
ಬೆಂಗಳೂರು (ನ.22): ರಾಜ್ಯ ಕಾಂಗ್ರೆಸ್ನ ಆಡಳಿತದಲ್ಲಿ ಅಧಿಕಾರ ಹಂಚಿಕೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಈ ಬಗ್ಗೆ ಬಿಜೆಪಿ ಎಂಎಲ್ಸಿ ಎಚ್ ವಿಶ್ವನಾಥ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಶ್ವನಾಥ್ ಅವರು, ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದು, ಸಿದ್ದರಾಮಯ್ಯ ಅವರು ವಚನಭ್ರಷ್ಟರಾಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ದೆಹಲಿಯ ಕರ್ನಾಟಕ ಭವನದಲ್ಲಿ ಹೈಕಮಾಂಡ್ ಮಧ್ಯಸ್ಥಿಕೆಯಲ್ಲಿ ಸಿದ್ದರಾಮಯ್ಯನವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರ ತಲೆಯ ಮೇಲೆ ಕೈ ಇಟ್ಟು ಅಧಿಕಾರ ಹಂಚಿಕೆ ಕುರಿತು ಆಣೆ ಪ್ರಮಾಣ ಮಾಡಿದ್ದಾರೆ. ಈ ಮಹತ್ವದ ಸಂದರ್ಭದಲ್ಲಿ ಕೆಲವೇ ಕೆಲವು ಮಂದಿ ಮಾತ್ರ ಉಪಸ್ಥಿತರಿದ್ದರು ಎಂದು ಎಚ್ ವಿಶ್ವನಾಥ್ ಅವರು ಗಂಭೀರ ಆರೋಪ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರ ದೊಡ್ಡದಿದೆ. ಪಕ್ಷಕ್ಕೆ 140 ಸ್ಥಾನಗಳನ್ನು ತಂದುಕೊಡಲು ಡಿಕೆಶಿ ಶ್ರಮಿಸಿದ್ದಾರೆ. ಸಿದ್ದರಾಮಯ್ಯನವರು ಕೊಟ್ಟ ಮಾತಿನಂತೆ ನಡೆದುಕೊಳ್ಳಬೇಕು. ವಚನ ಭ್ರಷ್ಟರಾಗಬಾರದು. ರಾಜ್ಯದಲ್ಲಿ ವಚನಭ್ರಷ್ಟರಾದವರು ಯಾರೂ ಬದುಕುಳಿದಿಲ್ಲ. ಪುಣ್ಯಕೋಟಿ ಕಥೆಯನ್ನು ನಂಬುವ ಜನ ನಮ್ಮವರು ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ, 'ಯಡಿಯೂರಪ್ಪ ಅವರಿಗೆ ವಚನ ನೀಡಿದ ಕುಮಾರಸ್ವಾಮಿ ಅವರ ಕಥೆ ಏನಾಯಿತು? ವಚನಭ್ರಷ್ಟ ಮಾಡಿದ ಯಾರೂ ಉದ್ದಾರವಾಗಿಲ್ಲ' ಎಂದು ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಉಲ್ಲೇಖಿಸಿ ಟೀಕಿಸಿದರು.
ಎಐಸಿಸಿ ಮೌನ ಸರಿಯಲ್ಲ, ಖರ್ಗೆ ಮಧ್ಯಪ್ರವೇಶಿಸಲಿ:
ರಾಜ್ಯದಲ್ಲಿ ನಡೆಯುತ್ತಿರುವ ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಎಐಸಿಸಿ ಮೌನವಹಿಸಿರುವುದು ಸರಿಯಲ್ಲ ಎಂದು ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಕರ್ನಾಟಕದಲ್ಲಿ ನಡೆಯುತ್ತಿರುವ ಈ ರಾಜಕೀಯ ಜನರ ಅವಕೃಪೆಗೆ ಪಾತ್ರವಾಗಿದೆ. ಶಾಸಕರು ಮತ್ತು ಸಚಿವರಿಗೆ ಮೂರು ಕಾಸಿನ ಮರ್ಯಾದೆಯೂ ಇಲ್ಲದಂತಾಗಿದೆ. ಇದು ಸಂವಿಧಾನ ಮತ್ತು ಜನತಂತ್ರವನ್ನು ಕೊಲ್ಲುವ ಕೆಲಸ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ವಿರುದ್ಧ ಎಚ್ ವಿಶ್ವನಾಥ ವಾಗ್ದಾಳಿ:
ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಎಲ್ಲವನ್ನೂ ನೀಡಿದೆ. ಪಕ್ಷಕ್ಕೆ ಬಂದ ತಕ್ಷಣವೇ ಅವರಿಗೆ ವಿರೋಧ ಪಕ್ಷದ ಸ್ಥಾನವನ್ನು ಬಿಟ್ಟುಕೊಟ್ಟರು, ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ನೀಡಿತು. ಅಂತಹ ಕಾಂಗ್ರೆಸ್ ಪಕ್ಷವನ್ನು ಅವರು ನಾಶ ಮಾಡುತ್ತಿದ್ದಾರೆ. ಎಲ್ಲವನ್ನೂ ಕೊಟ್ಟ ಪಕ್ಷಕ್ಕೆ ಬಾಗಿಲು ಹಾಕುವ ಕೆಲಸ ಮಾಡುತ್ತಿದ್ದಾರೆ ಎಂದು ವಿಶ್ವನಾಥ್ ಅವರು ಮುಖ್ಯಮಂತ್ರಿಗಳ ನಡವಳಿಕೆಯನ್ನು ತೀವ್ರವಾಗಿ ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ