
ಬೆಂಗಳೂರು (ಮಾ.6): ಐತಿಹಾಸಿಕ ಕರಗ ಶಕ್ತ್ಯೋತ್ಸವವನ್ನು ಸುಸೂತ್ರವಾಗಿ ನಡೆಸಲು ಧರ್ಮರಾಯಸ್ವಾಮಿ ದೇವಸ್ಥಾನದ ಸುತ್ತಲಿನ ಪ್ರದೇಶಗಳಲ್ಲಿ ಹಾಗೂ ಕರಗ ಸಾಗುವ ಜಾಗಗಳನ್ನು ಉತ್ತಮ ಸ್ಥಿತಿಯಲ್ಲಿರಿಸುವಂತೆ ಕೇಂದ್ರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗುರುವಾರ ದೇವಸ್ಥಾನ ಹಾಗೂ ಕರಗ ಸಾಗುವ ಮಾರ್ಗಗಳು ಹಾಗೂ ಸುತ್ತಲಿನ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ರಸ್ತೆ ಹಾಗೂ ಒಳಚರಂಡಿಗಳ ದುರಸ್ತಿ, ಮ್ಯಾನ್ ಹೋಲ್ಗಳ ದುರಸ್ತಿ, ಶುಚಿತ್ವ ಕಾಪಾಡುವುದು, ಬ್ಲ್ಯಾಕ್ ಸ್ಪಾಟ್ ತೆರವುಗೊಳಿಸುವುದು, ರಸ್ತೆ ಅಕ್ಕಪಕ್ಕದಲ್ಲಿ ವಾರಸುದಾರರಿಲ್ಲದೆ ನಿಲ್ಲಿಸಲಾಗಿರುವ ವಾಹನಗಳ ತೆರವು, ಕಟ್ಟಡ ತ್ಯಾಜ್ಯ ತೆರವು, ಬೆಸ್ಕಾಂ ಅನುಪಯುಕ್ತ ಕಂಬಗಳನ್ನು ತೆರವುಗೊಳಿಸಬೇಕು ಎಂದು ಹೇಳಿದರು.
ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರ ಸೂಚನೆಯಂತೆ ಶಕ್ತ್ಯೋತ್ಸವ ಸ್ಥಳ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ದೀಪಲಂಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲು ಆಯುಕ್ತರು ಸೂಚಿಸಿದರು.
ಬ್ಲ್ಯಾಕ್ ಸ್ಪಾಟ್ ತೆರವು: ಕರಗ ಸಾಗುವ ಎಲ್ಲಾ ಮಾರ್ಗಗಳಲ್ಲಿ ಬ್ಲ್ಯಾಕ್ ಸ್ಪಾಟ್ಗಳನ್ನು ತೆರವುಗೊಳಿಸಬೇಕು. ಪುನಃ ಆ ಸ್ಥಳಗಳಲ್ಲಿ ಸಾರ್ವಜನಿಕರು ತ್ಯಾಜ್ಯ ಸುರಿಯದಂತೆ ಕ್ರಮ ವಹಿಸಬೇಕು. ಕರಗ ಸಾಗುವ ಮಾರ್ಗಗಳಲ್ಲಿನ ರಸ್ತೆ ಗುಂಡಿಗಳನ್ನು ತುರ್ತಾಗಿ ಮುಚ್ಚಲು ಕ್ರಮ ವಹಿಸುವಂತೆ ಅವರು ನಿರ್ದೇಶನ ನೀಡಿದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿಯವರು ಕೇಂದ್ರ ನಗರ ಪಾಲಿಕೆ ಅಧಿಕಾರಿಗಳೊಂದಿಗೆ ಸಹಕರಿಸಿ ಕರಗ ಶಕ್ತ್ಯೋತ್ಸವ ಕಾರ್ಯಕ್ರಮಕ್ಕೆ ಅಗತ್ಯವಿರುವ ಮೂಲಸೌಕರ್ಯಗಳ ಕುರಿತು ಪಾಲಿಕೆ ಅಧಿಕಾರಿಗಳೊಂದಿಗೆ ಸಂವಹನ ಸಾಧಿಸಿ ಚರ್ಚಿಸಿ ಕ್ರಮ ವಹಿಸುವಂತೆ ವ್ಯವಸ್ಥಾಪನಾ ಸಮಿತಿಯವರಿಗೆ ಆಯುಕ್ತರು ತಿಳಿಸಿದರು.
ಹಾಳಾಗಿರುವ ಮ್ಯಾನ್ ಹೋಲ್ಗಳನ್ನು ಜಲಮಂಡಳಿಯಿಂದ ತುರ್ತಾಗಿ ದುರಸ್ತಿ ಮಾಡಬೇಕು. ರಸ್ತೆಯಲ್ಲಿನ ಗ್ರೇಟಿಂಗ್ಗಳಲ್ಲಿ ನೀರಿನ ಬಾಟಲ್ಗಳು ಇತರ ಪ್ಲಾಸ್ಟಿಕ್ ತ್ಯಾಜ್ಯದಿಂದ ಮುಚ್ಚಿ ಹೋಗಿದ್ದು, ಇದರಿಂದ ನೀರು ಹರಿದು ಹೋಗಲು ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ತ್ಯಾಜ್ಯವನ್ನು ತೆರವುಗೊಳಿಸಲು ಆಯುಕ್ತರು ಸೂಚನೆ ನೀಡಿದರು.
ಈ ವೇಳೆ ಅಭಿವೃದ್ಧಿ ಅಪರ ಆಯುಕ್ತ ದಲ್ಜಿತ್ ಕುಮಾರ್, ಜಂಟಿ ಆಯುಕ್ತ ಹೇಮಂತ್ ಶರಣ್, ಧರ್ಮರಾಯ ಸ್ವಾಮಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ, ಜಲಮಂಡಳಿ, ಬೆಸ್ಕಾಂ ಹಾಗೂ ಮುಜರಾಯಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ