
ಬೆಂಗಳೂರು(ಜೂ.05): ನಿರುದ್ಯೋಗ ನೆಪ ಹೇಳಿ ಪತಿಯು ತನ್ನ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ವಿಚ್ಛೇದಿತ ಪತ್ನಿಗೆ ಮಾಸಿಕ ಏಳು ಸಾವಿರ ಹಾಗೂ ಅಪ್ರಾಪ್ತ ಮಗುವಿಗೆ ಮೂರು ಸಾವಿರ ರು. ಜೀವನಾಂಶ ಪಾವತಿಸುವಂತೆ ತನಗೆ ಸೂಚಿಸಿದ ಕೌಟುಂಬಿಕ ನ್ಯಾಯಾಲಯದ ಆದೇಶ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮುಗ್ದಮ್ ಅವರ ಪೀಠ ಈ ಸ್ಪಷ್ಟನೆ ನೀಡಿ, ಕೌಟುಂಬಿಕ ನ್ಯಾಯಾಲಯದ ಆದೇಶದಂತೆ ವಿಚ್ಛೇದಿತ ಮತ್ತು ಮಗುವಿಗೆ ಜೀವನಾಂಶ ಪಾವತಿಸುವಂತೆ ಅರ್ಜಿದಾರನಿಗೆ ಸೂಚಿಸಿದೆ.
ವೈದ್ಯ ವಿದ್ಯಾರ್ಥಿಗಳ ಗ್ರಾಮೀಣ ಸೇವೆ ಕಡ್ಡಾಯ ಸರಿ: ಹೈಕೋರ್ಟ್
ವಿಚಾರಣೆ ವೇಳೆ ಅರ್ಜಿದಾರ ಪರ ವಕೀಲರು, ಅರ್ಜಿದಾರ ಸದ್ಯ ಕೆಲಸ ಕಳೆದುಕೊಂಡು ನಿರುದ್ಯೋಗಿಯಾಗಿದ್ದಾರೆ. ಈ ಸಂದರ್ಭದಲ್ಲಿ ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ. ಆದ್ದರಿಂದ ಕೌಟುಂಬಿಕ ನ್ಯಾಯಾಲಯದ ಆದೇಶ ರದ್ದುಪಡಿಸಬೇಕು ಎಂದು ಕೋರಿದರು.
ಈ ವಾದ ಒಪ್ಪದ ನ್ಯಾಯಪೀಠ, ಅರ್ಜಿದಾರ ಮತ್ತು ಆತನ ವಿಚ್ಚೇದಿತ ಪತ್ನಿ ದೂರವಾಗಿ ಪ್ರತ್ಯೇಕವಾಗಿ ವಾಸ ಮಾಡುತ್ತಿದ್ದಾರೆ. ವಿಚ್ಛೇದಿತ ಪತ್ನಿಯೊಂದಿಗೆ ಅಪ್ರಾಪ್ತ ಮಗು ನೆಲೆಸಿದೆ. ಉದ್ಯೋಗವಿಲ್ಲ ಎಂಬ ನೆಪ ಹೇಳಿ ಅವರಿಗೆ ಜೀವನಾಂಶ ನೀಡುವ ಜವಾಬ್ದಾರಿಯಿಂದ ಅರ್ಜಿದಾರ ಹಿಂದೆ ಸರಿಯುವುದನ್ನು ಒಪ್ಪಲಾಗದು. ಸದ್ಯ ಹಣದುಬ್ಬರದಿಂದ ಜನಸಮೂಹ ತತ್ತರಿಸಿದೆ. ಜೀವನ ನಿರ್ವಹಣಾ ವೆಚ್ಚವೂ ಗಣನೀಯವಾಗಿ ಏರಿಕೆಯಾಗಿದೆ. ಇದರಿಂದ ಜೀವನ ನಿರ್ವಹಣೆ ಸುಲಭದ ಮಾತಲ್ಲ. ಹಾಗಾಗಿ, ವಿಚ್ಛೇದಿತ ಪತ್ನಿ ಹಾಗೂ ಮಗುವಿಗೆ ಮಾಸಿಕ ಒಟ್ಟು 10 ಸಾವಿರ ರು. ಜೀವನಾಂಶ ಪಾವತಿಸಲು ಕೌಟುಂಬಿಕ ನ್ಯಾಯಾಲಯ ಸೂಚಿಸಿರುವುದು ಸಮಂಜಸವಾಗಿದೆ ಎಂದು ಆದೇಶಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ