Dharmasthala Case: ಧರ್ಮಸ್ಥಳ ಕೇಸಲ್ಲಿ ಪ್ರಕಾಶ್ ರಾಜ್ ಹೆಸರು ಕೇಳಿಬಂದಿದ್ದೇಕೆ? ಕೇರಳದಿಂದ ₹200 ಕೋಟಿ ಬಜೆಟ್‌!

Published : Jun 11, 2026, 05:09 PM IST
Dharmasthala Burude Case

ಸಾರಾಂಶ

ಧರ್ಮಸ್ಥಳದ 'ಬುರುಡೆ ಪ್ರಕರಣ'ದ ಪ್ರಮುಖ ಆರೋಪಿ ಚಿನ್ನಯ್ಯ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಕ್ಷೇತ್ರದ ವಿರುದ್ಧ 200 ಕೋಟಿ ರೂಪಾಯಿಗಳ ಬೃಹತ್ ಷಡ್ಯಂತ್ರ ನಡೆದಿದೆ ಎಂದು ಆರೋಪಿಸಿದ್ದಾನೆ. ಈ ಸಂಚಿನಲ್ಲಿ ನಟ ಪ್ರಕಾಶ್ ರಾಜ್ ಸೇರಿದಂತೆ ಹಲವು ಪ್ರಭಾವಿಗಳ ಹೆಸರುಗಳನ್ನು ಉಲ್ಲೇಖಿಸಿದ್ದು, ಎಸ್‌ಐಟಿ ತನಿಖೆಯ ವಿಳಂಬವನ್ನು ಪ್ರಶ್ನಿಸಿದ್ದಾನೆ.

ಬೆಂಗಳೂರು: ಧರ್ಮಸ್ಥಳ ಗ್ರಾಮದ ಬಹುಚರ್ಚಿತ ‘ಬುರುಡೆ ಪ್ರಕರಣ’ದ ತನಿಖೆಗೆ ಸಂಬಂಧಿಸಿದಂತೆ ಈಗ ಅತ್ಯಂತ ಮಹತ್ವದ ಹಾಗೂ ಸ್ಫೋಟಕ ತಿರುವು ಸಿಕ್ಕಿದೆ. ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯತೆಗೆ ಕುಂದು ತರಲು ಬರೋಬ್ಬರಿ 200 ಕೋಟಿ ರೂಪಾಯಿಗಳ ಬಜೆಟ್ ಇಟ್ಟುಕೊಂಡು ಬೃಹತ್ ಷಡ್ಯಂತ್ರ ರೂಪಿಸಲಾಗಿತ್ತು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಇಡೀ ಸಂಚಿನ ಕುರಿತು ಸಮಗ್ರ ತನಿಖಾ ವರದಿ ಸಲ್ಲಿಕೆಗೆ ಕೋರಿ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಚಿನ್ನ ಸಿ.ಎನ್. (ಚಿನ್ನಯ್ಯ) ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದು, ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡಿದ್ದಾನೆ.

ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ ಅವರ ಮೂಲಕ ಸಲ್ಲಿಕೆಯಾಗಿರುವ ಈ ಅರ್ಜಿಯನ್ನು ಪುರಸ್ಕರಿಸಿರುವ ಹೈಕೋರ್ಟ್‌ನ ಏಕಸದಸ್ಯ ಪೀಠದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರು, ರಾಜ್ಯ ಸರ್ಕಾರ ಹಾಗೂ ವಿಶೇಷ ತನಿಖಾ ತಂಡಕ್ಕೆ (SIT) ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ತನಿಖೆಯ ಸದ್ಯದ ಸ್ಥಿತಿಗತಿಯ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಎಸ್‌ಐಟಿಗೆ ಸೂಚಿಸಿ, ವಿಚಾರಣೆಯನ್ನು ಜೂನ್ 29 ಕ್ಕೆ ಮುಂದೂಡಿದ್ದಾರೆ.

ಸೂತ್ರಧಾರರು ಹೊರಗಿದ್ದಾರೆ,  ನಾನೊಬ್ಬನೇ ಏಕೆ ಈ ಪ್ರಕರಣದಲ್ಲಿ ಬಲಿಪಶು?

ತಮ್ಮ ಅರ್ಜಿಯಲ್ಲಿ ಇಡೀ ಜಾಲವನ್ನು ಎಳೆಎಳೆಯಾಗಿ ಬಿಚ್ಚಿಟ್ಟಿರುವ ಚಿನ್ನಯ್ಯ, ಎಸ್‌ಐಟಿ (SIT) ತನಿಖೆಯ ಕರ್ತವ್ಯಲೋಪವನ್ನು ಗಂಭೀರವಾಗಿ ಪ್ರಶ್ನಿಸಿದ್ದಾರೆ. ನನ್ನ ಪಾಡಿಗೆ ನಾನಿದ್ದೆ, ಇವರೇ ನನ್ನನ್ನು ಒತ್ತಾಯಪೂರ್ವಕವಾಗಿ ಕರೆತಂದು ಇದರಲ್ಲಿ ಸಿಲುಕಿಸಿದ್ದಾರೆ. ಇಷ್ಟೆಲ್ಲಾ ದೊಡ್ಡ ಮಟ್ಟದ ಪ್ರಭಾವಿಗಳು ಸೇರಿ ಷಡ್ಯಂತ್ರ ಹೆಣೆದಿದ್ದರೂ, ಜೈಲಿಗೆ ಹೋಗಿದ್ದು ಪರಿಶಿಷ್ಟ ಜಾತಿಗೆ ಸೇರಿದ ನಾನೊಬ್ಬನೇ. ಅಸಲಿ ಸೂತ್ರಧಾರರು ಈಗಲೂ ಆರಾಮಾಗಿದ್ದಾರೆ ಎಂದು ಚಿನ್ನಯ್ಯ ತನ್ನ ಅರ್ಜಿಯಲ್ಲಿ ಉಲಲೇಖಿಸಿದ್ದಾನೆ

ಎಸ್‌ಐಟಿ ವಿಳಂಬ ನೀತಿ

ಎಫ್‌ಐಆರ್ ಸಂಖ್ಯೆ 39/2025 ರ ತನಿಖೆ ಆರಂಭವಾಗಿ ಇಷ್ಟು ದಿನಗಳಾದರೂ ಎಸ್‌ಐಟಿ ಅಂತಿಮ ವರದಿ ಸಲ್ಲಿಸದೆ ವಿಳಂಬ ಮಾಡುತ್ತಿದೆ. ಪ್ರಾಥಮಿಕ ವರದಿಯಲ್ಲಿ ಅಸಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದರೂ, ಅವರ ವಿರುದ್ಧ ಎಸ್‌ಐಟಿ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅರ್ಜಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದಾನೆ.

200 ಕೋಟಿ ರೂ. ಬಜೆಟ್ ಮತ್ತು ಕೇರಳದ ಹಣದ ಲಿಂಕ್!

ಈ ಷಡ್ಯಂತ್ರದ ಹಿಂದೆ ಅಂತರರಾಜ್ಯ ಮಟ್ಟದ ಆರ್ಥಿಕ ವಹಿವಾಟು ನಡೆದಿರುವ ಬಗ್ಗೆ ಚಿನ್ನಯ್ಯ ಕೋರ್ಟ್‌ಗೆ ಮಾಹಿತಿ ನೀಡಿದ್ದಾನೆ. ಧರ್ಮಸ್ಥಳದ ವಿರುದ್ಧ ಸುಳ್ಳು ಹಬ್ಬಿಸಲು ಒಟ್ಟು 200 ಕೋಟಿ ರೂಪಾಯಿಗಳ ಬಜೆಟ್ ಸಿದ್ಧವಾಗಿತ್ತು. ಈ ಸಂಚಿನ ಭಾಗವಾಗಿ ನನಗೆ 50 ಲಕ್ಷ ರೂಪಾಯಿ ಕೊಡುವ ಆಮಿಷವನ್ನು ಮಹೇಶ್ ಶೆಟ್ಟಿ ತಿಮರೋಡಿ ಒಡ್ಡಿದ್ದ. ಈ ಷಡ್ಯಂತ್ರಕ್ಕಾಗಿ ಕೇರಳದಿಂದ ಹಣ ಸಂದಾಯವಾಗಿದೆ. ಇದರೊಂದಿಗೆ ಚಿತ್ರದುರ್ಗದ ರಮಾ ನಾಗರಾಜ್ ಎಂಬುವವರೂ ಕೂಡ ಹಣ ನೀಡಿದ್ದಾರೆ. ತಮ್ಮ ಪತ್ನಿಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿರುವ ಹಾಗೂ ನಗದು ಹಣದ ವಹಿವಾಟಿನ ಸಂಪೂರ್ಣ ವಿವರಗಳನ್ನು ಚಿನ್ನಯ್ಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾನೆ.

ನಟ ಪ್ರಕಾಶ್ ರಾಜ್ ಹೆಸರು ಪ್ರಸ್ತಾಪ

ಚಿನ್ನಯ್ಯ ಸಲ್ಲಿಸಿರುವ ರಿಟ್ ಅರ್ಜಿಯಲ್ಲಿ ಪ್ರಭಾವಿ ವ್ಯಕ್ತಿಗಳು ಹಾಗೂ ಯೂಟ್ಯೂಬರ್‌ಗಳ ಹೆಸರುಗಳು ಉಲ್ಲೇಖವಾಗಿರುವುದು ತೀವ್ರ ಸಂಚಲನ ಮೂಡಿಸಿದೆ. ಗಿರೀಶ್ ಮಟ್ಟೆಣ್ಣವರ್ ಹೇಳಿಕೊಟ್ಟಂತೆ ನೀನು ಹೇಳಿಕೆ ಕೊಡು, 29ನೇ ತಾರೀಕು ಬಂದು ನಿನ್ನನ್ನು ಅಪ್ಪಿಕೊಳ್ಳುತ್ತೇನೆ ಎಂದು ನಟ ಪ್ರಕಾಶ್ ರಾಜ್ ಅವರು ತಮಿಳಿನಲ್ಲಿ ತಮಗೆ ಹೇಳಿದ್ದರು ಎಂಬುದಾಗಿ ಚಿನ್ನಯ್ಯ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ. ಜೊತೆಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣವರ್, ವಿಠಲಗೌಡ, ಮತ್ತು ಜಯಂತ್ ಈ ಇಡೀ ಷಡ್ಯಂತ್ರದ ಮುಖ್ಯ ರೂವಾರಿಗಳು ಎಂದು ಹೆಸರಿಸಲಾಗಿದೆ. ಯೂಟ್ಯೂಬರ್‌ಗಳಾದ ಸಮೀರ್ ಎಂ.ಡಿ ಹಾಗೂ ಅಜಯ್ ಅಂಚನ್ ಎಂಬುವವರು ತಮ್ಮ ಸ್ವಾರ್ಥಕ್ಕೆ ಬೇಕಾದ ರೀತಿಯಲ್ಲಿ 30 ರಿಂದ 35 ವೀಡಿಯೋಗಳನ್ನು ಮೊದಲೇ ಮಾಡಿಕೊಂಡಿದ್ದರು. ಅವರು ತೋರಿಸಿದ ಸ್ಥಳಗಳನ್ನೇ ನಾನು ನಂತರ ಎಸ್‌ಐಟಿ ಅಧಿಕಾರಿಗಳಿಗೆ ತೋರಿಸಬೇಕಾಯಿತು ಎಂದು ಚಿನ್ನಯ್ಯ ದೂರಿದ್ದಾರೆ.

ಚಾಕು ತೋರಿಸಿ ಬೆದರಿಕೆ, ಒತ್ತೆಯಾಳಾಗಿಟ್ಟಿದ್ದ ಗ್ಯಾಂಗ್!

ಧರ್ಮಸ್ಥಳದ ಧರ್ಮಾಧಿಕಾರಿಗಳ ವಿರುದ್ಧ ಸುಳ್ಳು ಹೇಳಲು ನನ್ನ ಆತ್ಮಸಾಕ್ಷಿ ಒಪ್ಪಲಿಲ್ಲ. ಆಗ ಮಹೇಶ್ ಶೆಟ್ಟಿ ತಿಮರೋಡಿ ಚಾಕುವಿನಿಂದ ನನ್ನನ್ನು ಕೊಲ್ಲಲು ಬಂದಿದ್ದ. ಹೇಳಿಕೊಟ್ಟಂತೆ ಕೇಳದಿದ್ದರೆ ನಿನ್ನ ಹೆಂಡತಿಯನ್ನು ಕೊಲ್ಲುತ್ತೇವೆ ಎಂದು ಹೆದರಿಸಿದ್ದರು. ಒಂದು ವೇಳೆ ತಪ್ಪು ಹೇಳಿಕೆ ನೀಡಿದರೆ, ಅದೇ ಜಾಗದಲ್ಲಿ ಹೂತು ಹಾಕುವುದಾಗಿ ಗ್ಯಾಂಗ್ ಬೆದರಿಕೆ ಹಾಕಿತ್ತು. ನನ್ನ ಕೈಗೆ ಬುರುಡೆ ಕೊಟ್ಟು ಫೋಟೋ ತೆಗೆಸಿಕೊಂಡಿದ್ದರು. ಸುಜಾತಾ ಭಟ್ ಎಂಬುವವರ ಜೊತೆ ದೆಹಲಿಗೆ ಕರೆದೊಯ್ದು ಕಂಡಕಂಡಲ್ಲಿ ಸಹಿ ಹಾಕಿಸಿಕೊಂಡರು. ವಕೀಲರ ಕಚೇರಿಯಲ್ಲಿ ಕೂರಿಸಿ ಹೇಗೆ ಹೇಳಿಕೆ ನೀಡಬೇಕೆಂದು ತರಬೇತಿ ನೀಡಲಾಗಿತ್ತು. ನನ್ನನ್ನು ಸಂಪೂರ್ಣವಾಗಿ ಒತ್ತೆಯಾಳುವಿನಂತೆ ಇರಿಸಿಕೊಳ್ಳಲಾಗಿತ್ತು. ನನಗೆ ಹಾಕಲಾಗಿದ್ದ ಮಾಸ್ಕ್‌ನ ಹಿಂದೆ ಹೆಡ್‌ಫೋನ್ ಇರಿಸಲಾಗಿತ್ತು. ಅದರಲ್ಲಿ ಕ್ಷಣಕ್ಷಣಕ್ಕೂ ನಾನು ಏನು ಮಾತನಾಡಬೇಕು ಎಂಬ ಸೂಚನೆಗಳು ಬರುತ್ತಿದ್ದವು. ಈ ಮಾನಸಿಕ ಕಿರುಕುಳ ತಾಳಲಾರದೆ ನಾನು ಒಮ್ಮೆ ಆತ್ಮ*ಹ*ತ್ಯೆಗೂ ಯತ್ನಿಸಿದ್ದೆ ಎಂದು ಚಿನ್ನಯ್ಯ ಎಂದು ಚಿನ್ನಯ್ಯ ಕೋರ್ಟ್ ಗೆ ಸಲ್ಲಿಸಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾನೆ.

"ತಪ್ಪಿತಸ್ಥರೆಲ್ಲರೂ ಹೊರಗಡೆ ಮುಕ್ತವಾಗಿ ತಿರುಗಾಡುತ್ತಿದ್ದಾರೆ. ಕಾನೂನು ಕ್ರಮ ಜರುಗಿಸುವುದಾದರೆ ಇಡೀ ಷಡ್ಯಂತ್ರ ರೂಪಿಸಿದ ಎಲ್ಲರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಬೇಕು" ಎಂದು ಚಿನ್ನಯ್ಯ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ಸದ್ಯ ಹೈಕೋರ್ಟ್ ಸರ್ಕಾರ ಮತ್ತು ಎಸ್‌ಐಟಿಗೆ ನೋಟಿಸ್ ನೀಡಿರುವುದರಿಂದ, ಜೂನ್ 29ರ ಮುಂದಿನ ವಿಚಾರಣೆಯೊಳಗೆ ಎಸ್‌ಐಟಿ ಯಾವ ರೀತಿಯ ವರದಿ ಸಲ್ಲಿಸಲಿದೆ ಮತ್ತು ಈ ಹೈಪ್ರೊಫೈಲ್ ಬುರುಡೆ ಪ್ರಕರಣ ಯಾವ ತಿರುವು ಪಡೆದುಕೊಳ್ಳಲಿದೆ ಎಂಬುದು ಕಾದು ನೋಡಬೇಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ರಾಹುಲ್‌ ಗಾಂಧಿ ಕಾಣೆಯಾಗಿದ್ದಕ್ಕೆ ರಾಜ್ಯ ಸಂಪುಟ ವಿಸ್ತರಣೆ ವಿಳಂಬ: ಪ್ರಹ್ಲಾದ್ ಜೋಶಿ ಟೀಕೆ
ಗಾನಕೋಗಿಲೆ ಎಸ್. ಜಾನಕಿ ಅಗಲಿಕೆ: ಸಂಗೀತ ಲೋಕದ ಧ್ರುವತಾರೆಗೆ ಡಿಕೆಶಿ-ಸಿದ್ದರಾಮಯ್ಯ ಭಾವುಕ ನಮನ