ ಜ.31ರಂದು ಸ್ಪಷ್ಟಆದೇಶ ನೀಡಿದೆ. ಇದಲ್ಲದೇ 2009ರ ಸೆ.29, ಡಿ.7 ಹಾಗೂ 2010ರ ಫೆ.16ರಂದು ವಿವಿಧ ಮಧ್ಯಂತರ ಆದೇಶ ನೀಡಿದೆ. ಆದರೆ, ಈ ಯಾವ ಆದೇಶಗಳನ್ನೂ ರಾಜ್ಯ ಸರ್ಕಾರ ಅರ್ಥ ಮಾಡಿಕೊಂಡಂತಿಲ್ಲ ಎಂದು ನ್ಯಾಯಪೀಠ ತರಾಟೆಗೆ ತೆಗೆದುಕೊಂಡಿತು.
ಅರ್ಜಿ ಸಂಬಂಧ ರಾಜ್ಯ ಸರ್ಕಾರ ಒದಗಿಸಿದ ಮಾಹಿತಿಯಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸಿದ ಯಾವ ಅಂಶವೂ ಕಾಣುತ್ತಿಲ್ಲ. ಇಂತಹ ಅಸಮರ್ಪಕ ಮಾಹಿತಿಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಸುಪ್ರೀಂ ಕೊರ್ಟ್ ಆದೇಶ ಮಾಡಿ 9 ವರ್ಷ ಕಳೆದರೂ ಅದನ್ನು ಪಾಲಿಸುವಲ್ಲಿ ಬಿಬಿಎಂಪಿ ಹಾಗೂ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ಆದ್ದರಿಂದ ಸ್ವತಃ ಮುಖ್ಯ ಕಾರ್ಯದರ್ಶಿಯವರೇ ಈ ವಿಚಾರದ ಬಗ್ಗೆ ಗಮನಹರಿಸಬೇಕಾಗಿದೆ ಎಂದು ನ್ಯಾಯಪೀಠ ತಿಳಿಸಿತು.
'ಟಿಪ್ಪು ಪಠ್ಯ ಕೈಬಿಟ್ಟರೆ ನಾಡಿನ ಜನರಿಗೆ ಮಾಡಿದ ಅವಮಾನ'
ಅಲ್ಲದೆ, ಸುಪ್ರೀಂ ಕೊರ್ಟ್ ಆದೇಶ ಪಾಲನೆ ಮಾಡುವ ಬಗ್ಗೆ ನಿರ್ದಿಷ್ಟಕಾಲಮಿತಿ ಹಾಕಿಕೊಳ್ಳಬೇಕು. ಈ ಬಗ್ಗೆ ಮೂರು ವಾರದಲ್ಲಿ ಸಮಗ್ರ ಪ್ರಮಾಣಪತ್ರ ಸಲ್ಲಿಸಬೇಕು. ಇನ್ನೂ ಸುಪ್ರೀಂ ಕೊರ್ಟ್ ಆದೇಶವನ್ನು ಅನುಷ್ಠಾನ ಮಾಡುವಲ್ಲಿ ವಿಳಂಬ ಧೋರಣೆ ಅನುಸರಿಸಿರುವ ಬಗ್ಗೆ ಪ್ರಮಾಣಪತ್ರದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿವರಣೆ ನೀಡಬೇಕು. ಇದೇ ವೇಳೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಾರ್ವಜನಿಕ ಪ್ರದೇಶದಲ್ಲಿ ಒಂದೇ ಒಂದು ಅನಧಿಕೃತ ಧಾರ್ಮಿಕ ಕಟ್ಟಡಗಳ ನಿರ್ಮಾಣವಾಗಿಲ್ಲ ಎಂಬ ಸರ್ಕಾರದ ಮಾಹಿತಿಯನ್ನು ಒಪ್ಪದ ನ್ಯಾಯಪೀಠ, ಈ ಬಗ್ಗೆ ಸ್ವತಃ ಜಿಲ್ಲಾಧಿಕಾರಿಯೇ ಅಫಿಡವಿಟ್ ಸಲ್ಲಿಸಬೇಕು. ಬಿಬಿಎಂಪಿ ಆಯುಕ್ತರು ಸಲ್ಲಿಸಿರುವ ಪ್ರಮಾಣಪತ್ರ ಅಸಮಂಜಸವಾಗಿದ್ದು, ಹೊಸದಾಗಿ ಪ್ರಮಾಣಪತ್ರ ಸಲ್ಲಿಸಬೇಕು. ನಗರದಲ್ಲಿ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ಗುರುತಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ತಿಳಿಸಬೇಕು ಎಂದು ಸೂಚಿಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ