ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನುಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಡಿಕೆ ಶಿವಕುಮಾರ್
ಬೆಂಗಳೂರು(ಜೂ.03): ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ನೀಡಲಾಗಿರುವ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ಮತ್ತೆ ವಿಸ್ತರಿಸಿದೆ.
ಸಿಬಿಐ ತನಿಖೆ ರದ್ದು ಕೋರಿ ಡಿ.ಕೆ. ಶಿವಕುಮಾರ್ ಸಲ್ಲಿಸಿರುವ ಅರ್ಜಿಯನ್ನು ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠ ಈ ಆದೇಶ ಮಾಡಿದೆ. ಇದಕ್ಕೂ ಮುನ್ನ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪ್ರತಿಕ್ರಿಯಿಸಿ, ಪ್ರಕರಣದ ಭಾಗಶಃ ವಿಚಾರಣೆಯನ್ನು ಈಗಾಗಲೇ ಮತ್ತೊಂದು ಏಕಸದಸ್ಯ ನ್ಯಾಯಪೀಠ ನಡೆಸಿದೆ. ಈಗ ಅರ್ಜಿ ತಮ್ಮ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿದೆ. ಹಾಗಾಗಿ, ಯಾವ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ನಡೆಸಬೇಕು ಎಂಬುದರ ಬಗ್ಗೆ ಮುಖ್ಯ ನ್ಯಾಯಮೂರ್ತಿಗಳು ಸೂಚನೆ ನೀಡುವುದು ಅಗತ್ಯ. ಅದರಂತೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿಗಳ ಮುಂದಿಡಬೇಕು. ಅವರಿಂದ ಆದೇಶ ಬಂದ ನಂತರ ಅರ್ಜಿಯನ್ನು ಯಾವ ಪೀಠ ವಿಚಾರಣೆ ನಡೆಸಬೇಕು ಎಂಬುದು ನಿರ್ಧಾರವಾಗಲಿ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದರು.
ಗ್ಯಾರಂಟಿ ಬದಲು ಸರ್ಕಾರಿ ನೌಕರರಿಗೆ ಉಚಿತ ಏಟಿನ ಭಾಗ್ಯ: ನಳಿನ್ ಲೇವಡಿ
ಪ್ರಕರಣವೇನು?:
ಭ್ರಷ್ಟಾಚಾರ ನಿಗ್ರಹ ಕಾಯ್ದೆ-1988ರ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿಬಿಐ 2020ರ ಅ.3ರಂದು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಕರಣ ದಾಖಲಿಸಿತ್ತು. ಸಿಬಿಐ ದಾಖಲಿಸಿರುವ ಈ ಎಫ್ಐಆರ್ ಕಾನೂನುಬಾಹಿರವಾಗಿದ್ದು, ತನಿಖೆ ರದ್ದುಪಡಿಸಬೇಕು ಎಂದು ಕೋರಿ ಶಿವಕುಮಾರ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸಿಬಿಐ ತನಿಖೆಗೆ 2023ರ ಫೆ.10ರಂದು ನ್ಯಾ.ಕೆ.ನಟರಾಜನ್ ಅವರ ಪೀಠ ತಡೆಯಾಜ್ಞೆ ನೀಡಿತ್ತು. ಜತೆಗೆ, ಭಾಗಶಃ ಅರ್ಜಿ ವಿಚಾರಣೆ ನಡೆಸಿತ್ತು. ಇದೇ ನ್ಯಾಯಪೀಠವು ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಡಿಕೆಶಿ ಸಲ್ಲಿಸಿದ್ದ ಮತ್ತೊಂದು ಅರ್ಜಿಯನ್ನು ವಜಾಗೊಳಿಸಿ ಇತ್ತೀಚೆಗೆ ಆದೇಶಿಸಿತ್ತು.