
ನವದೆಹಲಿ (ನ.15): ಯಂಗ್ ಇಂಡಿಯಾಗೆ ದೇಣಿಗೆ ನೀಡಿದ ವಿಚಾರವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೋಮವಾರ ಮತ್ತೆ ಜಾರಿ ನಿರ್ದೇಶನಾಲಯ (ಇ.ಡಿ.) ಮುಂದೆ ವಿಚಾರಣೆಗೆ ಹಾಜರಾದರು. ಸತತ ಮೂರು ಗಂಟೆ ವಿಚಾರಣೆ ನಡೆಸಿದ ಅಧಿಕಾರಿಗಳು ದೇಣಿಗೆ, ಆದಾಯದ ಮೂಲ ಸೇರಿ ವಿವಿಧ ವಿಚಾರಗಳ ಕುರಿತು ಪ್ರಶ್ನಿಸಿದರು. ವಿಚಾರಣೆ ನಂತರ ಸುದ್ದಿಗಾರರ ಜತೆಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇ.ಡಿ. ಅಧಿಕಾರಿಗಳು ನನಗೆ ಮತ್ತು ಸೋದರ ಡಿ.ಕೆ.ಸುರೇಶ್ಗೆ ಸಂಬಂಧಿಸಿದ ಇನ್ನಷ್ಟು ದಾಖಲೆಗಳನ್ನು ಕೇಳಿದ್ದಾರೆ. ಅಲ್ಲದೆ, ದಾಖಲೆ ಸಲ್ಲಿಸಲು ಮೂರು ದಿನಗಳ ಕಾಲಾವಕಾಶವನ್ನೂ ನೀಡಿದ್ದಾರೆ. ಉಳಿದ ದಾಖಲೆಗಳನ್ನು ಇ-ಮೇಲ್ ಮೂಲಕ ಕಳುಹಿಸಲಾಗುವುದು ಎಂದು ತಿಳಿಸಿದ್ದೇನೆ ಎಂದರು. ಯಂಗ್ ಇಂಡಿಯಾ ದೇಣಿಗೆ ಪ್ರಕರಣಕ್ಕೆ ಸಂಬಂಧಿಸಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸುತ್ತಿರುವುದು ಇದು ಎರಡನೇ ಬಾರಿ.
ಇನ್ನು 10 ದಿನದಲ್ಲಿ ಡಿಕೆಶಿ 5 ಕೇಸ್ ವಿಚಾರಣೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸೋಮವಾರ ಮತ್ತೊಮ್ಮೆ ವಿಚಾರಣೆ ಎದುರಿಸುವಂತೆ ಜಾರಿ ನಿರ್ದೇಶನಾಲಯ ನೋಟಿಸ್ ನೀಡಿದ್ದು, ಮುಂದಿನ ಒಂದು ವಾರದಲ್ಲಿ ಶಿವಕುಮಾರ್ ಅವರ ಇನ್ನೂ ನಾಲ್ಕು ಪ್ರಕರಣಗಳು ವಿವಿಧ ನ್ಯಾಯಾಲಯ, ತನಿಖಾ ಸಂಸ್ಥೆಗಳಲ್ಲಿ ವಿಚಾರಣೆಗೆ ಬರಲಿವೆ. ಹತ್ತು ದಿನಗಳ ಅವಧಿಯಲ್ಲಿ ಐದು ಪ್ರಕರಣಗಳ ವಿಚಾರಣೆ ನಡೆಯುತ್ತಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶಗೊಂಡಿದ್ದು, ‘ಡಿ.ಕೆ.ಶಿವಕುಮಾರ್ ಅವರನ್ನು ಚುನಾವಣೆ ಸಿದ್ಧತೆಯಿಂದ ದೂರ ಉಳಿಯುವಂತೆ ಮಾಡಲು ಉದ್ದೇಶಪೂರ್ವಕವಾಗಿಯೇ ವಿಚಾರಣೆಗಳ ಹೆಸರಿನಲ್ಲಿ ಒತ್ತಡ ಹೇರಲಾಗುತ್ತಿದೆ.
ಗೌಡ, ಕೃಷ್ಣರನ್ನು ಆಹ್ವಾನಿಸಿಲ್ಲ:ಡಿ.ಕೆ.ಶಿವಕುಮಾರ್ ಗರಂ
ಅವರಿಗೆ ಬಿಡುವಿಲ್ಲದಂತೆ ಮಾಡಿ ರಾಜಕೀಯ ಲಾಭ ಪಡೆಯಲು ಬಿಜೆಪಿಯು ಷಡ್ಯಂತ್ರ ರೂಪಿಸಿ ಸಾಂವಿಧಾನಿಕ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ. ಕಳೆದ ವಾರವಷ್ಟೇ (ನ.7) ಯಂಗ್ ಇಂಡಿಯಾ ಪ್ರಕರಣದ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ವಿಚಾರಣೆಗೆ ಕರೆದಿದ್ದ ಜಾರಿ ನಿರ್ದೇಶನಾಲಯವು (ಇ.ಡಿ) ಸೋಮವಾರ ಮತ್ತೊಮ್ಮೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ. ವಿಚಾರಣೆಗೆ ಹಾಜರಾಗಲು ಈಗಾಗಲೇ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಇದಲ್ಲದೆ ಅಕ್ರಮ ಆಸ್ತಿ ಗಳಿಕೆ ಸಂಬಂಧ ಸಿಬಿಐ ಕೂಡ ಪ್ರಕರಣ ದಾಖಲಿಸಿದ್ದು, ಈ ಸಂಬಂಧದ ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ನ.18ರಂದು ವಿಚಾರಣೆಗೆ ಬರಲಿದೆ.
ಪ್ರತಿಮೆಗೆ ಸರ್ಕಾರದ ಹಣ ಬೇಡ ಎಂದು ಮೊದಲೇ ಹೇಳಿದ್ದೆ: ಡಿಕೆಶಿ
ಅಕ್ರಮ ಆಸ್ತಿ ಗಳಿಕೆ ಕುರಿತು ಇ.ಡಿ. ಹಾಗೂ ಸಿಬಿಐ ಎರಡೂ ಕಡೆ ಪ್ರಕರಣ ದಾಖಲಿಸಿರುವುದರ ವಿರುದ್ಧ ಶಿವಕುಮಾರ್ ಸಲ್ಲಿಸಿರುವ ಅರ್ಜಿ ಇದಾಗಿದೆ. ಇನ್ನು ಇದರ ಬಳಿಕ ನ.19ರಂದು ಐಟಿ ಹಾಗೂ ಇತರೆ ಎರಡು ಪ್ರಕರಣಗಳ ಬಗ್ಗೆ ಸಿಟಿ ಸಿವಿಲ್ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಬೇನಾಮಿ ಆಸ್ತಿ ವಿಚಾರದ ಬಗ್ಗೆ ಚೆನ್ನೈನಲ್ಲಿ ದಾಖಲಾಗಿರುವ ದೂರಿನ ಬಗ್ಗೆ ನ.21ರಂದು ವರ್ಚುಯಲ್ ವಿಚಾರಣೆ ನಡೆಯಲಿದೆ. ನಂತರ ನ.23ರಂದು ಮತ್ತೆ ಇ.ಡಿ. ಪ್ರಕರಣದ ವಿಚಾರಣೆ ನಡೆಯಲಿದೆ. ಇದೆಲ್ಲವೂ ಶಿವಕುಮಾರ್ ಅವರಿಗೆ ನೀಡುತ್ತಿರುವ ಉದ್ದೇಶಪೂರ್ವಕ ಕಿರುಕುಳ ಎಂದು ಕಾರ್ಯಕರ್ತರು ದೂರಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ