‘ದೀಪಿಕಾ’ ಸ್ಕಾಲರ್‌ ಶಿಪ್‌ನಿಂದ 37,000 ಮಕ್ಕಳಿಗೆ ಲಾಭ : ಸಿಎಂ ಸಿದ್ದರಾಮಯ್ಯ

Kannadaprabha News   | Kannada Prabha
Published : Sep 20, 2025, 07:02 AM IST
Siddaramaiah

ಸಾರಾಂಶ

ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಿಸುವ ಅಜೀಂ ಪ್ರೇಂ ಜಿ ಫೌಂಡೇಷನ್‌ನ ‘ದೀಪಿಕಾ’ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.

ಬೆಂಗಳೂರು : ‘ದೀಪಿಕಾ’ ವಿದ್ಯಾರ್ಥಿ ವೇತನದಿಂದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ 37 ಸಾವಿರ ವಿದ್ಯಾರ್ಥಿನಿಯರಿಗೆ ಪ್ರಯೋಜನವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹೆಬ್ಬಾಳದ ಜಿಕೆವಿಕೆಯಲ್ಲಿ ಶುಕ್ರವಾರ ಉನ್ನತ ಶಿಕ್ಷಣ ಇಲಾಖೆ ಮತ್ತು ಅಜಿಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ದೀಪಿಕಾ ಯೋಜನೆಯ ಲೋಕಾರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಐಟಿ ದಿಗ್ಗಜರಾದ ಅಜೀಂ ಪ್ರೇಮ್‌ ಜಿ ಅವರು ಅಜೀಂ ಪ್ರೇಮ್‌ ಜಿ ಫೌಂಡೇಶನ್ ಮೂಲಕ ವಾರ್ಷಿಕ 30 ಸಾವಿರ ರು.ನಂತೆ 37,000 ವಿದ್ಯಾರ್ಥಿನಿಯರಿಗೆ ‘ದೀಪಿಕಾ’ ವಿದ್ಯಾರ್ಥಿ ವೇತನ ನೀಡಲಿದ್ದಾರೆ. ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೌಷ್ಠಿಕ ಆಹಾರ ಪೂರೈಸುತ್ತಿರುವ ಫೌಂಡೇಷನ್‌ ಹಲವು ಜನಪರ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಪ್ರಶಂಸಿಸಿದರು.

ವಿದ್ಯಾರ್ಥಿನಿಯರು ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು. ಪ್ರತಿ ವರ್ಷ ತಪ್ಪದೇ ಉತ್ತೀರ್ಣರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಹೆಚ್ಚಾಗಿ ಗ್ರಾಮೀಣ ಭಾಗದ ಮಕ್ಕಳಿದ್ದು, ಅವರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಈ ಯೋಜನೆಯನ್ನು ಅಜೀಂ ಪ್ರೇಮ್‌ ಜಿ ಆರಂಭಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೆಣ್ಣುಮಕ್ಕಳು ಶಿಕ್ಷಿತರಾಗಬೇಕು:

ದೇಶದಲ್ಲಿ ಹಿಂದಿನಿಂದಲೂ ಶೂದ್ರರಂತೆ, ಹೆಣ್ಣುಮಕ್ಕಳೂ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದಾರೆ. ಹೆಣ್ಣುಮಕ್ಕಳು ಬಾಲ್ಯ ವಿವಾಹ, ಬಾಲ ಗರ್ಭಿಣಿ, ಪೋಕ್ಸೋ ಸಮಸ್ಯೆ, ಬಾಲ ಕಾರ್ಮಿಕ ಪದ್ಧತಿಗಳಿಗೆ ಬಲಿಯಾಗುತ್ತಿದ್ದಾರೆ. ಆದ್ದರಿಂದ ಹೆಣ್ಣು ಮಕ್ಕಳಿಗೆ ಶಿಕ್ಷಣ ಅತ್ಯಗತ್ಯವಾಗಿದೆ. ಮಹಿಳೆಯರಿಗೆ ಶಿಕ್ಷಣ ದೊರೆತರೆ, ಸಮಾಜದ ಸವಾಲುಗಳನ್ನು ಎದುರಿಸಲು ಸಮರ್ಥರಾಗುತ್ತಾರೆ ಎಂದು ಅಭಿಪ್ರಾಯಪಟ್ಟರು.

ಸಮಾಜದಲ್ಲಿನ ಅಸಮಾನತೆ ನಿವಾರಿಸದ ಹೊರತು ಸಮಸಮಾಜದ ನಿರ್ಮಾಣ ಸಾಧ್ಯವಿಲ್ಲ. ಸಮಾಜದಲ್ಲಿ ಮೂಢನಂಬಿಕೆ, ಮೌಢ್ಯ ನಿವಾರಿಸಲು ವೈಚಾರಿಕತೆ ಹಾಗೂ ವೈಜ್ಞಾನಿಕ ಶಿಕ್ಷಣ ಅಗತ್ಯ. ಅಜ್ಞಾನದ ಲಾಭವನ್ನು ಪಟ್ಟಭದ್ರಹಿತಾಸಕ್ತಿಗಳು ಪಡೆಯುತ್ತಿದ್ದು, ಇದರಿಂದ ಪಾರಾಗಲು ಶಿಕ್ಷಣ ದೊರಕಬೇಕು. ಆದ್ದರಿಂದ ನಮ್ಮ ಸರ್ಕಾರ, ವಿದ್ಯಾರ್ಥಿಗಳಿಗೆ ಸಂವಿಧಾನo ಪೀಠಿಕೆ ಓದಿಸುವ ಪರಿಪಾಠ ಆರಂಭಿಸಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಚಿವರಾದ ಎಚ್‌.ಕೆ.ಪಾಟೀಲ್‌, ಶರಣ ಪ್ರಕಾಶ ಪಾಟೀಲ್‌, ಡಾ.ಎಂ.ಸಿ.ಸುಧಾಕರ್‌, ಅಜೀಂ ಪ್ರೇಮ್‌ ಜಿ ಫೌಂಡೇಶನ್‌ನ ಅಜೀಂ ಪ್ರೇಮ್‌ ಜಿ ಮತ್ತಿತರರು ಉಪಸ್ಥಿತರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!