ದೇವರಾಜ ಅರಸು ಕಾರ್ಯಗಳು ನಮಗೆಲ್ಲ ಮಾದರಿ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Jun 7, 2023, 3:00 AM IST
Highlights

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳೆಲ್ಲವೂ ನಮಗೆ ಸ್ಫೂರ್ತಿ ತುಂಬುವಂತಹದ್ದು. ಕರ್ನಾಟಕ ಕಂಡ ಮುತ್ಸದ್ದಿ ರಾಜಕಾರಣಿ, ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದರು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು(ಜೂ.07):  ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದಾಗ ಹಲವು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಂಡಿದ್ದರು. ಧ್ವನಿ ಇಲ್ಲದ ಜನರಿಗೆ ಧ್ವನಿ ನೀಡುವಂತಹ ಕೆಲಸ ಮಾಡಿ ನಮಗೆಲ್ಲ ಆದರ್ಶವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸಿಎಂ ದೇವರಾಜ ಅರಸು ಅವರ 41ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನಸೌಧದಲ್ಲಿನ ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿ ಮಾಡಿದ ಕೆಲಸಗಳೆಲ್ಲವೂ ನಮಗೆ ಸ್ಫೂರ್ತಿ ತುಂಬುವಂತಹದ್ದು. ಕರ್ನಾಟಕ ಕಂಡ ಮುತ್ಸದ್ದಿ ರಾಜಕಾರಣಿ, ಸಾಮಾಜಿಕ ಸುಧಾರಣೆಯ ಹರಿಕಾರರಾಗಿದ್ದರು. ಭೂ ಸುಧಾರಣೆ ಕಾಯ್ದೆ, ಮಲ ಹೊರುವ ಪದ್ಧತಿ ರದ್ದು, ಜೀತ ಪದ್ಧತಿ ರದ್ದು, ರೈತರ ಸಾಲ ವಿಮೋಚನಾ ಕಾನೂನು ಜಾರಿ, ಹಾವನೂರು ಆಯೋಗ ರಚಿಸಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡಿದಂತಹ ಹಲವು ಕ್ರಾಂತಿಕಾರಿ ಕ್ರಮಗಳನ್ನು ಕೈಗೊಂಡರು ಎಂದು ತಿಳಿಸಿದರು.

ರಾಜ್ಯದ 11 ಹಿರಿಯ ಐಎಸ್‌ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿದ ಕಾಂಗ್ರೆಸ್‌ ಸರ್ಕಾರ

ರಾಜಕೀಯವಾಗಿ ಪ್ರಾತಿನಿಧ್ಯ ಇಲ್ಲದ ಸಮುದಾಯದವರನ್ನು ಶಾಸಕರು, ವಿಧಾನಪರಿಷತ್‌ ಸದಸ್ಯರನ್ನಾಗಿ ಮಾಡಿದ ಕೀರ್ತಿ ದೇವರಾಜ ಅರಸು ಅವರಿಗೆ ಸಲ್ಲುತ್ತದೆ. ಅಧಿಕಾರ ಎಲ್ಲರಿಗೂ ಸಿಗಬೇಕೆಂಬುದು ಅವರ ಆಶಯವಾಗಿತ್ತು. ಅದಕ್ಕೆ ತಕ್ಕಂತೆ ಕೆಲಸವನ್ನೂ ಮಾಡಿದರೂ. ಉಳುವವನೇ ಭೂಮಿಯ ಒಡೆಯ ಎಂಬ ಕಾನೂನು ಜಾರಿ ಮಾಡುವ ಮೂಲಕ ಭೂರಹಿತ ರೈತರು ಭೂಮಿಯ ಒಡೆಯನನ್ನಾಗಿ ಮಾಡಿದರು ಎಂದು ಶ್ಲಾಘಿಸಿದರು.
ಸಚಿವರಾದ ಕೆ.ಎನ್‌. ರಾಜಣ್ಣ, ಶಿವರಾಜ ತಂಗಡಗಿ ಸೇರಿದಂತೆ ಹಲವರಿದ್ದರು. 

ವಿಶೇಷ ಗಿಡ ನೆಟ್ಟ ಸಿಎಂ

ದೇವರಾಜ ಅರಸು ಅವರ ಸ್ಮರಣಾರ್ಥ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧ ಉದ್ಯಾನದಲ್ಲಿ ಟರ್ಮಿನಲ್‌ ಮೆಂಟಾಲಿ ಎಂಬ ಸಸಿಯನ್ನು ನೆಟ್ಟರು. ಆಫ್ರಿಕಾ ಖಂಡ ಮಡಗಾಸ್ಕರ್‌ನಲ್ಲಿ ಮಾತ್ರ ಕಾಣಸಿಗುವ ಈ ಗಿಡವನ್ನು ಇದೇ ಮೊದಲ ಬಾರಿಗೆ ವಿಧಾನಸೌಧ ಉದ್ಯಾನದಲ್ಲಿ ನೆಡಲಾಗಿದೆ. 40 ಅಡಿ ಎತ್ತರಕ್ಕೆ ಬೆಳೆಯುವ ಈ ಗಿಡವು, ವಾಯು ಮಾಲಿನ್ಯ ತಡೆಗೆ ಹೆಚ್ಚಿನ ಸಹಕಾರಿಯಾಗಲಿದೆ ಎಂದು ಸಿದ್ದರಾಮಯ್ಯ ವಿವರಿಸಿದರು.

click me!