
ನವದೆಹಲಿ (ಅ.12): ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಮ್ಮೆ ಆಘಾತ ಉಂಟಾಗಿದ್ದು, ಅ.16ರಿಂದ ಮತ್ತೆ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್ನಂತೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶ ನೀಡಿದೆ. ನವದೆಹಲಿಯ ಬುಧವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಈ ಸಂಬಂಧ ಆದೇಶ ನೀಡಲಾಗಿದೆ.
ರಾಜ್ಯದಲ್ಲಿ ಮುಂಗಾರು ಕೈ ಕೊಟ್ಟಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆಯಿದೆ. ರಾಜ್ಯದಲ್ಲಿ ತೀವ್ರ ಬರದ ಪರಿಸ್ಥಿತಿಯಿದ್ದು, ಅ.10ರವರೆಗೆ ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳ ಒಳಹರಿವಿನಲ್ಲಿ ಶೇ.50.89ರಷ್ಟು ಕೊರತೆಯಾಗಿದೆ. ಜೊತೆಗೆ, ಮುಂದಿನ ದಿನಗಳಲ್ಲಿ ಈ ಭಾಗದ ಜನರಿಗೆ ಕುಡಿವ ನೀರಿಗೂ ಕೊರತೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಹೆಚ್ಚಾಗುವ ಯಾವುದೇ ಆಶಾಭಾವ ಇಲ್ಲ. ಹೀಗಾಗಿ, ತಮಿಳುನಾಡಿಗೆ ನೀರು ಬಿಡುಗಡೆ ಮಾಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಕರ್ನಾಟದ ಅಧಿಕಾರಿಗಳು ವಾದಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ತಮಿಳುನಾಡು ಅಧಿಕಾರಿಗಳು, ಮುಂದಿನ 15 ದಿನಗಳವರೆಗೆ ನಿತ್ಯ 16 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಆದೇಶ ನೀಡಬೇಕು ಎಂದು ಆಗ್ರಹಿಸಿದರು. ಉಭಯ ರಾಜ್ಯಗಳ ವಾದ ಆಲಿಸಿದ ಸಮಿತಿಯ ಅಧಿಕಾರಿಗಳು, ಅ.16ರಿಂದ 15 ದಿನಗಳ ಕಾಲ ತಮಿಳುನಾಡಿಗೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡುವಂತೆ ಆದೇಶ ನೀಡಿದರು.
ಸನಾತನ ಧರ್ಮ ಉಳಿದರೆ ಮಾತ್ರ ಸಂವಿಧಾನ ಉಳಿಯುತ್ತದೆ: ಶಾಸಕ ಯತ್ನಾಳ್
3000 ಕ್ಯುಸೆಕ್ ಆದೇಶ ಪ್ರಶ್ನಿಸಲು ರಾಜ್ಯ ಸಿದ್ಧತೆ: ಅ.13ರ ಶುಕ್ರವಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಸಭೆ ನಿಗದಿಯಾಗಿದ್ದು, ನಿಯಂತ್ರಣ ಸಮಿತಿಯ ಆದೇಶವನ್ನು ಪ್ರಶ್ನಿಸಲು ಕರ್ನಾಟಕ ಸಿದ್ಧತೆ ನಡೆಸಿದೆ. ಇದೇ ವೇಳೆ, ಸಮಿತಿಯ ಆದೇಶಕ್ಕೆ ಆಕ್ಷೇಪ ವ್ಯಕ್ತಪಡಿಸಲು ತಮಿಳುನಾಡು ಕೂಡ ಸಿದ್ಧತೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ