
ಚಿಂತಾಮಣಿ(ಚಿಕ್ಕಬಳ್ಳಾಪುರ)(ನ.16): ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಕ್ಫ್ ಆಸ್ತಿ ವಿವಾದ ಇದೀಗ ಚಿಂತಾಮಣಿಯಲ್ಲೂ ಗದ್ದಲಕ್ಕೆ ಕಾರಣವಾಗಿದೆ. ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಉಳುಮೆ ವಿಚಾರದಲ್ಲಿ ಮುಸ್ಲಿಂ ಮುಖಂಡರು ಮತ್ತು ರೈತರ ನಡುವೆ ವಾಗ್ವಾದ ನಡೆದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು. ಈ ಬಗ್ಗೆ ವಕ್ಫ್ ಮಂಡಳಿಯ ದೂರಿ ನಂತೆ ಎಫ್ಐಆರ್ ದಾಖಲಾಗಿದ್ದು, ರೈತರ ಟ್ರ್ಯಾಕ್ಟರ್ವೊಂದನ್ನು ವಶಕ್ಕೆ ಪಡೆಯಲಾಗಿದೆ.
ಆಗಿದ್ದೇನು?:
ತಿಮ್ಮಸಂದ್ರದ ಸರ್ವೇ ನಂಬರ್ 13/1, 13/3 ಮತ್ತು 20ರ 10 ಆಸ್ತಿಗೆ ಸಂಬಂದ ವಕ್ಫ್ ಮತ್ತು ರೈತರ ನಡುವೆ ಹಿಂದಿನಿಂದಲೂ ತಿಕ್ಕಾಟ ನಡೆದುಕೊಂಡು ಬಂದಿದೆ. ಪಹಣಿಯಲ್ಲಿ ವಕ್ಫ್ ಎಂದು ನಮೂದಾಗಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ರೈತರು 2014ರಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದು, ತೀರ್ಪು ವಕ್ಫ್ ಮಂಡಳಿ ಪರವಾಗಿ ಬಂದಿತ್ತು. ಇದನ್ನು ಪ್ರಶ್ನಿಸಿ ರೈತರು ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ಜಾಮಿಯಾ ಮಸೀದಿ ಸಮಿತಿ ಈ ಜಮೀನನ್ನು ಸರ್ವೇ ಮಾಡಿಸಿ ಸುತ್ತಲೂ ಮುಳ್ಳು ತಂತಿ ಬೇಲಿ ಹಾಕಿದೆ. ಆದರೆ 70 ವರ್ಷಗಳಿಂದ ನಾವು ಈ ಜಮೀನಲ್ಲಿ ಉಳುಮೆ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ. ಆದರೆ ಈಗ ವಕ್ಫ್ ಬೋರ್ಡ್ನವರು ನಮ್ಮ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮುಳ್ಳು ತಂತಿ ಬೇಲಿ ಹಾಕಿಸಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆಂಬುದು ತಿಮ್ಮಸಂದ್ರ ಗ್ರಾಮದ ಬಡ ದಲಿತ ಕುಟುಂಬದವರ ಆರೋಪ.
ರಾಜ್ಯಾದ್ಯಂತ ವಕ್ಫ್ ಆಸ್ತಿಗೆ ಸಂಬಂಧಿಸಿ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದೀಗ ಏಕಾಏಕಿ ಜಮೀನಿಗೆ ಹಾಕಿದ ಬೇಲಿ ಕಿತ್ತು ಹಾಕಿದ ರೈತರು, ಟ್ರಲ್ಯಾಕ್ಟ್ ಮೂಲಕ ಉಳುಮೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಜಾಮಿಯಾ ಮಸೀದಿ ಸಮಿತಿ ಸದಸ್ಯರು ಆಗಮಿಸಿ ಆಕ್ಷೇಪ ತೆಗೆದಿದ್ದಾರೆ. ಇದರಿಂದ ಎರಡೂ ಗುಂಪುಗಳ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಚಿಂತಾಮಣಿ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಶಿವರಾಜ್ ಮತ್ತು ಸಿಬ್ಬಂದಿ ದಲಿತರು ಹಾಗೂ ಜಾಮಿಯಾ ಮಸೀದಿ ಸಮಿತಿ ಸದಸ್ಯರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಜಾಮಿಯಾ ಮಸೀದಿ ಸಮಿತಿ ಕಾರ್ಯದರ್ಶಿ ಮಹಮ್ಮದ್ ಇನಾಯತ್ ಅವರು ಅಕ್ರಮ ಪ್ರವೇಶದ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣದಾಖಲಿಸಿಕೊಂಡಿರುವ ಪೊಲೀಸರು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಹೈಕೋರ್ಟ್ನಲ್ಲಿರುವ ಕಾರಣ ಎರಡೂ ಕಡೆಯವರು ಯಥಾಸ್ಥಿತಿ ಕಾಪಾಡುವಂತೆ ತಹಸೀಲ್ದಾರ್ ಸುದರ್ಶನ್ ಸೂಚಿಸಿದ್ದಾರೆ.
2016 ರಲ್ಲಿ 10 ರೈತರು ಈ ಜಮೀನು ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ವಕ್ಸ್ ಕಡೆಯಿಂದ ರೈತರ ವಿರುದ್ಧ ಅತಿಕ್ರಮ ಪ್ರವೇಶದ ದೂರು ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ, ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ