ಆಸ್ಪತ್ರೆಗಳಿಗೆ ಸರಿಯಾಗಿ ಆಕ್ಸಿಜನ್ ಪೂರೈಸಲು ರಾಜ್ಯ ಸರ್ಕಾರದಿಂದ ಮತ್ತೊಂದು ಪ್ಲಾನ್

By Suvarna NewsFirst Published Jun 9, 2021, 5:27 PM IST
Highlights

* ರಾಜ್ಯದ ಆಮ್ಲಜನಕ ಉತ್ಪಾದನೆ ಮತ್ತು ಸರಬರಾಜು ಕುರಿತು ಹಿರಿಯ ಅಧಿಕಾರಿಗಳೊಂದಿಗೆ ಸಭೆ
*ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸಲು ಜಿಲ್ಲಾವಾರು ನೋಡಲ್‌ ಅಧಿಕಾರಿಗಳ ನೇಮಕ
* ಮೂರನೇ ಅಲೆಗೆ ಸಿದ್ದಗೊಳ್ಳಲು ಅಧಿಕಾರಿಗಳಿಗೆ ಸೂಚನೆ
* ಆಸ್ಪತ್ರೆಗಳು ಆಮ್ಲಜನಕದ ಇಂಡೆಂಟ್‌ ನೀಡಲು ನೂತನ ತಂತ್ರಜ್ಞಾನ

ಬೆಂಗಳೂರು: ರಾಜ್ಯ ಹಾಗೂ ದೇಶದಲ್ಲಿ ಆಮ್ಲಜನಕದ ಬೇಡಿಕೆಯ ಪ್ರಮಾಣ ದಿನೇ ದಿನೇ ಕಡಿಮೆ ಆಗುತ್ತಿದೆ. ಈ ಹಿನ್ನಲೆಯಲ್ಲಿ ಕೈಗಾರಿಕೆಗಳಿಗೂ ಸ್ವಲ್ಪ ಪ್ರಮಾಣದಲ್ಲಿ ಆಮ್ಲಜನಕ ಪೂರೈಕೆಗೆ ಕೇಂದ್ರ ಸರಕಾರ ಅನುಮತಿಯನ್ನು ನೀಡಿದೆ. ಈ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗದ ಹಾಗೆ ಆಸ್ಪತ್ರೆಗಳಿಗೆ ಆದ್ಯತೆ ಮೇರೆಗೆ ಆಮ್ಲಜನಕ ಪೂರೈಕೆ ಮಾಡಿಸುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಅಧಿಕಾರಿಗಳನ್ನು ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಮತ್ತು ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಇಂದು (ಜೂನ್ 9) ವಿಧಾನಸೌಧದಲ್ಲಿ ರಾಜ್ಯದಲ್ಲಿನ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ಸಚಿವ ಜಗದೀಶ್‌ ಶೆಟ್ಟರ್‌ ಸಭೆ ನಡೆಸಿದರು. ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಈ ನೋಡೆಲ್ ಅಧಿಕಾರಿಗಳ ನೇಮಕಾತಿ ಬಗ್ಗೆ ಮಾಹಿತಿ ನೀಡಿದರು.

ರಾಜ್ಯದಲ್ಲಿ ಮತ್ತೆ ಆಕ್ಸಿಜನ್‌ ಕೊರತೆ ಉದ್ಭವಿಸುವ ಭೀತಿ!

ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊವಿಡ್‌ ಪ್ರಕರಣಗಳ ಸಂಖ್ಯೆ ದಿನೇ ದಿನೇ ಕಡಿಮೆಯಾಗುತ್ತಿದೆ. ಇದರಿಂದಾಗಿ ಆಮ್ಲಜನಕದ ಬೇಡಿಕೆಯೂ ಕಡಿಮೆ ಆಗುತ್ತಿದೆ. ಕಳೆದ ಎರಡು ದಿನಗಳನ್ನು ಗಮನಿಸಿದಲ್ಲಿ ಸಾರಾಸರಿಯಾಗಿ 580 ಎಂ.ಟಿಗಳಷ್ಟು ಮಾತ್ರ ಆಮ್ಲಜನಕದ ಬೇಡಿಕೆ ಇದೆ. ಆದರೆ, ಬೇಡಿಕೆ ಕಡಿಮೆ ಆಗಿರುವುದರಿಂದ ಹೆಚ್ಚಿನ ಗಮನ ನೀಡದೇ ಇರುವುದು ಸರಿಯಲ್ಲ. ಮುಂದಿನ ಮೂರನೇ ಅಲೆಗೆ ಪರಿಸ್ಥಿತಿ ತಿಳಿಯಾಗಿರುವ ಸಂದರ್ಭದಲ್ಲೇ ಅಗತ್ಯ ತಯಾರಿ ಮಾಕೊಳ್ಳಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾವಾರು ಆಸ್ಪತ್ರೆಗಳನ್ನು ಆಮ್ಲಜನಕ ಸ್ವಾವಲಂಬಿ ಮಾಡಬೇಕು. ಅಲ್ಲದೆ, ಜಿಲ್ಲೆಗಳಲ್ಲಿ ಬಫರ್‌ ಸ್ಟಾಕ್‌ ಸಂಗ್ರಹಣೆಗೆ ಅಗತ್ಯವಿರುವ ಸೌಲಭ್ಯಗಳನ್ನು ನಿರ್ಮಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಸೂಚನೆ ನೀಡಿದರು

ಎನ್​ಐಸಿ ಮೂಲಕ ಒಂದು ತಂತ್ರಾಂಶವನ್ನು ಅಭಿವೃದ್ಧಿಗೊಳಿಸಲಾಗುತ್ತಿದೆ. ಈ ತಂತ್ರಾಂಶದ ಮೂಲಕ ಆಸ್ಪತ್ರೆಗಳು ಆಮ್ಲಜನಕದ ಬೇಡಿಕೆಯನ್ನು ಸಲ್ಲಿಸಬಹುದಾಗಿದೆ. ಇದು ಇನ್ನು 3 ದಿನಗಳಲ್ಲಿ ಸಿದ್ಧವಾಗಲಿದ್ದು, ಅದನ್ನು ಸದ್ಯದಲ್ಲೇ ಲೋಕಾರ್ಪಣೆ ಮಾಡಲಾಗುವುದು ಎಂದು ಹೇಳಿದರು.

ಕೇಂದ್ರ ಸರಕಾರ ಕೈಗಾರಿಕೆಗಳಿಗೆ ಆಮ್ಲಜನಕ ಪೂರೈಸುವ ನಿಟ್ಟಿನಲ್ಲಿ ಅನುಮತಿಯನ್ನು ನೀಡಿದೆ. ಒಂದು ಬಾರಿ ಈ ಪ್ರಕ್ರಿಯೆ ಪ್ರಾರಂಭವಾದ ನಂತರ ಗೊಂದಲಗಳು ಉಂಟಾಗಬಾರದು ಎನ್ನುವ ನಿಟ್ಟಿನಲ್ಲಿ ಜಿಲ್ಲಾವಾರು ನೋಡಲ್‌ ಅಧಿಕಾರಿಯನ್ನು ನೇಮಿಸಲು ಚಿಂತನೆ ನಡೆದಿದೆ. ನೋಡಲ್‌ ಅಧಿಕಾರಿಗಳು ಆಸ್ಪತ್ರೆಯ ಆದ್ಯತೆಯ ಮೇರೆಗೆ ಆಮ್ಲಜನಕ ಪೂರೈಕೆ ಮಾಡುವ ನಿಟ್ಟಿನಲ್ಲಿ ಮೇಲುಸ್ತುವಾರಿ ವಹಿಸಿಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಮೂರನೆ ಕೊವಿಡ್‌ ಅಲೆ ಬಂದರೆ ರಾಜ್ಯ ಆಮ್ಲಜನಕ ವಿಷಯದಲ್ಲಿ ಸಿದ್ಧವಾಗಿರಬೇಕಾಗಿರುವುದು ಬಹಳ ಅತ್ಯವಶ್ಯ ಎಂದು ತಿಳಿಸಿದ ಸಚಿವರಾದ ಜಗದೀಶ್‌ ಶೆಟ್ಟರ್‌, ಎರಡನೇ ಅಲೆಯನ್ನು ಸಮರ್ಥವಾಗಿ ನಿಭಾಯಿಸಿದ ಅಧಿಕಾರಿಗಳಿಗೆ ಇದೇ ಅಭಿನಂದಿಸಿದರು.

ಈ ಸಭೆಯಲ್ಲಿ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ರಾಜ್ ಕುಮಾರ್ ಖತ್ರಿ, ಆಕ್ಸಿಜನ್ ಸರಬರಾಜು ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಐಎಎಸ್‌ ಅಧಿಕಾರಿ ಮೌನಿಶ್‌ ಮೌದ್ಗಿಲ್‌, ಐಪಿಎಸ್‌ ಅಧಿಕಾರಿ ಪ್ರತಾಪ್‌ ರೆಡ್ಡಿ, ಕೆಐಎಡಿಬಿ ಸಿಇಓ ಡಾ ಶಿವಶಂಕರ್, ಡ್ರಗ್ಸ್ ಕಂಟ್ರೋಲರ್ ಅಮರೇಶ್ ತುಬಗಿ, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣ ಗೌಡ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

click me!