
ಬೆಂಗಳೂರು/ಮಂಡ್ಯ (ಜು.30): ರಾಜ್ಯಾದ್ಯಂತ ತೀವ್ರ ಮಳೆ ಕೊರತೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ಜನಸಾಮಾನ್ಯರು ಹಾಗೂ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಗಂಭೀರ ಪರಿಸ್ಥಿತಿಯ ನಡುವೆಯೂ ಕರ್ನಾಟಕಕ್ಕೆ ಮತ್ತೊಂದು ದೊಡ್ಡ ಕಾವೇರಿ ಆಘಾತ ಎದುರಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ನೀಡಿದ್ದ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿಹಿಡಿದಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 3,500 ಕ್ಯೂಸೆಕ್ನಂತೆ ಒಟ್ಟು 4.5 ಟಿಎಂಸಿ ನೀರು ಹರಿಸುವಂತೆ ನಿರ್ದೇಶನ ನೀಡಿದೆ.
ರಾಜ್ಯದಲ್ಲಿ ಕುಡಿಯುವ ನೀರಿಗೂ ಅಭಾವ ಎದುರಾಗಿರುವ ಈ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ CWMA ಮುಂದೆ ಸುದೀರ್ಘ ವಾದ ಮಂಡಿಸಿತ್ತು. ರಾಜ್ಯದ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಬಿಚ್ಚಿಟ್ಟು, ಆದೇಶ ಮರುಪರಿಶೀಲಿಸುವಂತೆ ಮನವೊಲಿಸಲು ಯತ್ನಿಸಿತ್ತು. ಆದರೆ, ಕರ್ನಾಟಕದ ಮೇಲ್ಮನವಿಯನ್ನು ತಿರಸ್ಕರಿಸಿರುವ ಪ್ರಾಧಿಕಾರವು, CWRC ಶಿಫಾರಸು ಮಾಡಿದ ಆದೇಶವನ್ನೇ ಖಾಯಂಗೊಳಿಸಿದೆ.
CWMA ನಿರ್ಧಾರ ಹೊರಬೀಳುತ್ತಿದ್ದಂತೆಯೇ ಕಾವೇರಿ ಹೋರಾಟದ ಗಡಿನಾಡು ಮಂಡ್ಯದಲ್ಲಿ ಪ್ರತಿಭಟನೆಯ ಕಿಚ್ಚು ತೀವ್ರಗೊಂಡಿದೆ. ಮಂಡ್ಯದ ಪ್ರಮುಖ ಕೇಂದ್ರವಾದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ನೂರಾರು ರೈತರು ಮತ್ತು ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕೇಂದ್ರ ಸರ್ಕಾರ ಹಾಗೂ CWMA ವಿರುದ್ಧ ಧಿಕ್ಕಾರದ ಕೂಗು ಕೂಗಿದರು.
ಆಕ್ರೋಶಗೊಂಡ ಪ್ರತಿಭಟನಾಕಾರರು ಹಳೆ ಬೆಂಗಳೂರು-ಮೈಸೂರು ಹೆದ್ದಾರಿಯನ್ನು ತಡೆದು ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಿದರು. ರಸ್ತೆ ಮಧ್ಯದಲ್ಲೇ ಕುಳಿತು ಧರಣಿ ನಡೆಸಿದ ರೈತರು, ಟಯರ್ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಬೆಂಕಿ ಹಚ್ಚಲು ತಂದಿದ್ದ ಟಯರ್ ಹಾಗೂ ಪೆಟ್ರೋಲ್ ಕ್ಯಾನ್ಗಳನ್ನು ವಶಪಡಿಸಿಕೊಂಡರು. ಇದರಿಂದಾಗಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಕಾದಾಟದ ವಾತಾವರಣ ನಿರ್ಮಾಣವಾಗಿ, ತೀವ್ರ ವಾಗ್ವಾದ ನಡೆಯಿತು.
ಕರ್ನಾಟಕದ ಪಾಲಿಗೆ ಕುಡಿಯುವ ನೀರಿಗೇ ಕಂಠಕ ಎದುರಾಗಿರುವಾಗ ತಮಿಳುನಾಡಿಗೆ ನೀರು ಹರಿಸುವುದು ಅಸಾಧ್ಯ ಎಂಬುದು ರೈತರ ಸ್ಪಷ್ಟ ನಿಲುವಾಗಿದೆ. ಸರ್ಕಾರದ ಮುಂದಿನ ಕಾನೂನು ಹೋರಾಟ ಹಾಗೂ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ನಿರ್ಧಾರದ ಮೇಲೆ ಈಗ ಎಲ್ಲರ ಕಣ್ಣು ನೆಟ್ಟಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ