
ತುಮಕೂರು (ಸೆ.22): ಐತಿಹಾಸಿಕ ಹಾಗೂ ಸಾಂಸ್ಕೃತಿಕ ಪರಂಪರೆ ಸಾರುವ ತುಮಕೂರು ದಸರಾ ಹಬ್ಬವನ್ನು ನಂದಿ ಧ್ವಜ ಪೂಜೆ ಮಾಡುವ ಮೂಲಕ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ಬಳಿಕ ದಸರಾ ಧ್ವಜಾರೋಹಣ ಹಾಗೂ ಧಾರ್ಮಿಕ ಮಂಟಪದ ಉದ್ಘಾಟನೆಯನ್ನು ಮಾಡಿದರು. ತುಮಕೂರು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ದಸರಾ ಕಾರ್ಯಕ್ರಮದಲ್ಲಿ ಪರಮೇಶ್ವರ್, ಪತ್ನಿ ಕನ್ನಿಕಾ ಪರಮೇಶ್ವರಿ ಜೊತೆ ಧಾರ್ಮಿಕ ಕಾರ್ಯಕ್ರಮದಲ್ಲಿ ಶಾಸಕರಾದ ಜ್ಯೋತಿಗಣೇಶ್, ಸುರೇಶ್ ಗೌಡ, ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗಸ್ವಾಮಿಜಿ, ಹನುಮಂತನಾಥ ಸ್ವಾಮಿಜಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ಮೈಸೂರು ಅರಮನೆ ಮಾದರಿಯಲ್ಲಿ ಧಾರ್ಮಿಕ ಮಂಟಪ ನಿರ್ಮಾಣಗೊಂಡಿದ್ದು, ಧಾರ್ಮಿಕ ಮಂಟಪದಲ್ಲಿ ತಾಯಿ ಚಾಮುಂಡೇಶ್ವರಿ ದೇವಿ ವಿರಾಜಮಾನಳಾಗಿದ್ದು, ಚಾಮುಂಡೇಶ್ವರಿ ದೇವಿಗೆ ಗಣ್ಯರು ಹಾಗೂ ಸಂತರು ಪೂಜೆ ಸಲ್ಲಿಸಿದರು. ಜೊತೆಗೆ ಪತ್ನಿ ಸಹಿತ ಹೋಮದಲ್ಲಿ ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಕೆ ಎನ್ ರಾಜಣ್ಣ ಭಾಗಿಯಾಗಿದ್ದು, ಪೂರ್ಣಾಹುತಿಗೆ ಉಭಯ ನಾಯಕರು ಹವಿಸು ಸಲ್ಲಿಸಲಿದ್ದಾರೆ. ಇನ್ನು ಶಲ್ಯದಿಂದ ತಲೆಗೆ ಮುಂಡಾಸು ಸುತ್ತಿಕೊಂಡು ಧಾರ್ಮಿಕ ವಿಧಿ ವಿಧಾನದಲ್ಲಿ ಪರಮೇಶ್ವರ್ ಪಾಲ್ಗೊಂಡಿದ್ದರು.
ತುಮಕೂರು ದಸರಾ ಉತ್ಸವವು ಇಂದಿನಿಂದಲೇ ವಿದ್ಯುಕ್ತವಾಗಿ ಪ್ರಾರಂಭವಾಗಲಿದ್ದು, ಉತ್ಸವದ ಅಂಗವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭವ್ಯವಾಗಿ ನಿರ್ಮಿಸಿರುವ ತ್ರಿವಿಧ ದಾಸೋಹಿ ಶಿವಕುಮಾರ ಮಹಾ ಸ್ವಾಮೀಜಿಯವರ ದಸರಾ ಧಾರ್ಮಿಕ ಮಹಾಮಂಟಪದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಪ್ರತಿಷ್ಠಾಪಿಸಿ ಬೆಳಗ್ಗೆ 5 ಗಂಟೆಗೆ ಪೂಜಾ ಕಾರ್ಯಕ್ರಮಗಳು ನೆರವೇರಿಸಲಾಗುವುದು. ನವರಾತ್ರಿ ಪ್ರಯುಕ್ತ ಶ್ರೀ ಚಾಮುಂಡೇಶ್ವರಿ ದೇವಿಗೆ ಉತ್ಸವದ ಮೊದಲ ದಿನ ಶೈಲಪುತ್ರಿ ಅಲಂಕಾರವನ್ನು ಮಾಡಲಾಗುವುದು.
ಇಂದಿನ ದಸರಾ ಉತ್ಸವ ಕಾರ್ಯಕ್ರಮಗಳು ದಸರಾ ಉತ್ಸವದ ಪ್ರಯುಕ್ತ ಧಾರ್ಮಿಕ ಮಹಾಮಂಟಪದಲ್ಲಿ ಬೆಳಗ್ಗೆ 5 ಗಂಟೆಗೆ ನಾದಸ್ವರದೊಂದಿಗೆ ಭೂಮಿಪೂಜೆ ಹಾಗೂ ಧ್ವಜಾರೋಹಣವನ್ನು ನೆರವೇರಿಸಲಾಗುವುದು. ನಂತರ ಬೆಳಗ್ಗೆ 8 ಗಂಟೆಗೆ ನಗರದ ಸರ್ವೋದಯ ಹೈಸ್ಕೂಲ್ ಮೈದಾನದಲ್ಲಿ ಹಾಟ್ ಏರ್ ಬಲೂನ್ಗೆ ಚಾಲನೆ ನೀಡಲಾಗುವುದು.
ಬೆಳಗ್ಗೆ 9.30 ಗಂಟೆಗೆ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ನಿರ್ಮಿಸಿರುವ ಹಾಸ್ಯ ಚಕ್ರವರ್ತಿ ಶ್ರೀ ಟಿ.ಆರ್. ನರಸಿಂಹರಾಜು ಸಾಂಸ್ಕೃತಿಕ ದಸರಾ ವೈಭವ ವೇದಿಕೆಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ದಸರಾ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರೈಲ್ವೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ, ನವದೆಹಲಿಯ ಕರ್ನಾಟಕ ರಾಜ್ಯ ವಿಶೇಷ ಪ್ರತಿನಿಧಿ ಹಾಗೂ ಶಿರಾ ಶಾಸಕ ಟಿ.ಬಿ. ಜಯಚಂದ್ರ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಸಂಗಪ್ಪ ತಂಗಡಗಿ, ಸೇರಿದಂತೆ ಮತ್ತಿತರ ಜನಪ್ರತಿನಿಧಿಗಳು ಗಣ್ಯರು ಅಧಿಕಾರಿಗಳು ಉಪಸ್ಥಿತರಿರುತ್ತಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ