
ಹೊಸಪೇಟೆ (ಆ.02): ಕನ್ನಡ ವಿಶ್ವವಿದ್ಯಾಲಯದ ಅನುದಾನ ದುರ್ಬಳಕೆ ಮಾಡಿಕೊಂಡ ಆರೋಪದಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತರಲ್ಲೊಬ್ಬರಾದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕನ್ನಡ ವಿವಿಯಲ್ಲಿ ಕುಲಪತಿಯಾಗಿದ್ದ ಡಾ. ಮಲ್ಲಿಕಾ ಘಂಟಿ 2015- 16, 2016- 17ನೇ ಸಾಲಿನಲ್ಲಿ 1.69 ಕೋಟಿ ಮೊತ್ತದ ಕಾಮಗಾರಿಗಳನ್ನು ಕೆಆರ್ಐಡಿಎಲ್ ಸಂಸ್ಥೆಯಿಂದ ನಿರ್ವಹಿಸಲು ಆದೇಶಿಸುವ ಮೂಲಕ ಶೇ. 8ರಷ್ಟು ಸೇವಾ ಶುಲ್ಕ ಮೊತ್ತದ .13.56 ಲಕ್ಷ ಆರ್ಥಿಕ ನಷ್ಟವನ್ನು ಉಂಟು ಮಾಡಿದ್ದಾರೆ.
ಉದ್ದೇಶಪೂರ್ವಕವಾಗಿ ಕೆಟಿಪಿಪಿ ಕಾಯ್ದೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ಕುರಿತು ಕನ್ನಡ ವಿವಿ ಕುಲಸಚಿವ ಡಾ. ಸುಬ್ಬಣ್ಣ ರೈ ನೀಡಿದ ದೂರಿನ ಮೇರೆಗೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನು ಸಿಎಂ ಸಿದ್ದರಾಮಯ್ಯ ಪ್ರಭಾವದಿಂದ ಅಂದು ಡಾ.ಮಲ್ಲಿಕಾ ಘಂಟಿ ಕುಲಪತಿಯಾಗಿದ್ದರು.
ಸೌಜನ್ಯ ಕೇಸ್: ಭಕ್ತರು ಗೊಂದಲಕ್ಕೆ ಈಡಾಗದಂತೆ ಡಾ.ಹೆಗ್ಗಡೆ ಮನವಿ
ಬಿಎಂಟಿಸಿ ಆರು ಅಧಿಕಾರಿಗಳ ವಿರುದ್ಧ ಎಫ್ಐಆರ್: ಬೆಂಗಳೂರು ಮಹಾನಗರ ಸಾರಿಗೆ ನಿಗಮ(ಬಿಎಂಟಿಸಿ)ದ ಕೇಂದ್ರ ಕಚೇರಿಯಲ್ಲಿ ಐಎಎಸ್, ಐಪಿಎಸ್, ಐಎಫ್ಎಸ್ ಅಧಿಕಾರಿಗಳ ಸಹಿ ನಕಲು ಮಾಡಿ ನಿಗಮಕ್ಕೆ .76.57 ಲಕ್ಷ ನಷ್ಟಉಂಟು ಮಾಡಿದ ಆರೋಪದಡಿ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಸೇರಿ ಆರು ಮಂದಿ ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬಿಎಂಟಿಸಿ ಕೇಂದ್ರ ಕಚೇರಿಯ ಸಹಾಯಕ ಭದ್ರತಾ ಮತ್ತು ಜಾಗೃತಾ ಅಧಿಕಾರಿ ಸಿ.ಕೆ.ರಮ್ಯಾ ಅವರು ನೀಡಿದ ದೂರಿನ ಮೇರೆಗೆ ನಿಗಮದ ವಾಣಿಜ್ಯ ವಿಭಾಗದ ಮುಖ್ಯ ಸಂಚಾರ ವ್ಯವಸ್ಥಾಪಕ ಶ್ರೀರಾಮ ಮುಲ್ಕಾವನ್, ವಿಭಾಗೀಯ ಸಂಚಲನ ಅಧಿಕಾರಿ ಶ್ಯಾಮಲಾ ಎಸ್.ಮದ್ದೋಡಿ, ಸಹಾಯಕ ಸಂಚಾರ ವ್ಯವಸ್ಥಾಪಕಿ ಬಿ.ಕೆ.ಮಮತಾ, ಸಹಾಯಕ ಸಂಚಾರ ಅಧೀಕ್ಷಕಿ ಟಿ.ಅನಿತಾ, ಸಂಚಾರ ನಿರೀಕ್ಷಕ ಸತೀಶ್, ಕಿರಿಯ ಸಹಾಯಕ ಪ್ರಕಾಶ್ ಕೊಪ್ಪಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ ಕಾಲೇಜು ಕೇಸ್ನಲ್ಲಿ ಎಸ್ಐಟಿ ತನಿಖೆ ಇಲ್ಲ: ಸಿದ್ದರಾಮಯ್ಯ
ಆರೋಪಿಗಳು ಕಳೆದ ಮೂರು ವರ್ಷಗಳಲ್ಲಿ ನಿಗಮದ ಕೆಲ ಬಸ್ ನಿಲ್ದಾಣಗಳ ವಾಣಿಜ್ಯ ಸಂಕೀರ್ಣ, ಬಸ್ ನಿಲ್ದಾಣ ಸ್ವಚ್ಛತಾ ನಿರ್ವಹಣೆ ಗುತ್ತಿಗೆ ಸೇರಿದಂತೆ ನಾಲ್ಕು ಟೆಂಡರ್ಗಳಲ್ಲಿ ಗುತ್ತಿಗೆದಾರರೊಂದಿಗೆ ಸೇರಿಕೊಂಡು ಒಳಸಂಚು ರೂಪಿಸಿದ್ದಾರೆ. ದಾಖಲೆಗಳಲ್ಲಿ ಬಿಎಂಟಿಸಿ ಮಾಹಿತಿ ಮತ್ತು ತಂತ್ರಜ್ಞಾನ ವಿಭಾಗದ ನಿರ್ದೇಶಕ ಸೂರ್ಯಸೇನ್, ವ್ಯವಸ್ಥಾಪಕ ನಿರ್ದೇಶಕರಾದ ಅನ್ಬುಕುಮಾರ್, ರೇಜು, ಸಿ.ಶಿಖಾ, ಭದ್ರತಾ ಮತ್ತು ಜಾಗೃತಾ ವಿಭಾಗದ ನಿರ್ದೇಶಕ ಕೆ.ಅರುಣ್ ಅವರ ಸಹಿಗಳನ್ನು ನಕಲು ಮಾಡಿ ನಿಗಮಕ್ಕೆ .76.57 ಲಕ್ಷ ಆರ್ಥಿಕ ನಷ್ಟಉಂಟು ಮಾಡಿರುವುದು ಇಲಾಖಾ ತನಿಖೆಯಲ್ಲಿ ದೃಢಪಟ್ಟಿದೆ. ಹೀಗಾಗಿ ಈ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಕೋರಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ