ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ: CWRC ಆದೇಶ ಎತ್ತಿಹಿಡಿದ CWMA; ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸಲು ಸೂಚನೆ!

Published : Jul 30, 2026, 04:21 PM IST
Karnataka Cauvery Water CWRC Order

ಸಾರಾಂಶ

ರಾಜ್ಯದಲ್ಲಿ ತೀವ್ರ ಮಳೆ ಕೊರತೆಯ ನಡುವೆಯೂ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (CWMA) ತಮಿಳುನಾಡಿಗೆ 15 ದಿನಗಳ ಕಾಲ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ಈ ನಿರ್ಧಾರದಿಂದಾಗಿ ಕಾವೇರಿ ಹೋರಾಟದ ಕೇಂದ್ರವಾದ ಮಂಡ್ಯದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ತೀವ್ರ ಪ್ರತಿಭಟನೆ ನಡೆಸುತ್ತಿವೆ.

ಬೆಂಗಳೂರು/ಮಂಡ್ಯ (ಜು.30): ರಾಜ್ಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜನಸಾಮಾನ್ಯರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯ ನಡುವೆಯೂ ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಕಾವೇರಿ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್‌ನಂತೆ ಒಟ್ಟು 4.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ.

ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ CWMA ಮುಂದೆ ಸುದೀರ್ಘ ವಾದ ಮಂಡಿಸಿತ್ತು. ರಾಜ್ಯದ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟು, ಆದೇಶ ಮರುಪರಿಶೀಲಿಸುವಂತೆ ಮನವೊಲಿಸಲು ಯತ್ನಿಸಿತ್ತು. ಆದರೆ, ಕರ್ನಾಟಕದ ಮೇಲ್ಮನವಿಯನ್ನು ತಿರಸ್ಕರಿಸಿರುವ ಪ್ರಾಧಿಕಾರವು, CWRC ಶಿಫಾರಸು ಮಾಡಿದ ಆದೇಶವನ್ನೇ ಖಾಯಂಗೊಳಿಸಿದೆ.

ಮಂಡ್ಯದಲ್ಲಿ ಭುಗಿಲೆದ್ದ ರೈತರ ಆಕ್ರೋಶ:

CWMA ನಿರ್ಧಾರ ಹೊರಬೀಳುತ್ತಿದ್ದಂತೆಯೇ ಕಾವೇರಿ ಹೋರಾಟದ ಗಡಿನಾಡು ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು ತೀವ್ರಗೊಂಡಿದೆ. ಮಂಡ್ಯದ ಪ್ರಮುಖ ಕೇಂದ್ರವಾದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ನೂರಾರು ರೈತರು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ CWMA ವಿರುದ್ಧ ಧಿಕ್ಕಾರದ ಕೂಗು ಕೂಗಿದರು.

ಆಕ್ರೋಶಗೊಂಡ ಪ್ರತಿಭಟನಾಕಾರರು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದರು. ರಸ್ತೆ ಮಧ್ಯದಲ್ಲೇ ಕುಳಿತು ಧರಣಿ ನಡೆಸಿದ ರೈತರು, ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ಹಚ್ಚಲು ತಂದಿದ್ದ ಟಯರ್ ಹಾಗೂ ಪೆಟ್ರೋಲ್ ಕ್ಯಾನ್‌ಗಳನ್ನು ವಶಪಡಿಸಿಕೊಂಡರು. ಇದರಿಂದಾಗಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕಾದಾಟದ ವಾತಾವರಣ ನಿರ್ಮಾಣವಾಗಿ, ತೀವ್ರ ವಾಗ್ವಾದ ನಡೆಯಿತು.

ಮುಂದಿನ ನಡೆ ಏನು?

ಕರ್ನಾಟಕದ ಪಾಲಿಗೆ ಕುಡಿಯುವ ನೀರಿಗೇ ಕಂಠಕ ಎದುರಾಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ ಎಂಬುದು ರೈತರ ಸ್ಪಷ್ಟ ನಿಲುವಾಗಿದೆ. ಸರ್ಕಾರದ ಮುಂದಿನ ಕಾನೂನು ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ನಿರ್ಧಾರದ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
BWSSB water restrictions: ಕುಡಿಯುವ ನೀರಲ್ಲಿ ಬೈಕ್, ಕಾರು ತೊಳೆದರೆ ಬೀಳುತ್ತೆ ₹5000 ದಂಡ! ಜಲಮಂಡಳಿ ಕಠಿಣ ಆದೇಶ!