‘ಇಂದಿರಾ ಕ್ಯಾಂಟೀನ್, ಅನ್ನಭಾಗ್ಯ ನಿಲ್ಲಿಸಬೇಡಿ’

By Kannadaprabha NewsFirst Published Mar 20, 2020, 10:49 AM IST
Highlights

ಹಿಂದಿನ ಸರ್ಕಾರ ಜಾರಿಗೆ ತಂದಿರುವ ಯಾವುದೇ ಯೋಜನೆಗಳನ್ನು ಕೈ ಬಿಡಬೇಡಿ ಎಂದು ಕರ್ನಾಟಕ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. 

ವಿಧಾನಸಭೆ [ಮಾ.20]: ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್, ಕೃಷಿ ಹೊಂಡ ಸೇರಿದಂತೆ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳಿಗೆ ಪರಿಹಾರವಾಗಿರುವ ಹಿಂದಿನ ಯಾವುದೇ ಸರ್ಕಾರಗಳ ಅವಧಿಯ ಯೋಜನೆಗಳನ್ನು ಕೈಬಿಡದೆ ಮುಂದುವರೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾ ಯಿಸಿದ್ದಾರೆ.

ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನ್ನಭಾಗ್ಯ, ಇಂದಿರಾ ಕ್ಯಾಂಟೀನ್ ಸೇರಿದಂತೆ ಜನರ ಮೂಲಭೂತ ಸಮಸ್ಯೆಗಳಿಗೆ ಪರಿಹಾರವಾದ ಅನೇಕ ಯೋಜನೆಗಳು ಜಾರಿಯಲ್ಲಿವೆ. ಅವುಗಳನ್ನು ಮುಂದುವರೆಸುವುದಾಗಿ ಸರ್ಕಾರ ಹೇಳಿದೆ. ಆದರೆ, ಒಂದೊಂದೇ ಯೋಜನೆಗಳನ್ನು ನಿಲ್ಲಿಸುವ ಕೆಲಸ ಆಗಬಹುದು ಎಂಬ ಅನುಮಾನಗಳಿವೆ. 

ಅನ್ನಭಾಗ್ಯದಲ್ಲಿ 2 ಕೆ.ಜಿ. ಅಕ್ಕಿ ಕಡಿತ ಮಾಡಲು ಸರ್ಕಾರ ಹೊರಟಿದೆ ಎಂದು ಹೇಳಲಾಗುತ್ತಿದೆ. ಹಾಗೇನಾದರೂ ಮಾಡಿದರೆ ಅದಕ್ಕೆ ಪರ್ಯಾಯವಾಗಿ ಜೋಳ, ರಾಗಿ ನೀಡಬೇಕು ಎಂದು ಆಗ್ರಹಿಸಿದರು.

ಕೊರೋನಾ ವೈರಸ್: ರಾಜ್ಯ ಸರ್ಕಾರಕ್ಕೆ ಒಂದಿಷ್ಟು ಸಲಹೆ ಕೊಟ್ಟ ಸಿದ್ದರಾಮಯ್ಯ..

ಅದೇ ರೀತಿ ಕೃಷಿ ಹೊಂಡ ಯೋಜನೆಯನ್ನು ನಿಲ್ಲಿಸಲು ಸರ್ಕಾರ ಮುಂದಾಗಿದೆ ಎಂಬ ಮಾತುಗಳಿವೆ. ಇದನ್ನು ನಾನು ವಿರೋಧಿಸುತ್ತೇನೆ. ಕೃಷಿ ಹೊಂಡ ನಿರ್ಮಾಣದಿಂದ ರೈತರಿಗೆ ಬಹಳ ಅನುಕೂಲವಾಗಲಿದೆ. ಅಂತರ್ಜಲ ಮಟ್ಟ ಹೆಚ್ಚಳವಾಗಲಿದ್ದು, ಅದನ್ನು ಮುಂದುವರೆಸಬೇಕು. ಜತೆಗೆ ಅಪ್ಪರ್ ಭದ್ರಾ ಯೋಜನೆಗೆ ನಮ್ಮ ಸರ್ಕಾರ ಇದ್ದಾಗ 51 ಕೋಟಿ ರು.ಗೆ ಅನುಮೊದನೆ ನೀಡಲಾಗಿತ್ತು. ಅದನ್ನು ಮುಂದುವರೆಸಬೇಕು. 

ಮಹದಾಯಿ ಯೋಜನೆಗೆ ಸರ್ಕಾರ ಬಜೆಟ್‌ನಲ್ಲಿ ಹಣ ಇಟ್ಟಿದೆ. ಎರಡು ವರ್ಷದೊಳಗೆ ಈ ಯೋಜನೆ ಪೂರ್ಣಗೊಳಿಸಿ ಅಲ್ಲಿನ ಜನರಿಗೆ ಕುಡಿಯುವ ನೀರು
ಕೊಡಬೇಕು ಎಂದರು.

click me!