Soujanya case re-investigation: ಸೌಜನ್ಯ ಪ್ರಕರಣದಲ್ಲಿ ಅಚ್ಚರಿ ಬೆಳವಣಿಗೆ, ಸೌಜನ್ಯ ಕೇಸ್ ಮರು ತನಿಖೆಗೆ ಸಿಬಿಐಗೆ ಹಸ್ತಾಂತರ ಸಾಧ್ಯತೆ!

Kannadaprabha News   | Kannada Prabha
Published : May 22, 2026, 09:04 AM IST
Dharmasthala sowjanay case big twist cbi reinvestigation Karnataka government rav

ಸಾರಾಂಶ

ಸೌಜನ್ಯ ಅತ್ಯಾ೧ಚಾರ ಮತ್ತು ಕೊಲೆ ಪ್ರಕರಣದ ಮರು ತನಿಖೆಯ ಕುರಿತು ಸಿಬಿಐ ಅಥವಾ ಕೇಂದ್ರ ಸರ್ಕಾರವೇ ಅಂತಿಮ ನಿರ್ಣಯ ಕೈಗೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ತಿಳಿಸಲು ರಾಜ್ಯ ಸರ್ಕಾರ ಮುಂದಾಗಿದೆ ಮರು ತನಿಖೆಗೆ ಸೌಜನ್ಯ ಅವರ ತಾಯಿ ಮನವಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ.

ಗಿರೀಶ್ ಮಾದೇನಹಳ್ಳಿ 

ಬೆಂಗಳೂರು (ಮೇ.22) ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚಿತವಾಗಿರುವ ಧರ್ಮಸ್ಥಳದ ಉಜಿರೆಯ ವಿದ್ಯಾರ್ಥಿನಿ ಸೌಜನ್ಯ ಅತ್ಯಾ೧ಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಸಂಬಂಧ ಕೇಂದ್ರ ತನಿಖಾ ವಿಭಾಗ (ಸಿಬಿಐ) ಅಥವಾ ಕೇಂದ್ರ ಸರ್ಕಾರ ಅಂತಿಮ ನಿರ್ಣಯ ತೆಗೆದುಕೊಳ್ಳಲಿ ಎಂದು ಸುಪ್ರೀಂ ಕೋರ್ಟ್‌ಗೆ ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಸಂಬಂಧ ರಾಜ್ಯ ಗೃಹ ಹಾಗೂ ಕಾನೂನು ಇಲಾಖೆ ಹಿರಿಯ ಅಧಿಕಾರಿಗಳ ಜತೆ ಸರ್ಕಾರ ಸಮಾಲೋಚನೆ ನಡೆಸಿದೆ. ಪ್ರಕರಣದ ವಿಚಾರಣೆ ಮುಂದಿನ ವಾರ ಮತ್ತೆ ಸುಪ್ರೀಂ ಕೋರ್ಟ್‌ ಮುಂದೆ ಬರಲಿದ್ದು, ಅಷ್ಟರಲ್ಲಿ ಕೋರ್ಟ್‌ಗೆ ತನ್ನ ನಿಲುವು ಏನೆಂದು ಸರ್ಕಾರ ಸ್ಪಷ್ಟಪಡಿಸಲಿದೆ ಎಂದು ಗೃಹ ಇಲಾಖೆ ಉನ್ನತ ಮೂಲಗಳು ‘ಕನ್ನಡಪ್ರಭ’ಕ್ಕೆ ತಿಳಿಸಿವೆ.

13 ವರ್ಷಗಳ ಹಿಂದೆಯೇ ಸೌಜನ್ಯ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ವೈದ್ಯಕೀಯ ಸೇರಿ ಎಲ್ಲ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಹೀಗಾಗಿ ಪ್ರಕರಣದ ಮರು ತನಿಖೆ ಬಗ್ಗೆ ಸಿಬಿಐ ಅಥವಾ ಕೇಂದ್ರ ಸರ್ಕಾರ ತೀರ್ಮಾನ ಮಾಡಬೇಕಿದೆ ಎಂದು ಸರ್ಕಾರ ಹೇಳಲಿದೆ ಎನ್ನಲಾಗಿದೆ.

ಮತ್ತೆ ಕೋರ್ಟ್‌ಗೆ ಯಾಕೆ?:

ಸಾಕ್ಷಿಗಳ ಕೊರತೆ ಹಿನ್ನೆಲೆಯಲ್ಲಿ ಸೌಜನ್ಯ ಕೊಲೆ ಪ್ರಕರಣದ ಆರೋಪಿ ಸಂತೋಷ್ ರಾವ್ ನನ್ನು ಸಿಬಿಐ ನ್ಯಾಯಾಲಯವು ಖುಲಾಸೆಗೊಳಿಸಿತ್ತು. ಈ ತೀರ್ಪು ಬಳಿಕ ಮಗಳ ಹತ್ಯೆ ಪ್ರಕರಣದ ಮರು ತನಿಖೆಗೆ ಆದೇಶಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಮೃತ ಸೌಜನ್ಯ ತಾಯಿ ಕುಸುಮಾವತಿ ಗೌಡ ಮೊರೆ ಹೋಗಿದ್ದರು. ಇನ್ನೊಂದೆಡೆ ಸಂತೋಷ್ ರಾವ್ ಖುಲಾಸೆಗೊಳಿಸಿದ್ದ ಕೆಳಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಿಬಿಐ ಮತ್ತೊಂದು ಅರ್ಜಿ ಸಲ್ಲಿಸಿತ್ತು.

ಈ ಅರ್ಜಿಗಳ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್‌, ಪ್ರಕರಣದ ಮರು ತನಿಖೆ ವಿಚಾರವಾಗಿ ಮುಂದಿನ ಕ್ರಮದ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಕೋರ್ಟ್‌ಗೆ ತನ್ನ ಅಭಿಪ್ರಾಯ ತಿಳಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿದು ಬಂದಿದೆ.

2012ರಲ್ಲಿ ಧರ್ಮಸ್ಥಳ ಸಮೀಪದ ಉಜಿರೆಯ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯಳನ್ನು ಅಮಾನುಷವಾಗಿ ಅತ್ಯಾ೧ಚಾರ ಎಸಗಿ ದುಷ್ಕರ್ಮಿಗಳು ಹತ್ಯೆಗೈದಿದ್ದರು. ಈ ಪ್ರಕರಣ ಸಾರ್ವಜನಿಕ ವಲಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಆರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ತನಿಖೆ ನಡೆಸಿದ್ದರು. ಬಳಿಕ ಅಂದಿನ ರಾಜ್ಯ ಸರ್ಕಾರ, ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಿತ್ತು. ಆಗ ಕಾರ್ಕಳ ತಾಲೂಕಿನ ಕುಂದೂರು ಗ್ರಾಮದ ಸಂತೋಷ್‌ ರಾವ್‌ನನ್ನು ಸಿಐಡಿ ಬಂಧಿಸಿತ್ತು. 2013ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ವಿದ್ಯಾರ್ಥಿನಿ ಹತ್ಯೆಯನ್ನು ಸಿಬಿಐಗೆ ವಹಿಸಿತ್ತು. ಅಂತೆಯೇ ತನಿಖೆ ನಡೆಸಿದ ಸಿಬಿಐ, ಸಂತೋಷ್ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿತ್ತು. ಆದರೆ ಕೊನೆಗೆ ಆತನನ್ನು ನ್ಯಾಯಾಲಯ ದೋಷಮುಕ್ತಗೊಳಿಸಿತ್ತು. ಈ ತೀರ್ಪು ಹೊರಬಿದ್ದ ಬಳಿಕ ಸೌಜನ್ಯ ಹತ್ಯೆ ಬಗ್ಗೆ ಮರು ತನಿಖೆಗೆ ಸಾರ್ವಜನಿಕ ವಲಯದಲ್ಲಿ ಪ್ರಬಲ ದನಿ ಕೇಳಿ ಬಂತು.

ಸಿಬಿಐ ತನಿಖೆ ನಡೆಸಲಿ-ಸರ್ಕಾರ:

ಸೌಜನ್ಯ ಕೊಲೆ ಪ್ರಕರಣದ ತನಿಖೆ ಬಗ್ಗೆ ಲೋಪವಾಗಿದೆ ಎಂದು ಸ್ಥಳೀಯ ಪೊಲೀಸರ ಮೇಲೆ ಆರೋಪ ಬಂದಿತ್ತು. ನಂತರ ಸಿಐಡಿ ಸಹ ತನಿಖೆ ನಡೆಸಿತು. ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿಸಿದ ಬಳಿಕ ಪ್ರಕರಣದ ಕಡತಗಳನ್ನು ಸಿಬಿಐಗೆ ಹಸ್ತಾಂತರಿಸಲಾಗಿದೆ. ಮರು ತನಿಖೆಗೆ ಸಿಐಡಿಗೆ ತಾಂತ್ರಿಕ ಸಮಸ್ಯೆ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ಮರು ತನಿಖೆ ವಿಚಾರವಾಗಿ ಕೇಂದ್ರ ಸರ್ಕಾರ ಅಥವಾ ಸಿಬಿಐ ನಿರ್ಧರಿಸಲಿದೆ ಎಂದು ಸರ್ಕಾರದ ಮಟ್ಟದಲ್ಲಿ ಚರ್ಚೆ ನಡೆದಿರುವುದಾಗಿ ಉನ್ನತ ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ನಿಮ್ಮ ಜಿಲ್ಲೆಯ ಬಸ್ ನಿಲ್ದಾಣದಲ್ಲಿ ಲೈಬ್ರರಿ ಇದೆಯೇ? ಬಳ್ಳಾರಿಯಲ್ಲಿ ನೋಡಿದರೆ ಅಚ್ಚರಿ ಆಗುತ್ತದೆ!
Karnataka cabinet decisions: ಆಳಂದ ಗಲಭೆ ಸೇರಿ 52 ಕ್ರಿಮಿನಲ್ ಕೇಸ್‌ಗಳನ್ನು ಹಿಂಪಡೆದ ಸರ್ಕಾರ?