ರಾಜ್ಯದ 186 ತಾಲೂಕಲ್ಲಿ ಬರ, 113 ತಾಲೂಕಲ್ಲಿ ಸಮೀಕ್ಷೆ ಪೂರ್ಣ: ಸಿಎಂ ಸಿದ್ದರಾಮಯ್ಯ

By Kannadaprabha NewsFirst Published Sep 3, 2023, 1:00 AM IST
Highlights

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರಾಜ್ಯದ 113 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಇನ್ನೂ 73 ತಾಲೂಕುಗಳಲ್ಲಿ ಬರದ ಸ್ಥಿತಿ ಇದೆ ಎಂಬ ಮಾಹಿತಿ ಇದ್ದು, ಈ ತಾಲೂಕುಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗುವುದು. 

ವಿಜಯಪುರ (ಸೆ.03): ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದ್ದು, ರಾಜ್ಯದ 113 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ ಎಂಬುದು ಸಮೀಕ್ಷೆಯಿಂದ ಗೊತ್ತಾಗಿದೆ. ಇನ್ನೂ 73 ತಾಲೂಕುಗಳಲ್ಲಿ ಬರದ ಸ್ಥಿತಿ ಇದೆ ಎಂಬ ಮಾಹಿತಿ ಇದ್ದು, ಈ ತಾಲೂಕುಗಳಲ್ಲಿ ಸಮೀಕ್ಷೆ ಕೈಗೊಳ್ಳಲಾಗುವುದು. ಈ ವರದಿಗಳ ಅನುಸಾರ ಯಾವ, ಯಾವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂಬುದರ ಬಗ್ಗೆ ಸೋಮವಾರ ನಡೆಯುವ ಸಭೆಯಲ್ಲಿ ತೀರ್ಮಾನಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜಿಲ್ಲೆಯ ಆಲಮಟ್ಟಿಯಲ್ಲಿ ಶನಿವಾರ ಕೃಷ್ಣೆಯ ಜಲಧಿಗೆ ಬಾಗಿನ ಅರ್ಪಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಿ ಮಳೆಯಾಗಿದೆ. ಜೂನ್‌ನಲ್ಲಿ ಶೇ.56ರಷ್ಟುಮಳೆಯಾಗಿದೆ. ಕೃಷಿ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಕಡಿಮೆಯಾಗಿದೆ. ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿರುವ ಸಚಿವ ಸಂಪುಟ ಉಪ ಸಮಿತಿಯಿಂದ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ಬರಪೀಡಿತ 113 ತಾಲೂಕುಗಳ ಕುರಿತು ಸಮಿತಿ ಸಮೀಕ್ಷೆ ನಡೆದಿದೆ. ಇನ್ನೂ 73 ತಾಲೂಕುಗಳಲ್ಲಿ ಬರದ ಪರಿಸ್ಥಿತಿ ಇದೆ ಎಂಬ ಮಾಹಿತಿ ಬಂದಿದೆ. 

'ಬಿಗ್ ಬಾಸ್ ಕನ್ನಡ 10'ರ ಮೊಟ್ಟ ಮೊದಲ ಪ್ರೋಮೋ ಔಟ್: ಈ ಬಾರಿಯ ಸಂಥಿಂಗ್ ಸ್ಪೆಷಲ್ ಏನು ಗೊತ್ತಾ?

ಅಲ್ಲಿಯೂ ಸಮೀಕ್ಷೆ ನಡೆಸಲಾಗುತ್ತದೆ. ಸಮೀಕ್ಷೆಯ ವರದಿಯಾಧರಿಸಿ ಯಾವ, ಯಾವ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಬೇಕು ಎಂಬುದನ್ನು ತೀರ್ಮಾನಿಸಲಾಗುವುದು. ಸೋಮವಾರ ನಡೆಯುವ ಸಭೆಯಲ್ಲಿ ಬರಗಾಲ ಘೋಷಣೆ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು. ಬರ ಘೋಷಣೆ ನಂತರ ಬರಪೀಡಿತ ತಾಲೂಕುಗಳಿಗೆ ನೆರವು ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಕೇಂದ್ರದ ಸಮಿತಿಯು ಸಮೀಕ್ಷೆ ನಡೆಸಿದ ನಂತರ, ಎನ್‌ಡಿಆರ್‌ಎಫ್‌ ಮಾರ್ಗಸೂಚಿಯಂತೆ ಹಣ ಬಿಡುಗಡೆ ಮಾಡುತ್ತದೆ. 

ನಮಗೆ ಅನ್ಯ ಪಕ್ಷದ ಶಾಸಕರ ಅವಶ್ಯಕತೆಯಿಲ್ಲ: ಡಿ.ಕೆ.ಶಿವಕುಮಾರ್‌

ರಾಜ್ಯ ಸರ್ಕಾರ ಈ ಅನುದಾನದಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುತ್ತದೆ. ಅಲ್ಲದೇ ರಾಜ್ಯ ಸರ್ಕಾರವೂ ಪರಿಹಾರ ಕಾರ್ಯಗಳಿಗೆ ಹಣ ವಿನಿಯೋಗಿಸಲಿದೆ. 2020ರಿಂದ ಇಲ್ಲಿಯವರೆಗೆ ದರ ಪರಿಷ್ಕರಣೆ ಆಗಿಲ್ಲ. ಎನ್‌ಡಿಆರ್‌ಎಫ್‌ ನಿಯಮಾವಳಿಗಳಲ್ಲಿ ಬದಲಾವಣೆ ಮಾಡಲು ಈಗಾಗಲೇ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ. ರೈತರಿಗೆ ಇನ್ನಷ್ಟುಅನುಕೂಲತೆ ತರುವ ದೃಷ್ಟಿಯಿಂದ ನಿಯಮಾವಳಿಗಳ ಬದಲಾವಣೆ ಮಾಡುವಂತೆ ಈಗಾಗಲೇ ಕೇಂದ್ರಕ್ಕೆ ಪತ್ರ ಬರೆದು ಕೋರಲಾಗಿದೆ ಎಂದು ತಿಳಿಸಿದರು.

click me!