
ಬೆಂಗಳೂರು/ಆನೇಕಲ್ (ಸೆ.04): ಕೃತಕ ಬುದ್ಧಿಮತ್ತೆ (AI) ವಿಡಿಯೋ ಒಂದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆಗಾಗಿ, ಬೆಳ್ತಂಗಡಿ ಪೊಲೀಸರು ಯೂಟ್ಯೂಬರ್ ಸಮೀರ್ ಅವರ ಬೆಂಗಳೂರಿನ ಮನೆಗೆ ನ್ಯಾಯಾಲಯದಿಂದ ಸರ್ಚ್ ವಾರಂಟ್ ಪಡೆದುಕೊಂಡು ಪರಿಶೀಲನೆ ನಡೆಸಿದ್ದಾರೆ.
ಶನಿವಾರ ಬೆಳಿಗ್ಗೆ ಬನ್ನೇರುಘಟ್ಟ ಸಮೀಪವಿರುವ ಸಮೀರ್ ಅವರ ಬಾಡಿಗೆ ಮನೆಗೆ ಬೆಳ್ತಂಗಡಿ ಸರ್ಕಲ್ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ನೇತೃತ್ವದ ತಂಡ ಮತ್ತು ಎಫ್.ಎಸ್.ಎಲ್ (FSL) ವಿಭಾಗದ ಸಿಬ್ಬಂದಿ ತೆರಳಿದ್ದಾರೆ. ಮೊದಲಿಗೆ ಪೊಲೀಸರು ಮನೆ ಬಾಗಿಲು ಬಡಿದರೂ, ಯಾರೂ ಬಾಗಿಲು ತೆಗೆದಿಲ್ಲ. ಇದರಿಂದಾಗಿ ಮನೆಯಲ್ಲಿ ಯಾರೂ ಇಲ್ಲ ಎಂದು ಭಾವಿಸಿ ಪೊಲೀಸರು ವಾಪಸ್ ಹೋಗಲು ಸಿದ್ಧರಾಗಿದ್ದರು. ಆದರೆ, ನಂತರ ಸಮೀರ್ ಅವರಿಗೆ ದೂರವಾಣಿ ಕರೆ ಮಾಡಿ ಪೊಲೀಸರು ವಿಚಾರಿಸಿದಾಗ, ಸಮೀರ್ ಮನೆಯಲ್ಲೇ ಇರುವುದು ತಿಳಿದುಬಂದಿದೆ. ಬಳಿಕ ಸಮೀರ್ ಕುಟುಂಬದವರು ಬಾಗಿಲು ತೆರೆದಿದ್ದು, ಪೊಲೀಸರು ಮನೆಯೊಳಗೆ ಪ್ರವೇಶಿಸಿದ್ದಾರೆ.
ನ್ಯಾಯಾಲಯದ ಸರ್ಚ್ ವಾರಂಟ್ ಆಧಾರದ ಮೇಲೆ ಪೊಲೀಸರು ಈ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಮಾಡಲು ಬಳಸಿದ ಕಂಪ್ಯೂಟರ್ ಹಾಗೂ ಮೊಬೈಲ್ ಫೋನ್ಗಳನ್ನು ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ತನಿಖೆಗೆ ಯೂಟ್ಯೂಬರ್ ಸಮೀರ್ ಸರಿಯಾಗಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ