
ಬೆಂಗಳೂರು(ಸೆ.16): ಪ್ರಧಾನಮಂತ್ರಿ ನರೇಂದ್ರ ಮೋದಿ ಎದುರು ಮಾತಾಡುವ ಧೈರ್ಯವಿಲ್ಲದ ಬಿಜೆಪಿ ನಾಯಕರು, ಸಂಸದರಿಂದಲೇ ರಾಜ್ಯದ ಹಿತಕ್ಕೆ ಧಕ್ಕೆಯಾಗಿದೆ. ಕಾವೇರಿ ವಿಚಾರ, ರಾಜ್ಯದ ಹಿತಾಸಕ್ತಿಯ ವಿಚಾರಗಳಲ್ಲಿ ರಾಜ್ಯಕ್ಕೆ ತೊಂದರೆ, ಅನ್ಯಾಯ ಆಗುತ್ತಿರುವುದು ಬಿಜೆಪಿಯವರಿಂದಲೇ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಿಡಿ ಕಾರಿದ್ದಾರೆ.
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕಾಂಗ್ರೆಸ್ ರಾಜಕೀಯ ಮಾಡುತ್ತಿದೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಈ ಬಗ್ಗೆ ಮಾತನಾಡುವ ನೈತಿಕತೆ ಅವರಿಗೆ ಇಲ್ಲ.
ತಮಿಳುನಾಡಿಗೆ ಮತ್ತೆ 15 ದಿನ ತಲಾ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಿ: ಸಿಡಬ್ಲ್ಯೂಆರ್ಸಿ ಸೂಚನೆ
ಕೇಂದ್ರ ಪರಿಸರ ಇಲಾಖೆಯಿಂದ ಅನೇಕ ಕಾಮಗಾರಿ ಹಾಗೂ ಯೋಜನೆಗಳಿಗೆ ಅನುಮತಿ ದೊರೆಯುವುದು ಬಾಕಿಯಿದೆ. ಅವುಗಳಿಗೆ ನಿರಪೇಕ್ಷಣಾ ಪತ್ರ ತರಲು ಬಿಜೆಪಿ ಕೈಯಲ್ಲಿ ಆಗಿಲ್ಲ. ರಾಜ್ಯದ ಅಭಿವೃದ್ದಿಗೆ ಅವರಿಂದಲೇ ತೊಂದರೆ ಆಗುತ್ತಿದೆ. ನೀರಿನ ವಿಚಾರದಲ್ಲಿ ರಾಜಕಾರಣ ನಮಗೆ ಬೇಕಿಲ್ಲ. ಎಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡೋಣ ಎನ್ನುವುದು ನನ್ನ ಧೋರಣೆ. ಬಿಜೆಪಿಯವರು ನನಗೆ ಬೈಯಲಿ, ಉಗಿಯಲಿ, ಏನು ಬೇಕಾದರೂ ಹೇಳಲಿ, ನಾನು ರಾಜ್ಯದ ಹಿತಾಸಕ್ತಿಗೆ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.
ಎಲ್ಲಾ ನದಿ ವ್ಯಾಜ್ಯಗಳು ಮೂರು ವರ್ಷಗಳಲ್ಲಿ ಇಥ್ಯರ್ತವಾಗಬೇಕು ಎಂದು ಕೇಂದ್ರ ಸರ್ಕಾರವೇ ಕಾನೂನು ಮಾಡಿದೆ. ಅವರೇ ಎರಡೂ ರಾಜ್ಯಗಳನ್ನು ಕೂರಿಸಿಕೊಂಡು ಸಮಸ್ಯೆ ಬಗೆಹರಿಸಬಹುದಲ್ಲವೇ? ಎಂಥೆಂಥ ಸಮಸ್ಯೆಗಳನ್ನು ಬಗೆಹರಿಸಲಾಗುತ್ತದೆ, ಇದು ಆಗುವುದಿಲ್ಲವೇ? ಮೇಕೆದಾಟು ಯೋಜನೆ ಆಗಿದ್ದರೆ ಈ ಸಮಸ್ಯೆ ಬರುತ್ತಿರಲಿಲ್ಲ ಎಂದು ಕೇಂದ್ರದ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದರು.
ಇಂಡಿಯಾ ಒಕ್ಕೂಟಕ್ಕಾಗಿ ಸಭೆ ನಡೆಸುತ್ತಾರೆ, ನೀರಿನ ವಿಚಾರಕ್ಕೆ ತಮಿಳುನಾಡು ಜತೆ ಸಭೆ ನಡೆಸಲು ಆಗುವುದಿಲ್ಲವೇ ಎಂಬ ಪ್ರತಿಪಕ್ಷಗಳ ಹೇಳಿಕೆಗೆ, ನಾವು ಎಲ್ಲಾ ಸಭೆ ಮಾಡಿದ್ದೇವೆ. ಆಯಾಯ ನಾಯಕರಿಗೆ ಅವರವರ ರಾಜ್ಯಗಳ ಹಿತಾಸಕ್ತಿ ಮುಖ್ಯ. ಮೇಲೆ ಕುಳಿತಿರುವ ಕೇಂದ್ರ ಸರ್ಕಾರಕ್ಕೆ ವಾಸ್ತವಾಂಶ ಗೊತ್ತಿದೆ. ಇಬ್ಬರನ್ನು ಕರೆಸಿ ಮಾತುಕತೆ ನಡೆಸಲಿ ಎಂದು ಹೇಳಿದರು.
2 ದಿನ ಕಾವೇರಿ ನೀರು ಬಿಡಲು ತಜ್ಞರ ಸಲಹೆ
ಬೆಂಗಳೂರು: ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರಕ್ಕೆ ಹಾಗೂ ಸುಪ್ರೀಂ ಕೋರ್ಟಿಗೆ ಮನವಿ ಸಲ್ಲಿಸುವ ಮೊದಲು ಎರಡು ದಿನ ನೀರು ಹರಿಸಿ ಎಂದು ಕಾನೂನು ತಜ್ಞರು ಸಲಹೆ ನೀಡಿದ್ದಾರೆ. ಹೀಗಾಗಿ ಕಾನೂನು ತಜ್ಞರ ಸಲಹೆ ಪಾಲಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನೀರು: ಸರ್ಕಾರದ ವೈಫಲ್ಯವನ್ನು ಜನರು ಕ್ಷಮಿಸಲ್ಲ, ಬೊಮ್ಮಾಯಿ
ನಾವು ನೀರು ಬಿಡುವುದಿಲ್ಲ ಎಂದು ಹೇಳಿದ್ದೆವು. ಆದರೆ ಸುಪ್ರೀಂ ಕೋರ್ಟಿನ ಮುಂದೆ ಹೋದಾಗ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲನೆ ಮಾಡಲಾಗಿದೆಯೇ ಎಂದು ಪರಿಶೀಲಿಸಲಾಗುತ್ತದೆ. ಪಾಲನೆ ಮಾಡದೆ ಇದ್ದರೆ ಕಾನೂನಾತ್ಮಕವಾಗಿ ತೊಂದರೆಯಾಗುತ್ತದೆ ಎನ್ನುವ ಅಭಿಪ್ರಾಯವನ್ನು ಕಾನೂನು ತಜ್ಞರು ನೀಡಿದ್ದಾರೆ. ಹೀಗಾಗಿ ಕಾನೂನು ತಜ್ಞರ ಸಲಹೆ ಪಾಲಿಸುತ್ತೇವೆ ಎಂದರು.
ಕೇಂದ್ರ ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ವಸ್ತುಸ್ಥಿತಿ ವಿವರಿಸಿದ್ದೇನೆ. ಮುಂದೆ ನಾವು ಯಾವ ನಿರ್ಧಾರ ತೆಗೆದುಕೊಳ್ಳುತ್ತೇವೆ ಎನ್ನುವುದನ್ನೂ ಸಹ ತಿಳಿಸಿದ್ದೇವೆ. ದೆಹಲಿಯಲ್ಲಿ ಸಚಿವರ ಬಳಿ ಚರ್ಚೆ ಏನಾಯಿತು ಎಂದು ಸಂದರ್ಭ ಬಂದಾಗ ವಿವರಿಸುತ್ತೇನೆ ಎಂದು ಹೇಳಿದರು. ನೀರಾವರಿ ಸಮಿತಿಯು ನಿತ್ಯ 5000 ಕ್ಯುಸೆಕ್ ನೀರು ಬಿಡುವಂತೆ ಕರ್ನಾಟಕ್ಕೆ ಸೂಚಿಸಿದ್ದರಿಂದ ಸರ್ವಪಕ್ಷ ಸಭೆ ನಡೆಸಿದ್ದ ಸಿದ್ದರಾಮಯ್ಯ ಸರ್ಕಾರ, ಸಭೆಯ ಸಲಹೆಯಂತೆ ನೀರು ಬಿಡದಿರಲು ನಿರ್ಧರಿಸಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ