ಕರ್ನಾಟಕದ ಜನತೆಯ ನಡುವೆ ಇರಲು ಉತ್ಸುಕನಾಗಿದ್ದೇನೆ: ಕನ್ನಡದಲ್ಲಿ ಟ್ವೀಟ್ ಮಾಡಿದ ಮೋದಿ!

By Govindaraj SFirst Published Jan 19, 2023, 7:17 AM IST
Highlights

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

ಯಾದಗಿರಿ (ಜ.19): ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು, ಕರ್ನಾಟಕ ಪ್ರವಾಸದ ಬಗ್ಗೆ ಕನ್ನಡದಲ್ಲೇ ಪ್ರಧಾನಿ ಟ್ವೀಟ್ ಮಾಡುವ ಮೂಲಕ ಖುಷಿಯನ್ನು ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ  ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ  ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ಪ್ರಧಾನಿ ಮೋದಿ ಕನ್ನಡಕ್ಕೆ ಟ್ರಾನ್ಸಲೇಟ್ ಮಾಡಿರುವ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಜನತೆಯ ನಡುವೆ ಇರಲು ನಾನು ಉತ್ಸುಕನಾಗಿದ್ದೇನೆ. ಸುಮಾರು 10,000 ಕೋಟಿ ರೂ. ಮೌಲ್ಯದ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಅಥವಾ ಶಂಕುಸ್ಥಾಪನೆ ನೆರವೇರಿಸಲಾಗುವುದು. ಈ ಕಾಮಗಾರಿಗಳು ಜಲ ಶಕ್ತಿ, ರಸ್ತೆಗಳು ಒಳಗೊಂಡಿವೆ ಮತ್ತು ಹೊಸದಾಗಿ ಘೋಷಿಸಲಾದ ಕಂದಾಯ ಗ್ರಾಮಗಳ ಫಲಾನುಭವಿಗಳಿಗೆ ಹಕ್ಕು ಪತ್ರಗಳನ್ನು ವಿತರಿಸಲಾಗುವುದು.

— Narendra Modi (@narendramodi)


10500 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ: ಯಾದಗಿರಿ ಜಿಲ್ಲೆ ಸುರಪುರ ಮತಕ್ಷೇತ್ರದ ಕೊಡೇಕಲ್‌ ಗ್ರಾಮದಲ್ಲಿ 10,500 ಕೋಟಿ ರು.ಗಳ ವೆಚ್ಚದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಬಳಿಕ, ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮಳಖೇಡದಲ್ಲಿ ತಾಂಡಾ ಹಾಗೂ ಹಟ್ಟಿಗಳಲ್ಲಿ ವಾಸವಿರುವ 51,900 ಬಡ ಕುಟುಂಬಗಳಿಗೆ ಏಕಕಾಲದಲ್ಲಿ ಹಕ್ಕುಪತ್ರ ವಿತರಣೆಗೆ ನಿಶಾನೆ ತೋರಲಿದ್ದಾರೆ. ಕಳೆದೊಂದು ವಾರದ ಅವಧಿಯಲ್ಲಿ ಉತ್ತರ ಕರ್ನಾಟಕಕ್ಕೆ ಮೋದಿ ನೀಡುತ್ತಿರುವ 2ನೇ ಭೇಟಿ ಇದಾಗಿದೆ. ಜ.12ರಂದು ಹುಬ್ಬಳ್ಳಿಯಲ್ಲಿ ನಡೆದ 5 ದಿನಗಳ ರಾಷ್ಟ್ರೀಯ ಯುವಜನೋತ್ಸವಕ್ಕೆ ಅವರು ಚಾಲನೆ ನೀಡಿದ್ದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ತವರಲ್ಲಿ ನಡೆಯುತ್ತಿರುವ ಮೋದಿಯವರ ಈ ಕಾರ್ಯಕ್ರಮದಿಂದಾಗಿ ಬಿಜೆಪಿಯಲ್ಲಿ ಚುನಾವಣೋತ್ಸಾಹ ಗರಿಗೆದರಿದೆ.

ಮುಸ್ಲಿಮರ ವಿಶ್ವಾಸಕ್ಕೆ ಪಡೆ​ಯಲು ಮೋದಿ ಸಲ​ಹೆ: ಯಡಿಯೂರಪ್ಪ

ಸ್ಕಾಡಾಗೆ ಚಾಲನೆ: ಬೆಳಗ್ಗೆ 11ಕ್ಕೆ ವಾಯುಪಡೆಯ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಆಗಮಿಸಲಿರುವ ಮೋದಿ, ಅಲ್ಲಿಂದ ವಾಯುಪಡೆಯ ಎಂಐ 17 ವಿಶೇಷ ಹೆಲಿಕಾಪ್ಟರ್‌ ಮೂಲಕ ಕೊಡೇಕಲ್‌ ಬಳಿ ನಿರ್ಮಿಸಲಾದ ವಿಶೇಷ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ. ಬಳಿಕ, ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 4,700 ಕೋಟಿ ರು.ಗಳ ವೆಚ್ಚದಲ್ಲಿ ನಿರ್ಮಿಸಲಾಗಿರುವ ನಾರಾಯಣಪುರ ಬಸವ ಸಾಗರ ಜಲಾಶಯದ ಗೇಟುಗಳ ಸ್ಕಾಡಾ (ಜಿಪಿಎಸ್‌-ರಿಮೋಟ್‌ ಆಧಾರಿತ ಜಲಾಶಯ ಗೇಟುಗಳ ಚಾಲನೆ) ವ್ಯವಸ್ಥೆ ಉದ್ಘಾಟಿಸಲಿದ್ದಾರೆ. ಜೊತೆಗೆ, 2,050 ಕೋಟಿ ರು.ಗಳ ವೆಚ್ಚದ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ 2,000 ಕೋಟಿ ರು.ಗಳ ವೆಚ್ಚದ ಸೂರತ್‌-ಚೆನ್ನೈ ಎಕ್ಸಪ್ರೆಸ್‌ ವೇ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸುವೆ: ಸಿದ್ದರಾಮಯ್ಯ ಪುನರುಚ್ಚಾರ

ಬಳಿಕ, ಮಧ್ಯಾಹ್ನ 1.15ಕ್ಕೆ ಮಳಖೇಡಕ್ಕೆ ಆಗಮಿಸಲಿರುವ ಮೋದಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್‌, ರಾಯಚೂರು ಜಿಲ್ಲೆಗಳ ತಾಂಡಾ ಹಾಗೂ ಹಟ್ಟಿಗಳಲ್ಲಿ ವಾಸವಿರುವ 51,900 ಬಡ ಕುಟುಂಬಗಳಿಗೆ ಏಕಕಾಲದಲ್ಲಿ ಹಕ್ಕುಪತ್ರ ವಿತರಣೆಗೆ ನಿಶಾನೆ ತೋರಲಿದ್ದಾರೆ. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಪಶು ಸಂಗೋಪನೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್‌ ಹಾಗೂ ಇತರ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

click me!