Drunk Driver Arrest: ಕುಡಿದ ನಶೆಯಲ್ಲಿ ವಾಹನ ಚಲಾಯಿಸಿ ಪೊಲೀಸ್‌ಗೆ ಡಿಕ್ಕಿ ಹೊಡೆದವನ ವಿರುದ್ಧ ಎಫ್‌ಐಆರ್

Kannadaprabha News   | Kannada Prabha
Published : May 27, 2025, 07:16 AM ISTUpdated : May 27, 2025, 10:54 AM IST
Bengaluru crime

ಸಾರಾಂಶ

ಬೆಂಗಳೂರಿನಲ್ಲಿ ಪಾನಮತ್ತ ಚಾಲಕನೊಬ್ಬ ಒನ್‌ ವೇ ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಬ್ಯಾರಿಕೇಡ್ ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ಗೆ ಡಿಕ್ಕಿ ಹೊಡೆದಿದ್ದಾನೆ. ಕಾನ್ಸ್‌ಟೇಬಲ್‌ಗೆ ಗಾಯಗಳಾಗಿದ್ದು, ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು (ಮೇ.27) : ಪಾನಮತ್ತ ಚಾಲಕ ಒನ್‌ ವೇ ರಸ್ತೆಯಲ್ಲಿ ಅತಿವೇಗವಾಗಿ ಕಾರು ಚಲಾಯಿಸಿ ಬ್ಯಾರಿಗೇಡ್‌ಗೆ ಡಿಕ್ಕಿ ಹೊಡೆದು ಬಳಿಕ ಪೊಲಿಸ್‌ ಕಾನ್ಸ್‌ಟೇಬಲ್‌ಗೂ ಗುದ್ದಿಸಿ ಗಾಯಗೊಳಿಸಿರುವ ಘಟನೆ ಆಡುಗೋಡಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೋರಮಂಗಲದ ಜ್ಯೋತಿ ನಿವಾಸ್‌ ಕಾಲೇಜು ಜಂಕ್ಷನ್‌ನಲ್ಲಿ ಶನಿವಾರ ಮುಂಜಾನೆ ಸುಮಾರು 1.40ಕ್ಕೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಕೋರಮಂಗಲ ಠಾಣೆ ಕಾನ್ಸ್‌ಟೇಬಲ್‌ ಬಿ.ಎನ್‌.ಶ್ರೀನಿವಾಸ್‌ ಗಾಯಗೊಂಡಿದ್ದು, ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇವರು ನೀಡಿದ ದೂರಿನ ಮೇರೆಗೆ ಕೇರಳ ಮೂಲದ ಕಾರು ಚಾಲಕ ನಂದುಕೃಷ್ಣ(29) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಏನಿದು ಘಟನೆ?:

ಕೋರಮಂಗಲ ಪೊಲೀಸ್‌ ಠಾಣೆ ಕಾನ್ಸ್‌ಟೇಬಲ್‌ ಬಿ.ಎನ್‌,ಶ್ರೀನಿವಾಸ್‌ ಅವರನ್ನು ಮೇ 24ರ ರಾತ್ರಿ ಕೋರಮಂಗಲದ ವೈ.ಡಿ.ಮಠ ರಸ್ತೆಯಲ್ಲಿ ರಾತ್ರಿ ಗಸ್ತು ಕರ್ತವ್ಯ ನಿಯೋಜಿಸಲಾಗಿತ್ತು. ಅದರಂತೆ ಮುಂಜಾನೆ ಸುಮಾರು 1.40ಕ್ಕೆ ಜ್ಯೋತಿ ನಿವಾಸ್‌ ಕಾಲೇಜು ಜಂಕ್ಷನ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದೇ ವೇಳೆ ಮೈಕ್ರೋ ಲ್ಯಾಂಡ್‌ ಜಂಕ್ಷನ್‌ ಕಡೆಯಿಂದ ಜ್ಯೋತಿ ನಿವಾಸ್‌ ಕಾಲೇಜು ಜಂಕ್ಷನ್‌ ಕಡೆಗೆ ಏಕಮುಖ ರಸ್ತೆಯಲ್ಲಿ ಅತಿವೇಗವಾಗಿ ಕಾರೊಂದು ಬಂದಿದ್ದು, ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಕರ್ತವ್ಯ ನಿರತ ಕಾನ್ಸ್‌ಟೇಬಲ್‌ ಶ್ರೀನಿವಾಸ್‌ಗೂ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಶ್ರೀನಿವಾಸ್‌ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಸಹೋದ್ಯೋಗಿಗಳ ನೆರವಿನಿಂದ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದಾರೆ. ಇನ್ನು ಅಪಘಾತ ಎಸಗಿ ಕಾರಿನೊಳಗೆ ಇದ್ದ ಚಾಲಕ ನಂದುಕೃಷ್ಣನನ್ನು ಹೊರಗೆ ಬರುವಂತೆ ಕರೆದರೂ ಆತ ಕಾರಿನಿಂದ ಕೆಳಗೆ ಇಳಿಯದೇ ಉದ್ಧಟತನ ಪ್ರದರ್ಶಿಸಿದ್ದಾನೆ. ಬಳಿಕ ಸಾರ್ವಜನಿಕರ ಸಹಾಯದಿಂದ ಕಾರಿನ ಗಾಜು ಹೊಡೆದು ಆತನನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಆತ ಕಂಠಮಟ್ಟ ಮದ್ಯ ಸೇವಿಸಿರುವುದು ಕಂಡು ಬಂದಿದೆ.

ಕಂಠಮಟ್ಟ ಮದ್ಯ ಸೇವನೆ:

ಅರೆಪ್ರಜ್ಞಾವಸ್ಥೆಯಲ್ಲಿದ್ದ ಕಾರು ಚಾಲಕ ನಂದುಕೃಷ್ಣನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆ ಮಾಡಿಸಲಾಗಿದೆ. ಬಳಿಕ ಗಾಯಾಳು ಕಾನ್ಸ್‌ಟೇಬಲ್‌ ಶ್ರೀನಿವಾಸ್‌ ನೀಡಿದ ದೂರಿನ ಮೇರೆಗೆ ಪಾನಮತ್ತ ಚಾಲನೆ ಹಾಗೂ ಅಜಾಗರೂಕತೆ ಮತ್ತು ನಿರ್ಲಕ್ಷ್ಯದ ಚಾಲನೆ ಆರೋಪದಡಿ ಕಾರು ಚಾಲಕ ನಂದುಕೃಷ್ಣನ ವಿರುದ್ಧ ಆಡುಗೋಡಿ ಸಂಚಾರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಬಳಿಕ ಕಾರು ಚಾಲಕ ನಂದುಕೃಷ್ಣನನ್ನು ವಿಚಾರಣೆ ನಡೆಸಿ ಠಾಣಾ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!
ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!