
ಕಲಬುರಗಿ (ಮಾ.9): ಮರಕ್ಕೆ ಬೇರು ಎಷ್ಟು ಮುಖ್ಯವೋ, ಮನುಷ್ಯನಿಗೆ ನಂಬಿಕೆಯೂ ಅಷ್ಟೇ ಮುಖ್ಯ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಉಳಿಯ ಪೆಟ್ಟು ಬಿದ್ದರೆ ಶಿಲೆ ಕೂಡ ಮೂರ್ತಿ ಆಗುತ್ತೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ಮುಂದುವರಿದಿರುವುದರ ನಡುವೆ ಡಿಕೆಶಿ ಆಡಿದ ಈ ಮಾತುಗಳು ಕುತೂಹಲಕ್ಕೆ ಕಾರಣವಾಗಿದೆ.
ಕಲಬುರಗಿ ಜಿಲ್ಲೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಭಾನುವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆನೆರವೇರಿಸಿ ಅವರು ಮಾತನಾಡಿದರು. ತಮ್ಮ ಸ್ವಂತ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದಕ್ಕಾಗಿ ಸಚಿವ ಪ್ರಿಯಾಂಕ್ ಖರ್ಗೆಯನ್ನು ಹಾಡಿ ಹೊಗಳಿದ ಡಿಕೆಶಿ, ಕನಕಪುರದಲ್ಲಿ ಅಲ್ಲಿನ ಜನ ನನ್ನನ್ನು ಗೆಲ್ಲಿಸಿದ್ದಂತೆ, ಚಿತ್ತಾಪುರದಲ್ಲಿ ನೀವು ಯಾವಾಗಲೂ ಪ್ರಿಯಾಂಕ್ ಖರ್ಗೆಯವರನ್ನು ಗೆಲ್ಲಿಸಿ. ನೀವು ಯಾವಾಗಲೂ ಖರ್ಗೆ ಮತ್ತು ಕಾಂಗ್ರೆಸ್ ಕುಟುಂಬದ ಜೊತೆಗೆ ಇರಿ ಎಂದು ಕರೆ ನೀಡಿದರು.
ನಮ್ಮ ಗ್ಯಾರಂಟಿ ಇಡೀ ದೇಶಕ್ಕೆ ಮಾದರಿ. ನಾವು ಐದು ಗ್ಯಾರಂಟಿಗಳನ್ನು ಕೊಟ್ಟು ನಿಮ್ಮ ಬದುಕಿಗೆ ಸಹಾಯ ಕಲ್ಪಿಸಿದ್ದೇವೆ. ಆದರೆ, ಕೇಂದ್ರ ಸರ್ಕಾರ ಗ್ಯಾಸ್ ದರ ಏರಿಕೆ ಮಾಡಿ, ಜನಸಾಮಾನ್ಯರ ಬದುಕಿಗೆ ಬರೆ ಎಳೆದಿದೆ. ಇದಕ್ಕೆ ಬಿಜೆಪಿ ಸಂಸದರು ಉತ್ತರ ಕೊಡಬೇಕು ಎಂದರು.
ಕಲಬುರಗಿ ಜಿಲ್ಲೆ ಚಿತ್ತಾಪುರದಲ್ಲಿ ಭಾನುವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದು ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು.
ಸಮಾರಂಭದ ಬಳಿಕ ಖರ್ಗೆ ಮತ್ತು ಡಿಕೆಶಿ ಒಂದೇ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದರು. ದೆಹಲಿಯಲ್ಲಿ ನಡೆದ ತಮ್ಮ ಸ್ನೇಹಿತರೊಬ್ಬರ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಲು ಡಿಕೆಶಿ ದೆಹಲಿಗೆ ತೆರಳಿದ್ದು, ಸೋಮವಾರವೇ ಅವರು ಬೆಂಗಳೂರಿಗೆ ಮರಳಲಿದ್ದಾರೆ. ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತ ಗೊಂದಲ ಮುಂದುವರಿದಿರುವುದರ ನಡುವೆಯೇ ಖರ್ಗೆ ಜೊತೆ ಡಿಕೆಶಿ ಪ್ರಯಾಣ ಬೆಳೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಯಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ