ಸೌಜನ್ಯ ಕೇಸ್‌ ಮರುತನಿಖೆಗಾಗಿ ವೀರೇಂದ್ರ ಹೆಗ್ಗಡೆ ಕುಟುಂಬ ಹೈಕೋರ್ಟ್‌ಗೆ

By Kannadaprabha NewsFirst Published Aug 28, 2023, 5:23 AM IST
Highlights

ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. 

ಬೆಳ್ತಂಗಡಿ (ಆ.28): ‘ವಿದ್ಯಾರ್ಥಿನಿ ಸೌಜನ್ಯ ಸಾವು ಮತ್ತು ಸಿಬಿಐ ನ್ಯಾಯಾಲಯದ ತೀರ್ಪಿನ ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬದವರನ್ನು ಸ್ಥಾಪಿತ ಹಿತಾಸಕ್ತಿಗಳು ಅವಹೇಳನ ಮಾಡುತ್ತಿರುವ ಬೆಳವಣಿಗೆಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಒದಗಿಸಲು ಮತ್ತೆ ಯಾವುದಾದರೂ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಡಾ.ಹೆಗ್ಗಡೆ ಕುಟುಂಬದವರು ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ನ್ಯಾಯಾಲಯದ ಆದೇಶಗಳನ್ನು ತಿರುಚಿ ಸತ್ಯ ಮರೆಮಾಚುತ್ತಿರುವ, ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸುತ್ತಿರುವ ಹಾಗೂ ನ್ಯಾಯಾಲಯ ಮತ್ತು ನ್ಯಾಯಾಧೀಶರನ್ನು ನಿಂದಿಸುತ್ತಿರುವ ಹೋರಾಟಗಾರ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುವಂತೆ ಡಾ.ಹೆಗ್ಗಡೆ ಕುಟುಂಬದವರ ಪರ ಕೋರ್ಟ್‌ಗೆ ಸಲ್ಲಿಕೆಯಾಗಿರುವ ರಿಟ್‌ ಅರ್ಜಿಯಲ್ಲಿ ಮನವಿ ಸಲ್ಲಿಸಲಾಗಿದೆ.

ಮಂಗಳೂರು: ಮುಸ್ಲಿಂ ವಿದ್ಯಾರ್ಥಿ ಮೇಲೆ ನೈತಿಕ ಪೊಲೀಸ್ ಗಿರಿ: ಎಸ್ಡಿಪಿಐ ಮುಖಂಡನ ಪುತ್ರ ಭಾಗಿ?

ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿದ್ದ ಸೌಜನ್ಯ ಹತ್ಯೆ ಪ್ರಕರಣದ ಕುರಿತು ಈಗಾಗಲೇ ಸಿಬಿಐ ತನಿಖೆ ನಡೆಸಿ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಅನ್ನೂ ಸಲ್ಲಿಸಿದ್ದು, ಪ್ರಕರಣದಲ್ಲಿ ಬಂಧಿತ ಸಂತೋಷ್‌ ರಾವ್‌ನನ್ನು ನ್ಯಾಯಾಲಯವೇ ನಿರಪರಾಧಿ ಎಂದು ಬಿಡುಗಡೆ ಮಾಡಿದೆ. ಈ ಹಿನ್ನೆಲೆಯಲ್ಲಿ ಪ್ರಕರಣದ ಮರು ತನಿಖೆಗೆ ಆಗ್ರಹಿಸಿ ತೀವ್ರ ಪ್ರತಿಭಟನೆಗಳು ಆರಂಭವಾಗಿವೆ.

ಕೊರಗಜ್ಜನ ಮೊರೆ: ಧರ್ಮಸ್ಥಳದ ಸೌಜನ್ಯ ಕೊಲೆ ಅತ್ಯಾಚಾರ ಪ್ರಕರಣದ ಆರೋಪಿಗಳು ಹುಚ್ಚರಾಗಿ ಬೀದಿಬೀದಿ ಅಲೆಯುವ ಶಿಕ್ಷೆಯಾಗುವಂತೆ ಸಮಾಜ ಸೇವಕ ನಿತ್ಯಾನಂದ ಒಳಕಾಡು ಭಾನುವಾರ ಇಲ್ಲಿನ ಕೊರಗಜ್ಜನ ಸನ್ನಿಧಿಯಲ್ಲಿ ವಿಶಿಷ್ಟರೀತಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಅವರು ಕಾವಿ ಉಡುಪಿ ತೊಟ್ಟು ನಗರದ ನೆಲ್ಲಿಕಟ್ಟೆಯ ಕೊರಗಜ್ಜ ಸನ್ನಿಧಿಯಲ್ಲಿ ಡೋಲಿನ ನಾದದ ಹಿನ್ನೆಲೆಯಲ್ಲಿ ಸೌಜನ್ಯಾಳ ಫೋಟೋವನ್ನು ಕೈಯಲ್ಲಿ ಹಿಡಿದುಕೊಂಡು ಉರುಳು ಸೇವೆ ನಡೆಸಿದರು. ಬಳಿಕ, ಸೌಜನ್ಯಳ ಅತ್ಯಾಚಾರಿಗೆ ತಕ್ಕ ಶಿಕ್ಷೆ ಆಗಬೇಕು, ಅವರ ಬಂಧನವಾಗಬೇಕು ಅಥವಾ ಅತ್ಯಾಚಾರಿಗಳು ಕೊರಗಜ್ಜನ ಹೆಸರು ಹೇಳಿ ಹುಚ್ಚನಂತೆ ಬೀದಿಬೀದಿಯ ಲ್ಲಿ ಅಲೆಯುವಂತಾಗಬೇಕು ಎಂದವರು ಕೊರಗಜ್ಜನಿಗೆ ಪ್ರಾರ್ಥನೆ ಸಲ್ಲಿಸಿದರು. ನೂರಾರು ಮಂದಿ ದೈವಭಕ್ತರು ಹಾಜರಿದ್ದರು.

ಮರು ತನಿಖೆ ಆಗ್ರಹಿಸಿ ಸಿಎಂಗೆ ದ.ಕ. ಬಿಜೆಪಿ ಮನವಿ: ಸೌಜನ್ಯಾ ಹತ್ಯೆ ಪ್ರಕರಣದ ತಪ್ಪಿತಸ್ಥರನ್ನು ಪತ್ತೆಹಚ್ಚಿ ನ್ಯಾಯೋಚಿತ ಶಿಕ್ಷೆ ನೀಡುವಲ್ಲಿ ಈ ವರೆಗಿನ ತನಿಖೆಗಳು ವಿಫಲವಾಗಿರುವ ಹಿನ್ನೆಲೆಯಲ್ಲಿ ಸೂಕ್ತ ಮರು ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಗ್ರಹಿಸಿ ಮುಖ್ಯಮಂತ್ರಿಗೆ ಬಿಜೆಪಿ ದ.ಕ. ಜಿಲ್ಲಾ ಘಟಕ ಮನವಿ ಮಾಡಿದೆ. ಸೌಜನ್ಯ ಸಾವಿನ ಪ್ರಕರಣದಲ್ಲಿ ಮರು ತನಿಖೆಗೆ ಆಗ್ರಹಿಸಿ ಅವಿಭಜಿತ ದ.ಕ. ಜಿಲ್ಲಾ ಬಿಜೆಪಿ ಘಟಕ ಸಂಸದ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಭಾನುವಾರ ಬೆಳ್ತಂಗಡಿಯಲ್ಲಿ ಪ್ರತಿಭಟನೆ ನಡೆಸಿದ ಬಳಿಕ ಮನವಿ ಮೂಲಕ ಮುಖ್ಯಮಂತ್ರಿಗಳನ್ನು ಆಗ್ರಹಿಸಿದೆ.

ರಾಜ್ಯದಲ್ಲಿ ಅವನತಿಯ ಹಾದಿಯಲ್ಲಿ ಬಿಜೆಪಿ ಸಾಗಿದೆ: ಐವನ್‌ ಡಿಸೋಜ ಟೀಕೆ

ಸಿಬಿಐ ನ್ಯಾಯಾಲಯದ ಆದೇಶ ಬಿಡುಗಡೆಗೊಂಡ ತಕ್ಷಣ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಹಾಗೂ ಪ್ರತಾಪಸಿಂಹ ನಾಯಕ್‌, ಸೌಜನ್ಯಳ ಹತ್ಯೆಗೆ ಸಂಬಂ​ಧಿಸಿದಂತೆ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಮರು ತನಿಖೆಗೆ ಆಗ್ರಹಿಸಿರುತ್ತಾರೆ. ಈ ಹಿನ್ನೆಲೆಯಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಈ ಪ್ರಕರಣದ ಮರು ತನಿಖೆಗೆ ಆಗ್ರಹಿಸುತ್ತಿರುವುದಾಗಿ ಮನವಿಯಲ್ಲಿ ಒತ್ತಾಯಿಸಲಾಗಿದೆ.

click me!