
ಬೆಂಗಳೂರು(ಅ.09): ಐಎಂಎ ಹಗರಣ ಹಿನ್ನೆಲೆಯಲ್ಲಿ ಠೇವಣಿದಾರರಿಗೆ ಭಾಗಶಃ ಹಣವನ್ನು ಹಿಂದಿರುಗಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ನಡೆಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲ ವಿಜಯಕುಮಾರ್ ಪಾಟೀಲ್, ಠೇವಣಿದಾರರ ಆಧಾರ್ ಧೃಢೀಕರಣಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಒಮ್ಮೆ ದೃಢೀಕರಣ ಲಭ್ಯವಾದ ಬಳಿಕ ಠೇವಣಿದಾರರಿಗೆ ಭಾಗಶಃ ಹಣ ಹಿಂದಿರುಗಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ ಸಿಬಿಐ ಪರ ವಕೀಲ ಪ್ರಸನ್ನ ಕುಮಾರ್, ಕೊರೋನಾ ಹಾಗೂ ಲಾಕ್ಡೌನ್ ಕಾರಣಕ್ಕಾಗಿ ತನಿಖೆಯಲ್ಲಿ ಸ್ವಲ್ಪ ನಿಧಾನವಾಗಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಐಎಂಎ ಕೇಸ್: ಹಗರಣದಲ್ಲಿ ಇಬ್ಬರು ಪೊಲೀಸರು?
ಅದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, 2020ರ ಜೂ.30ರಂದು ಸಿಬಿಐ ಐದನೇ ತನಿಖಾ ಪ್ರಗತಿ ವರದಿ ಸಲ್ಲಿಸಿದೆ. ಅದಾಗಿ ಮೂರು ತಿಂಗಳು ಕಳೆದಿದೆ. ಆದ್ದರಿಂದ ಅ.20ರೊಳಗೆ ಆರನೇ ತನಿಖಾ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕೆಂದು ಸಿಬಿಐ ಪರ ವಕೀಲರಿಗೆ ಸೂಚಿಸಿತು.
ಅಲ್ಲದೆ, 2020ರ ಮಾ.5ರಂದು ನ್ಯಾಯಾಲಯ ನೀಡಿದ್ದ ಆದೇಶ ಪಾಲನೆ ಮಾಡಿದ್ದರ ಬಗ್ಗೆ ರಾಜ್ಯ ಸರ್ಕಾರ ಸಮಗ್ರ ಪ್ರಮಾಣಪತ್ರ ಸಲ್ಲಿಸಬೇಕು. ಪ್ರಕರಣದಲ್ಲಿ ಮೊದಲಿನಿಂದ ಅ.15ರವರೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಕ್ಷಮ ಪ್ರಾಧಿಕಾರ ವರದಿ ಸಲ್ಲಿಸಬೇಕು ಎಂದು ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಅ.21ಕ್ಕೆ ಮುಂದೂಡಿತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ