
ಬೆಂಗಳೂರು (ಫೆ.17): ರಾಮನಗರದಲ್ಲಿ ಇರುವ ಪುರಾತನ ರಾಮದೇವರ ಬೆಟ್ಟದಲ್ಲಿ ಭವ್ಯವಾದ ರಾಮ ಮಂದಿರ ನಿರ್ಮಿಸಬೇಕು ಎನ್ನುವುದು ಆ ಜಿಲ್ಲೆಯ ಜನರ ಕನಸಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಬಜೆಟ್ಟಿನಲ್ಲಿ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವುದು ತಮಗೆ ಸಂತಸ ತಂದಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.
ಶುಕ್ರವಾರ ಈ ಬಗ್ಗೆ ಮಾತನಾಡಿರುವ ಅವರು, ಈ ಸಂಬಂಧ ಶೀಘ್ರವೇ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿ, ಮುಂದಿನ ಹೆಜ್ಜೆ ಇಡಲಾಗುವುದು ಎಂದಿದ್ದಾರೆ. ರಾಮನಗರದ ಹೆಸರಿನಲ್ಲೇ ರಾಮನಿದ್ದಾನೆ. ಇದನ್ನು ದಕ್ಷಿಣದ ಅಯೋಧ್ಯೆಯಂತೆ ಪುಣ್ಯಕ್ಷೇತ್ರವಾಗಿ ಬೆಳೆಸಬೇಕು ಎನ್ನುವುದು ಸ್ಥಳೀಯರ ಬಯಕೆಯಾಗಿದೆ. ಇತ್ತೀಚೆಗೆ ಇಲ್ಲಿನ ಭಕ್ತರು ಅಯೋಧ್ಯೆಗೆ ತೆರಳಿ ಅಲ್ಲಿನ ರಾಮ ಮಂದಿರಕ್ಕೆ ಬೆಳ್ಳಿ ಇಟ್ಟಿಗೆ, ರೇಷ್ಮೆ ಸೀರೆ, ಶಲ್ಯವನ್ನು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ಜತೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನಮ್ಮ ಯೋಜನೆಯ ಬಗ್ಗೆ ಕೇಳಿ, ಪ್ರೋತ್ಸಾಹಿಸಿದ್ದಾರೆ.
ಸಿದ್ದರಾಮಯ್ಯಗೆ ನೋವಾಗಿದ್ದರೆ ವಿಷಾದಿಸುವೆ: ಸಚಿವ ಅಶ್ವತ್ಥ ನಾರಾಯಣ
ಮಂದಿರ ನಿರ್ಮಾಣ ಕಾಮಗಾರಿ ಆರಂಭಕ್ಕೆ ಅವರನ್ನೇ ಕರೆಸಲಾಗುವುದು ಎಂದು ಅವರು ವಿವರಿಸಿದ್ದಾರೆ. ಈ ಕೆಲಸವನ್ನು ಕೆಲವರು ರಾಜಕೀಯ ಕಾರಣದಿಂದ ವಿರೋಧಿಸುತ್ತಿದ್ದಾರೆ. ಅವರ ಬಗ್ಗೆ ಮಾತನಾಡಲು ಹೋಗುವುದಿಲ್ಲ. ಹೇಳಿದ್ದನ್ನು ಮಾಡಿ ತೋರಿಸುತ್ತೇವಷ್ಟೆ ಎಂದು ಅವರು ನುಡಿದಿದ್ದಾರೆ. ರಾಮದೇವರ ಬೆಟ್ಟವು ರಣಹದ್ದುಗಳ ಸಂರಕ್ಷಿತ ಪ್ರದೇಶವಾಗಿದೆ. ರಾಮ ಮಂದಿರ ನಿರ್ಮಾಣದಿಂದ ಇವುಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು. ಇದರ ಬಗ್ಗೆ ಯಾರೂ ಆತಂಕಕ್ಕೆ ಒಳಗಾಗುವುದು ಬೇಡ ಎಂದು ಅವರು ಭರವಸೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ